ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರ, ವಿದ್ಯಾರ್ಥಿವೇತನದ ತ್ವರಿತ ಬಿಡುಗಡೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಗಾಂಧಿ ಸರ್ಕಲ್ನಿಂದ ಅಂಬೇಡ್ಕರ್ ಸರ್ಕಲ್ವರೆಗೆ ರ್ಯಾಲಿ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ, “ರಾಜ್ಯದಾದ್ಯಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಶೈಕ್ಷಣಿಕ ಸಮಸ್ಯೆಗಳ ಕುರಿತು ಸರ್ಕಾರ ಮತ್ತು ಅಧಿಕಾರಿಗಳ ಗಮನ ಸೆಳೆಯುವ ಉದ್ದೇಶದಿಂದ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.
“ವಿದ್ಯಾರ್ಥಿಗಳಿಗೆ ಅಗತ್ಯವಾದ ಪ್ರಾಯೋಗಿಕ ತರಬೇತಿಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಹಲವಾರು ಶಿಕ್ಷಣ ಸಂಸ್ಥೆಗಳಲ್ಲಿ ನಿಯಮಬಾಹಿರವಾಗಿ ಹೆಚ್ಚಿನ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಆರೋಪಿಸಿದರು.
“ಕಳೆದ ಎರಡು-ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಗಳು ಸಮರ್ಪಕವಾಗಿ ಬಿಡುಗಡೆ ಆಗದಿರುವುದು ಆಡಳಿತ ವೈಫಲ್ಯದ ಸಂಕೇತ” ಎಂದು ಅಭಿಪ್ರಾಯಿಸಿದರು.
“ಅನೇಕ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳಲ್ಲಿ ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಬೋರ್ಡ್, ಸುಸಜ್ಜಿತ ಗ್ರಂಥಾಲಯ ಸೇರಿದಂತೆ ಮೂಲಭೂತ ಶೈಕ್ಷಣಿಕ ಸೌಲಭ್ಯಗಳ ಕೊರತೆ ಇದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು” ದೂರಿದರು.
ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳೊಂದಿಗೆ, ವಿಶೇಷವಾಗಿ ಮಹಿಳಾ ವಿದ್ಯಾರ್ಥಿನಿಯರೊಂದಿಗೆ ಅವಹೇಳನಕಾರಿ ಹಾಗೂ ಅಸಭ್ಯವಾಗಿ ವರ್ತಿಸಲಾಗುತ್ತಿರುವುದು ಖಂಡನೀಯವಾಗಿದೆ.
“ಪರೀಕ್ಷೆಗಳು ಸಕಾಲದಲ್ಲಿ ನಡೆಯದೇ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯಲ್ಲಿ ಸಿಲುಕಿದ್ದು, ಸರಿಯಾದ ಮಾರ್ಗದರ್ಶನದ ಕೊರತೆಯಿಂದ ಅನೇಕ ವಿದ್ಯಾರ್ಥಿಗಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ” ಎಂದು ಹೇಳಿದರು.
ಇದಲ್ಲದೆ, ಆಂತರಿಕ ಅಂಕಗಳು ಹಾಗೂ ಪ್ರಾಯೋಗಿಕ ಪರೀಕ್ಷೆಗಳ ಮೌಲ್ಯಮಾಪನದಲ್ಲಿ ಪಕ್ಷಪಾತ ನಡೆಯುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.
“ವಿದ್ಯಾರ್ಥಿಗಳ ಈ ಎಲ್ಲಾ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ವಿಶೇಷವಾಗಿ ಬಾಕಿ ಉಳಿದಿರುವ ವಿದ್ಯಾರ್ಥಿವೇತನಗಳನ್ನು ತಕ್ಷಣ ಬಿಡುಗಡೆ ಮಾಡಬೇಕು, ಇಲ್ಲವೇ ಮುಂಬರುವ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು, ವಿವಿಧ ವಿದ್ಯಾರ್ಥಿ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಸದಸ್ಯರಾದ ಗೌಡಪ್ಪ ಬಡಿಗೇರ್, ಅಮೃತ, ಸುನಿಲ್ ಪ್ರತಾಪ ತೊಳನೂರ, ಮಂಜುನಾಥ್ ಕವಳಿ, ಆದರ್ಶ್, ಸಂದೇಶ್ ಕುಮಟಗಿ, ಭೀಮು ಬಡಿಗೇರ, ನಿಂಗು ವಾಲಿಕಾರ, ಸಾಯಬಣ್ಣ ನಾಯಕೋಡಿ, ದರ್ಶನ್, ಸಚಿನ್, ಗಣೇಶ್, ಪಾರ್ವತಿ ಬಿರಾದಾರ, ವಿದ್ಯಾ ಹಂಡೇಕರ್, ಸ್ನೇಹಾ, ಭಾಗ್ಯ, ಉಜ್ಮಾ, ಕೋಮಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.




