ಕೃಷಿ ಇಲಾಖೆ ಕೃಷಿ ಅಧಿಕಾರಿ (ಎಒ) ಹಾಗೂ ಸಹಾಯಕ ಕೃಷಿ ಅಧಿಕಾರಿ (ಎಎಒ) ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿನ ದೋಷಗಳನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಕೃಷಿ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳ ಹೋರಾಟಕ್ಕೆ ಎಐಡಿವೈಒ (AIDYO) ರಾಜ್ಯ ಕಾರ್ಯದರ್ಶಿ ಸಿದ್ಧಲಿಂಗ ಬಾಗೇವಾಡಿ ಬೆಂಬಲ ವ್ಯಕ್ತಪಡಿಸಿದರು.
ವಿಜಯಪುರದ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜಿನ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೇ 30, 2026ರಂದು ಪ್ರಕಟಿಸಿದ್ದ ಅಧಿಸೂಚನೆಯನ್ನು ನಂತರ ಎರಡು ಬಾರಿ ತಿದ್ದುಪಡಿ ಮಾಡಿರುವ ಕ್ರಮ ಪ್ರಶ್ನಾರ್ಹವಾಗಿದೆ ಎಂದು ಹೇಳಿದರು.
“ತಿದ್ದುಪಡಿ ಅಧಿಸೂಚನೆಯಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಮಾನ್ಯತೆ ಪಡೆಯದ ಖಾಸಗಿ ರೈ ಟೆಕ್ನಾಲಜಿ ಯುನಿವರ್ಸಿಟಿಯ ಕೃಷಿ ಪದವೀಧರರು ಹಾಗೂ ಬಿ.ಇ. (ಬಯೋಟೆಕ್ನಾಲಜಿ) ಪದವೀಧರರಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿರುವುದು ನ್ಯಾಯಸಮ್ಮತವಲ್ಲ” ಎಂದು ಅವರು ಆಕ್ಷೇಪಿಸಿದರು.
“ಹಲವು ವರ್ಷಗಳ ಬಳಿಕ ಕೃಷಿ ಇಲಾಖೆಯಲ್ಲಿ 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ನಡೆಯುತ್ತಿರುವ ಸಂದರ್ಭದಲ್ಲಿ, 2022ರಲ್ಲಿ ರಾಜ್ಯ ಸರ್ಕಾರ ಪ್ರಕಟಿಸಿದ್ದ ವೃಂದ ಮತ್ತು ನೇಮಕಾತಿ (ಸಿ&ಆರ್) ಗೆಜೆಟ್ನಲ್ಲಿ ಇಲ್ಲದಿದ್ದ ಅರ್ಹತೆಗಳನ್ನು ಏಕಾಏಕಿ ಸೇರಿಸಿರುವುದು ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಿದ ಸಾವಿರಾರು ಪದವೀಧರರಿಗೆ ಅನ್ಯಾಯವಾಗಿದೆ” ಎಂದು ಆರೋಪಿಸಿದರು.
“ನೇಮಕಾತಿ ಪ್ರಕ್ರಿಯೆ ಆರಂಭವಾದ ಬಳಿಕ ಅಧಿಸೂಚನೆಯಲ್ಲಿ ತಿದ್ದುಪಡಿ ಮಾಡಿರುವುದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಉಲ್ಲಂಘನೆಯಾಗಿದ್ದು, ನೇಮಕಾತಿಯ ಸ್ಥಾಪಿತ ವಿಧಾನಗಳು ಹಾಗೂ ನಿಯಮಾವಳಿಗಳಿಗೆ ವಿರುದ್ಧವಾಗಿದೆ. ಸರ್ಕಾರವೇ 2022ರಲ್ಲಿ ಹೊರಡಿಸಿದ್ದ ಗೆಜೆಟ್ನ ನಿಯಮಗಳನ್ನು ಹಾಗೂ ತಜ್ಞರ ಸಮಿತಿ ಶಿಫಾರಸುಗಳನ್ನು ಉಲ್ಲಂಘಿಸಿರುವುದು ಗಂಭೀರ ವಿಚಾರವಾಗಿದೆ” ಎಂದು ಅವರು ಹೇಳಿದರು.
ಸರ್ಕಾರವು ಕೂಡಲೇ ನೇಮಕಾತಿ ಅಧಿಸೂಚನೆಯಲ್ಲಿನ ಗೊಂದಲಗಳನ್ನು ನಿವಾರಿಸಿ, ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡಬೇಕು. ಜೊತೆಗೆ ಕೃಷಿ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಿದ್ಧಲಿಂಗ ಬಾಗೇವಾಡಿ ಆಗ್ರಹಿಸಿದರು.




