ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ಹಾಗೂ ಮಕ್ಕಳ ಹಕ್ಕುಗಳು, ಸುರಕ್ಷತೆ ಮತ್ತು ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವತಿಯಿಂದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ಭಾನುವಾರ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರ್ಕರ್, ‘ಮಕ್ಕಳ ಸುರಕ್ಷತೆ ಮತ್ತು ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆಯದಂತೆ ಕುಟುಂಬ, ಶಾಲೆ ಹಾಗೂ ಸಮಾಜದ ಎಲ್ಲರೂ ಜಾಗರೂಕರಾಗಿ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.
‘ಮಕ್ಕಳ ಮೇಲೆ ದೈಹಿಕ, ಮಾನಸಿಕ ಹಾಗೂ ಲೈಂಗಿಕ ದೌರ್ಜನ್ಯ ಸೇರಿದಂತೆ ಯಾವುದೇ ರೀತಿಯ ಶೋಷಣೆ ನಡೆಯದಂತೆ ತಡೆಯುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಪೋಕ್ಸೊ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಮಕ್ಕಳಿಗೆ ಯಾವುದೇ ಅಪಾಯ ಎದುರಾದರೆ ತಕ್ಷಣವೇ ಪೋಷಕರು, ಶಿಕ್ಷಕರು ಅಥವಾ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮಕ್ಕಳು ಜಾಗೃತಿ ಗೀತೆ, ಕಿರು ನಾಟಕ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯವಿವಾಹ, ಮಕ್ಕಳ ಹಕ್ಕುಗಳು ಹಾಗೂ ಸುರಕ್ಷತೆ ಕುರಿತು ಅರಿವು ಮೂಡಿಸಿದರು. ಮಕ್ಕಳ ಪ್ರದರ್ಶನಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಯಿತು.
ಉತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಬಹುಮಾನ ವಿತರಿಸಿ ಸತ್ಕರಿಸಲಾಯಿತು. ಇದೇ ಸಂದರ್ಭದಲ್ಲಿ ಜಾಸ್ವ ಕಾರ್ಯಕ್ರಮದ ಸಂಯೋಜಕರು ಚೆನ್ನೈನಿಂದ ಆಗಮಿಸಿ ಮಕ್ಕಳೊಂದಿಗೆ ಸಂವಾದ ನಡೆಸಿ, ಮಕ್ಕಳ ಸುರಕ್ಷತೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮೋಹನ್ ಕುಮಾರ್ ಹೊಸಮನಿ, ಸೌಂದರ್ಯ, ಶರಣಪ್ಪ ಟೀಪ್ಪೆದರ್, ಅಯ್ಯಪ್ಪ ಆಟೋ, ನಿಕಾಯಲ್, ರಾಬರ್ಟ್ ದೊಡ್ಡಮನಿ, ಮಾರುತಿ ಚವಾಣ್, ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಸಿಬ್ಬಂದಿ, ಮಕ್ಕಳು, ಪೋಷಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಇದನ್ನು ಓದಿದ್ದೀರಾ? ಕಲಬುರಗಿ | ₹10 ಲಕ್ಷ ವೆಚ್ಚದ ಸಿಸಿ ರಸ್ತೆ ಉದ್ಘಾಟಿಸಿದ ಶಾಸಕ ಅಲ್ಲಮಪ್ರಭು ಪಾಟೀಲ್
ಕಾರ್ಯಕ್ರಮವು ಮಕ್ಕಳ ಸುರಕ್ಷಿತ, ಆರೋಗ್ಯಕರ ಹಾಗೂ ಸಂತೋಷದಾಯಕ ಬಾಲ್ಯ ನಿರ್ಮಾಣಕ್ಕೆ ಸಮಾಜದ ಎಲ್ಲರೂ ಕೈಜೋಡಿಸಬೇಕೆಂಬ ಸಂದೇಶದೊಂದಿಗೆ ಯಶಸ್ವಿಯಾಗಿ ನಡೆಯಿತು.




