ರಾಜ್ಯದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಒಂದೇ ಒಂದು ಸಚಿವ ಸ್ಥಾನ ನೀಡದಿರುವುದು ಕಾಂಗ್ರೆಸ್ನ ಮಹಿಳಾ ವಿರೋಧಿ ಧೋರಣೆಯನ್ನು ಬಯಲಿಗೆಳೆದಿದೆ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಕಾಂಗ್ರೆಸ್ ಅಧಿಕಾರ ಹಂಚಿಕೆಯಲ್ಲಿ ಮಹಿಳೆಯರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಟೀಕಿಸಿದರು. ವಾಲ್ಮೀಕಿ ನಿಗಮ ಹಗರಣದಲ್ಲಿ ರಾಜೀನಾಮೆ ನೀಡಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವುದು ಭ್ರಷ್ಟಾಚಾರಕ್ಕೆ ರಾಜಕೀಯ ಆಶ್ರಯ ನೀಡಿದಂತಾಗಿದೆ” ಎಂದು ಆರೋಪಿಸಿದರು.
“ವಿಜಯಪುರ ಜಿಲ್ಲೆಗೆ ಮತ್ತೊಮ್ಮೆ ಹೆಚ್ಚುವರಿ ಸಚಿವ ಸ್ಥಾನ ನೀಡದೆ ನಿರ್ಲಕ್ಷ್ಯ ವಹಿಸಿರುವುದು ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ, ಉತ್ತರ ಕರ್ನಾಟಕಕ್ಕೂ ಸಮರ್ಪಕ ಪ್ರಾತಿನಿಧ್ಯ ಸಿಕ್ಕಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಪ್ರಮುಖ ಹುದ್ದೆಗಳ ಆಯ್ಕೆಯಲ್ಲೂ ಹೈಕಮಾಂಡ್ ಹಸ್ತಕ್ಷೇಪ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದ ಭೋಗೇಶ್ ಸೋಲಾಪುರ್, “ಆಡಳಿತದಲ್ಲಿ ಮಹಿಳೆಯರಿಗೆ, ಪ್ರಾದೇಶಿಕ ಸಮಾನತೆಗೆ ಹಾಗೂ ಪಾರದರ್ಶಕ ಆಡಳಿತಕ್ಕೆ ನ್ಯಾಯ ಒದಗಿಸಬೇಕು” ಎಂದು ಸರ್ಕಾರವನ್ನು ಆಗ್ರಹಿಸಿದರು.




