ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಇ-ಸ್ವತ್ತು 2.0 ಹಾಗೂ ಇ-ಖಾತಾ ವ್ಯವಸ್ಥೆಯ ತಾಂತ್ರಿಕ ದೋಷಗಳಿಂದ ಗ್ರಾಮೀಣ ಭಾಗದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿ ಶೀಘ್ರ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಗುರುಮಠಕಲ್ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ ಮೂಲಕ ಶಾಸಕ ಶರಣಗೌಡ ಕಂದಕೂರ ಅವರಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿ ಮಾತನಾಡಿದ ತಾಲೂಕು ಅಧ್ಯಕ್ಷ ನಾಗೇಶ್ ಗದ್ದಿಗಿ, ಇ-ಖಾತಾ ವ್ಯವಸ್ಥೆ ಜಾರಿಯಾದ ಬಳಿಕ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಳೆದ ಹಲವು ತಿಂಗಳುಗಳಿಂದ ಅರ್ಜಿಗಳ ವಿಲೇವಾರಿ ವಿಳಂಬವಾಗಿದ್ದು, ಸಾವಿರಾರು ಅರ್ಜಿಗಳು ಬಾಕಿ ಉಳಿದಿವೆ. ಇದರಿಂದ ಸಾರ್ವಜನಿಕರು ಪ್ರತಿನಿತ್ಯ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಅಲೆದಾಡುವಂತಾಗಿದೆ ಎಂದು ಆರೋಪಿಸಿದರು.
ನಿರಂತರ ಸರ್ವರ್ ಡೌನ್ ಆಗುವುದು, ಲಾಗಿನ್ ಸಮಸ್ಯೆ, ಜಿಪಿಎಸ್ ಲೊಕೇಶನ್ ದೋಷ, ಡೇಟಾ ಅಪ್ಲೋಡ್ ವಿಫಲವಾಗುವುದು ಹಾಗೂ ಅರ್ಜಿ ಸಲ್ಲಿಸುವ ಹಂತದಲ್ಲೇ ತಂತ್ರಾಂಶ ಸ್ಥಗಿತಗೊಳ್ಳುವುದು ಪ್ರಮುಖ ಸಮಸ್ಯೆಗಳಾಗಿವೆ. ಇದರಿಂದ ಆಸ್ತಿ ಖರೀದಿ–ಮಾರಾಟ, ಬ್ಯಾಂಕ್ ಸಾಲ ಪಡೆಯುವುದು ಹಾಗೂ ಶಿಕ್ಷಣ, ವೈದ್ಯಕೀಯ ಮತ್ತು ವಿವಾಹದಂತಹ ತುರ್ತು ಅಗತ್ಯಗಳಿಗೆ ಆಸ್ತಿ ದಾಖಲೆಗಳನ್ನು ಬಳಸಿಕೊಳ್ಳಲು ಸಾಧ್ಯವಾಗದೆ ಬಡ ಹಾಗೂ ಮಧ್ಯಮ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.
ಇ-ಸ್ವತ್ತು 2.0 ತಂತ್ರಾಂಶದ ಸರ್ವರ್ ಸಾಮರ್ಥ್ಯವನ್ನು ಹೆಚ್ಚಿಸಿ ದೋಷಗಳನ್ನು ಶಾಶ್ವತವಾಗಿ ಸರಿಪಡಿಸಬೇಕು, ಬಾಕಿ ಇರುವ ಅರ್ಜಿಗಳ ಶೀಘ್ರ ವಿಲೇವಾರಿಗೆ ವಿಶೇಷ ಅಭಿಯಾನ ನಡೆಸಬೇಕು ಹಾಗೂ ಸಮಸ್ಯೆ ಬಗೆಹರಿಯುವವರೆಗೆ ಪರ್ಯಾಯ ಅಥವಾ ಸರಳ ನೋಂದಣಿ ವ್ಯವಸ್ಥೆಗೆ ಅವಕಾಶ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರ ಗಮನಕ್ಕೆ ತಂದು ಶೀಘ್ರ ಪರಿಹಾರ ಒದಗಿಸುವಂತೆ ಶಾಸಕರಿಗೆ ಮನವಿ ಮಾಡಲಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಉಪಹಾರ ಸೇವಿಸಿ ಬಳಿಕ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಕಾಕಲವರ, ನರಸಿಂಹಲು ಗಂಗನೋಳ, ಕಾಶಪ್ಪ ಬೋಯ, ರಾಮುಲು ಕೋಡಿಗಂಟಿ, ಬಿ.ಎಸ್. ತಲಾರಿ, ಆಯಾಜ್ ಅಲಿ, ರವಿಕುಮಾರ್ ವಾರದ, ಅಂಜಿ ಮಂಗಮೋಳ, ಸಿದ್ದಪ್ಪ ಮದ್ದೂರು, ಬನ್ನು ಮಡುಗು, ಸಾಬು ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.




