ಮಹಿಳಾ ಮೀಸಲಾತಿಯನ್ನು ಜನಗಣತಿ ಹಾಗೂ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ಬೇರ್ಪಡಿಸಿ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಮೀಸಲಾತಿಯನ್ನು ಯಾವುದೇ ವಿಳಂಬವಿಲ್ಲದೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಮಹಿಳಾ ಮೀಸಲಾತಿ ಒಕ್ಕೂಟ ವತಿಯಿಂದ ಬುಧವಾರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿದ ಬಳಿಕ ಒಕ್ಕೂಟದ ಪದಾಧಿಕಾರಿಗಳು ಮಾತನಾಡಿ, ‘ಮಹಿಳಾ ಮೀಸಲಾತಿ ಕಾಯ್ದೆ ಎಂದು ಕರೆಯಲಾಗುವ ಸಂವಿಧಾನದ 106ನೇ ತಿದ್ದುಪಡಿ ಕಾಯ್ದೆ-2023 ಮಹಿಳೆಯರ ರಾಜಕೀಯ ಪ್ರಾತಿನಿಧ್ಯವನ್ನು ಖಚಿತಪಡಿಸುವ ಐತಿಹಾಸಿಕ ಹೆಜ್ಜೆಯಾಗಿದ್ದರೂ, ಅದರ ಅನುಷ್ಠಾನವನ್ನು ಮುಂದಿನ ಜನಗಣತಿ ಹಾಗೂ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಗೆ ಜೋಡಿಸಿರುವುದರಿಂದ ಮಹಿಳೆಯರ ಸಾಂವಿಧಾನಿಕ ಹಕ್ಕು ವಿಳಂಬವಾಗುತ್ತಿದೆ’ ಎಂದು ಹೇಳಿದರು.
‘ಸುಮಾರು ಮೂರು ದಶಕಗಳಿಂದ ಮಹಿಳೆಯರು ರಾಜಕೀಯ ಮೀಸಲಾತಿಗಾಗಿ ಕಾಯುತ್ತಿದ್ದು, 1996ರಲ್ಲಿ ಮಂಡನೆಯಾದ ಮೂಲ ಮಹಿಳಾ ಮೀಸಲಾತಿ ಮಸೂದೆ ಹಾಗೂ 2010ರಲ್ಲಿ ರಾಜ್ಯಸಭೆ ಅಂಗೀಕರಿಸಿದ್ದ ಮಸೂದೆಯಲ್ಲಿ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಷರತ್ತುಗಳಿರಲಿಲ್ಲ. ಬಳಿಕ ಸೇರಿಸಲಾದ ಈ ಷರತ್ತುಗಳನ್ನು ತೆಗೆದುಹಾಕಿ ಅಗತ್ಯ ಸಾಂವಿಧಾನಿಕ ತಿದ್ದುಪಡಿ ತರಬೇಕು. ಮುಂಬರುವ ಚುನಾವಣೆಗಳಿಂದಲೇ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಬೇಕು’ ಎಂದು ಅವರು ಒತ್ತಾಯಿಸಿದರು.
‘ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ಮಹಿಳಾ ಮೀಸಲಾತಿಯನ್ನು ಬೇರ್ಪಡಿಸುವುದು, ಅದಕ್ಕೆ ಅಗತ್ಯವಾದ ಸಾಂವಿಧಾನಿಕ ತಿದ್ದುಪಡಿ ತರುವುದು ಹಾಗೂ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಮೀಸಲಾತಿಯನ್ನು ತಕ್ಷಣ ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು’ ಎಂದು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಬಸ್ ಪಲ್ಟಿ: 34ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಈ ಸಂದರ್ಭದಲ್ಲಿ ರಾಷ್ಟ್ರೀಯ ಮಹಿಳಾ ಮೀಸಲಾತಿ ಒಕ್ಕೂಟದ ಕಲಬುರಗಿ ಜಿಲ್ಲಾ ಅಧ್ಯಕ್ಷೆ ಹಾಗೂ ಯಾದಗಿರಿ ಪ್ರಭಾರಿ ಪದ್ಮನಿ ಕಿರಣಗಿ, ಉಪಾಧ್ಯಕ್ಷೆ ಸುಮಿತ್ರ ಗೋಡಿಕರ್, ಯರಗೋಳ ಘಟಕದ ಅಧ್ಯಕ್ಷೆ ಪದ್ಮಾವತಿ, ಮೀನಾಕ್ಷಿ, ವಿಜಯಲಕ್ಷ್ಮಿ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಇದ್ದರು.




