ಮುಂಗಾರು ಮಳೆಯ ಅಭಾವದಿಂದ ಜಮೀನಿನಲ್ಲಿ ಬಿತ್ತಿದ್ದ ಹತ್ತಿ ಬೀಜಗಳು ಸರಿಯಾಗಿ ಮೊಳಕೆ ಬಾರದ ಹಿನ್ನೆಲೆಯಲ್ಲಿ ಮನನೊಂದ ಯುವ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಗ್ರಾಮದ ಶಿವರಾಜ (24) ಮೃತ ರೈತ ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಹತ್ತಿ ಬೆಳೆ ಮಳೆಯ ಕೊರತೆಯಿಂದ ಹಾನಿಗೊಳಗಾಗಿದ್ದರಿಂದ ಶಿವರಾಜ ತೀವ್ರ ನಿರಾಶೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜಮೀನಿನಲ್ಲೇ ಕ್ರಿಮಿನಾಶಕ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ.
ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿದ್ದೀರಾ? ಕಲಬುರಗಿ | ಉಪಹಾರ ಸೇವಿಸಿ ಬಳಿಕ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಶಿವರಾಜ ಅವರು ಕೈಸಾಲ ಹಾಗೂ ಬ್ಯಾಂಕ್ನಿಂದ ಸಾಲ ಪಡೆದಿದ್ದರು ಎನ್ನಲಾಗಿದೆ. ಈ ಕುರಿತು ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




