ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ ಅಹವಾಲು ಹೊತ್ತುಬಂದ ಜನರಿಗೆ ನಿರಾಸೆ ಉಂಟಾಗಿದ್ದು, ಅಧಿಕಾರಿಗಳಿಂದ ಪರಿಹಾರದ ಭರವಸೆ ದೊರೆತಿದೆ.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಮ್ಮಿಕೊಂಡಿರ ಪ್ರಜಾಸೇವಾ ಆಂದೋಲನವನ್ನು ಪಟ್ಟಣದ ವಾರ್ಡ್ ನಂ.12ರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ನಡೆದ ಹೋಬಳಿ ಮಟ್ಟದ ಆಂದೋಲನದಲ್ಲಿ ವಿವಿಧ ಗ್ರಾಮಗಳಿಂದ ಸಾರ್ವಜನಿಕರು ಆಗಮಿಸಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಮುಂದಿಟ್ಟರು.
ರಸ್ತೆ ದುರಸ್ತಿ, ಒಳಚರಂಡಿ ವ್ಯವಸ್ಥೆ, ಮಾಶಾಸನ, ವಿವಿಧ ಇಲಾಖೆಗಳ ಸೇವೆ, ತಾಲೂಕು ಮಟ್ಟದ ಕಚೇರಿಗಳ ಆರಂಭ ಸೇರಿದಂತೆ ಹಲವು ಬೇಡಿಕೆಗಳ ಕುರಿತು ಸಾರ್ವಜನಿಕರು ಮನವಿ ಸಲ್ಲಿಸಿದರು. ರೈತರ ಸಮಸ್ಯೆಗಳಿಗೂ ಅಧಿಕಾರಿಗಳು ಸ್ಪಂದಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಹಶೀಲ್ದಾರ್ ಸಂತೋಷ್ ಮ್ಯಾಗೇರಿ, “ಸಾರ್ವಜನಿಕರು ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ತಮ್ಮ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.
ಆದರೆ, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಕ್ಕೆ ಶಾಸಕ ಶಿವಾನಂದ ಪಾಟೀಲರು ಗೈರಾಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಯಿತು. ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರ ಮುಂದಿಟ್ಟು ಪರಿಹಾರ ಕೇಳುವ ನಿರೀಕ್ಷೆಯಿಂದ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನರಿಗೆ ಶಾಸಕರ ಅನುಪಸ್ಥಿತಿ ನಿರಾಸೆ ಮೂಡಿಸಿತು.
“ಪ್ರಜಾಸೌಧ ಹಾಗೂ ತಾಲೂಕು ಮಟ್ಟದ ಸರ್ಕಾರಿ ಕಚೇರಿಗಳನ್ನು ಆರಂಭಿಸುವುದು ಸೇರಿದಂತೆ ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕೋರಿ ಶಾಸಕರಿಗೆ ಮನವಿ ಸಲ್ಲಿಸಲು ಬಂದಿದ್ದೇವೆ. ಆದರೆ ಜನರ ಸಮಸ್ಯೆಗಳನ್ನು ಆಲಿಸಬೇಕಾದ ಶಾಸಕರೇ ಕಾರ್ಯಕ್ರಮಕ್ಕೆ ಗೈರಾಗಿರುವುದು ಜನಪ್ರತಿನಿಧಿತ್ವದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನರ ನೋವು-ನಲಿವುಗಳಿಗೆ ಸ್ಪಂದಿಸಬೇಕಾದವರು ಕಾರ್ಯಕ್ರಮಕ್ಕೇ ಬಾರದಿರುವುದು ಅತ್ಯಂತ ಬೇಸರದ ಸಂಗತಿ. ಜನರ ಸಮಸ್ಯೆಗಳಿಗೆ ಕಿವಿಗೊಡದಿದ್ದರೆ ಶಾಸಕರನ್ನು ಜನರ ಪ್ರತಿನಿಧಿ ಎನ್ನುವುದಾದರೂ ಹೇಗೆ?” ಎಂದು ಗ್ರಾಮ ಸ್ವರಾಜ್ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಪ್ರದೀಪ್ ಪಾಟೀಲ(ನಾಗರದಿನ್ನಿ) ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
“ಜನರ ಅಹವಾಲುಗಳನ್ನು ಸ್ವೀಕರಿಸುವ ಕಾರ್ಯಕ್ರಮಗಳು ಕೇವಲ ಅಧಿಕಾರಿಗಳ ಮಟ್ಟಕ್ಕೆ ಸೀಮಿತವಾಗದೆ, ಜನಪ್ರತಿನಿಧಿಗಳೂ ನೇರವಾಗಿ ಭಾಗವಹಿಸಿ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು” ಎಂಬ ಅಭಿಪ್ರಾಯವೂ ಸಾರ್ವಜನಿಕರಿಂದ ವ್ಯಕ್ತವಾಯಿತು.
ಇದನ್ನೂ ಓದಿದ್ದೀರಾ? ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಮುದ್ದೀನ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೀರೇಶ ಹಟ್ಟಿ, ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಸಂತೋಷ್ ಗಣಾಚಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.




