ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಿಂದ ಸತತ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ.ಎಸ್. ನಾಡಗೌಡ ಅವರಿಗೆ ಈ ಬಾರಿಯೂ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದಿರುವುದು ಕ್ಷೇತ್ರದ ಜನರು ಹಾಗೂ ಬೆಂಬಲಿಗರಲ್ಲಿ ತೀವ್ರ ನಿರಾಶೆ ಮೂಡಿಸಿದೆ.
ಅನುಭವ, ಹಿರಿತನ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಬಾರಿ ಸಚಿವ ಸ್ಥಾನ ಖಚಿತ ಎಂಬ ನಿರೀಕ್ಷೆ ಕಾರ್ಯಕರ್ತರು ಮತ್ತು ಸಾರ್ವಜನಿಕರಲ್ಲಿ ಇತ್ತು. ಆದರೆ ಸಚಿವ ಸಂಪುಟ ವಿಸ್ತರಣೆಯಲ್ಲಿಯೂ ಅವರ ಹೆಸರು ಕೈಬಿಟ್ಟಿರುವುದು ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಿದೆ.
ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ಸಿ.ಎಸ್. ನಾಡಗೌಡ ಪಕ್ಷದ ನಾಯಕರುಗಳ ನಿರ್ಧಾರದ ಕುರಿತು ಅಸಮಾಧಾನಗೊಂಡಿದ್ದು, ತಮ್ಮ ಆಪ್ತರೊಂದಿಗೆ ಸರಣಿ ಚರ್ಚೆಗಳನ್ನು ನಡೆಸುತ್ತಿದ್ದಾರೆ.
ಸರಳ, ಸಜ್ಜನ ಹಾಗೂ ಜನಸ್ನೇಹಿ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಸಿ.ಎಸ್. ನಾಡಗೌಡ, ಕ್ಷೇತ್ರದ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿದ್ದಾರೆ. ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಿ, ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುವ ನಾಯಕರಾಗಿ ಜನಮನ್ನಣೆ ಗಳಿಸಿದ್ದಾರೆ.
ಇನ್ನೊಂದೆಡೆ, ಮುದ್ದೇಬಿಹಾಳ ಕ್ಷೇತ್ರದ ಕಾರ್ಯಕರ್ತರು ಹಾಗೂ ಬೆಂಬಲಿಗರು, ಸತತ ಏಳು ಬಾರಿ ಗೆಲ್ಲಿಸಿ ಬಂದ ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಕ್ಷೇತ್ರಕ್ಕೆ ಸೂಕ್ತ ಗೌರವ ಸಿಗಲಿಲ್ಲ ಎಂಬ ಬೇಸರವೂ ಕಾರ್ಯಕರ್ತರಲ್ಲಿ ವ್ಯಕ್ತವಾಗುತ್ತಿದೆ.
ಶಾಸಕ ಸಿ.ಎಸ್. ನಾಡಗೌಡ ಅವರ ಮುಂದಿನ ರಾಜಕೀಯ ನಡೆ ಏನಾಗಲಿದೆ ಎಂಬುದರ ಕುರಿತು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ. ಪಕ್ಷದ ನಾಯಕತ್ವ ಅವರ ಅಸಮಾಧಾನವನ್ನು ಶಮನಗೊಳಿಸಲು ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಬೇಕಿದೆ.




