ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ಶ್ರೀ ಶಾರದಾಂಬಾ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ನಡೆದ ಸಿವಿಲ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಶೀಟ್ಗಳ ಕ್ರಮ ಸಂಖ್ಯೆಯಲ್ಲಿ ವ್ಯತ್ಯಾಸವಿರುವುದಾಗಿ ಆರೋಪಿಸಿ ಹಲವಾರು ಅಭ್ಯರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಪ್ರಶ್ನೆಪತ್ರಿಕೆ ಮತ್ತು ಒಎಂಆರ್ ಶೀಟ್ಗಳ ಸಂಖ್ಯೆಯಲ್ಲಿ ಹೊಂದಾಣಿಕೆ ಇಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದ 312 ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಬಂದು, ಬಳಿಕ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಒತ್ತಾಯಿಸಿದರು. ಆದರೆ ಪರೀಕ್ಷಾ ನಿಯಮಾವಳಿಯಂತೆ ಒಮ್ಮೆ ಕೇಂದ್ರದಿಂದ ಹೊರಬಂದ ಅಭ್ಯರ್ಥಿಗಳಿಗೆ ಮರುಪ್ರವೇಶಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಿಬ್ಬಂದಿ ಹಾಗೂ ಪೊಲೀಸರು ನಿರಾಕರಿಸಿದರು.
ಇದರಿಂದ ಆಕ್ರೋಶಗೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಗೇಟ್ ಮುರಿದು ಒಳ ಪ್ರವೇಶಿಸಲು ಯತ್ನಿಸಿದ ವೇಳೆ ನೂಕುನುಗ್ಗಲು ಉಂಟಾಯಿತು. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಭ್ಯರ್ಥಿಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಪ್ರತಿಭಟನೆ ನಡೆಸಿದರು. ಅಭ್ಯರ್ಥಿಗಳೊಂದಿಗೆ ಬಂದಿದ್ದ ಪೋಷಕರು ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು.
ಘಟನೆ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ. ಆನಂದ್ ಕೆ, “ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಶೀಟ್ಗಳನ್ನು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ತಂದು, ಪರೀಕ್ಷಾರ್ಥಿಗಳ ಸಮ್ಮುಖದಲ್ಲಿಯೇ ನಿಯಮಾನುಸಾರ ತೆರೆಯಲಾಗಿದೆ. ಪ್ರಶ್ನೆಪತ್ರಿಕೆ ಮತ್ತು ಒಎಂಆರ್ ಶೀಟ್ ಕ್ರಮ ಸಂಖ್ಯೆಗಳು ಬೇರೆಬೇರೆ ಇದ್ದವು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ ಪರೀಕ್ಷೆ ಬರೆಯದೆ ಕೇಂದ್ರದಿಂದ ಹೊರನಡೆದಿದ್ದಾರೆ” ಎಂದು ತಿಳಿಸಿದರು.
ಇದನ್ನೂ ಓದಿದ್ದೀರಾ? ವಿಜಯನಗರ | ಪೊಲೀಸರು ವ್ಯಕ್ತಿಗೆ ಮನಸೋ ಇಚ್ಛೆ ಹೊಡೆದು ಕೊಂದ ಆರೋಪ: ಲಾಕಪ್ ಡೆತ್ ಪ್ರಕರಣ ದಾಖಲು
“ಪರೀಕ್ಷೆ ಪೂರ್ಣಗೊಳ್ಳುವವರೆಗೆ ಅಭ್ಯರ್ಥಿಗಳು ಕೇಂದ್ರದಿಂದ ಹೊರಗೆ ಹೋಗಬಾರದು ಎಂಬುದು ನಿಯಮವಾಗಿದೆ. ಒಮ್ಮೆ ಹೊರಗೆ ಹೋದ ಬಳಿಕ ಮರುಪ್ರವೇಶ ನೀಡಿ ಪರೀಕ್ಷೆ ಬರೆಯಲು ಅವಕಾಶ ನೀಡುವುದು ಪರೀಕ್ಷಾ ನಿಯಮಾವಳಿಗೆ ವಿರುದ್ಧವಾಗಿರುವುದರಿಂದ ಅವಕಾಶ ನೀಡಲಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಇದೇ ಗೊಂದಲದ ನಡುವೆಯೂ ತಿಕೋಟಾ ಪರೀಕ್ಷಾ ಕೇಂದ್ರದಲ್ಲಿ 120 ಅಭ್ಯರ್ಥಿಗಳು ಯಾವುದೇ ಅಡಚಣೆಯಿಲ್ಲದೆ ಪರೀಕ್ಷೆ ಬರೆದಿದ್ದಾರೆ.




