ಯಾದಗಿರಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ ಸಮರ್ಪಕ ಸಾರಿಗೆ ವ್ಯವಸ್ಥೆಯ ಕೊರತೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಗತ್ಯಕ್ಕೆ ತಕ್ಕಷ್ಟು ಬಸ್ಗಳು ಇಲ್ಲದ ಕಾರಣ ಜನರು ತುಂಬಿ ತುಳುಕುವ ಬಸ್ಗಳಲ್ಲಿ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಪಘಾತಗಳ ಭೀತಿ ಹೆಚ್ಚುತ್ತಿದೆ.
ಐನಾಪುರ, ಯಕ್ತಾಪುರ, ಚಿಂಚೋಳಿ, ವಂದಗನೂರ, ಆಲ್ದಾಳ, ಕಾಚಾಪುರ, ತಳ್ಳಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ಬಸ್ ಸೇವೆ ಅತೀ ಕಡಿಮೆಯಾಗಿದೆ. ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದರೂ, ಹೆಚ್ಚುವರಿ ಬಸ್ಗಳನ್ನು ನಿಯೋಜಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
‘ಪ್ರತಿದಿನ ಒಂದೇ ಬಸ್ಗಾಗಿ ವಿದ್ಯಾರ್ಥಿಗಳು ಕಾಯಬೇಕಾಗುತ್ತಿದ್ದು, ಸೀಟು ಸಿಗದ ಕಾರಣ ಹಲವರು ನಿಂತುಕೊಂಡೇ ಪ್ರಯಾಣಿಸುತ್ತಿದ್ದಾರೆ. ಕೆಲವೊಮ್ಮೆ ಬಸ್ಗಳಲ್ಲಿ ಅತಿಯಾದ ಜನಸಂದಣಿ ಉಂಟಾಗಿ ಸುರಕ್ಷತೆಗೂ ಧಕ್ಕೆ ಉಂಟಾಗುತ್ತಿದೆ’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
“ಶಾಲಾ ಸಮಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುತ್ತದೆ. ಆದರೆ ಆ ಸಮಯದಲ್ಲಿ ಹೆಚ್ಚುವರಿ ಬಸ್ ಇಲ್ಲದ ಕಾರಣ ಪರದಾಡಬೇಕಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕನಿಷ್ಠ ಎರಡು ಹೆಚ್ಚುವರಿ ಬಸ್ಗಳನ್ನು ಓಡಿಸಬೇಕು” ಎಂದು ವಿದ್ಯಾರ್ಥಿ ಭೀಮರಾಯ ಕುಂಬಾರ ಒತ್ತಾಯಿಸಿದ್ದಾರೆ.
‘ಇತ್ತೀಚೆಗೆ ನಡೆದ ಬಸ್ ಅಪಘಾತದ ಬಳಿಕ ಪ್ರಯಾಣಿಕರ ಸುರಕ್ಷತೆ ಕುರಿತ ಚರ್ಚೆ ಮತ್ತಷ್ಟು ಗಂಭೀರವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸಾರಿಗೆ ಇಲಾಖೆ ಗಡಿಗ್ರಾಮಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಸಾಬೀತು; ಆರೋಪಿಗೆ 20 ವರ್ಷ ಶಿಕ್ಷೆ
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸಾರ್ವಜನಿಕರ ಸುರಕ್ಷಿತ ಸಂಚಾರದ ಹಿತದೃಷ್ಟಿಯಿಂದ ಹೆಚ್ಚುವರಿ ಬಸ್ ಸೇವೆ ಆರಂಭಿಸಿ, ಸಮಯಕ್ಕೆ ಸರಿಯಾಗಿ ಬಸ್ಗಳನ್ನು ಓಡಿಸುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಈ ಭಾಗದ ಜನರ ಪ್ರಮುಖ ಬೇಡಿಕೆಯಾಗಿದೆ.




