ಮೂಲಸೌಕರ್ಯಗಳಿಂದ ವಂಚಿತವಾಗಿರುವ ಮರಂಕಲ್ ಗ್ರಾಮಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಶಹಾಪುರ ತಾಲೂಕು ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
‘ಚಟ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂಕಲ್ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿಗಳು ಮತ್ತು ಕೊಳಚೆ ನೀರು ತುಂಬಿಕೊಂಡಿದ್ದು, ರೈತರು, ಮಹಿಳೆಯರು ಹಾಗೂ ಮಕ್ಕಳು ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ತಕ್ಷಣ ತಾತ್ಕಾಲಿಕವಾಗಿ ಮಣ್ಣು (ಮರಂ) ಹಾಕಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದೇ ವೇಳೆ ಗ್ರಾಮದಲ್ಲಿ ಸಾಮೂಹಿಕ ಶೌಚಾಲಯ ನಿರ್ಮಾಣ ಮಾಡಬೇಕು ಹಾಗೂ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿಯಿಂದ ಅರ್ಜಿ ಆಹ್ವಾನಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು’ ಎಂದು ಒತ್ತಾಯಿಸಿದರು.

‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಎಂಎನ್ಆರ್ಇಜಿಎಸ್) ಕೆಲಸ ಮಾಡಿದ ಬಡ ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಆರು ತಿಂಗಳಾದರೂ ಕೂಲಿ ಪಾವತಿಯಾಗಿಲ್ಲ. ತಕ್ಷಣ ಬಾಕಿ ಇರುವ ವೇತನವನ್ನು ಕಾರ್ಮಿಕರ ಖಾತೆಗಳಿಗೆ ಜಮಾ ಮಾಡಬೇಕು ಎಂದು ಆಗ್ರಹಿಸಲಾಯಿತು. ಅಲ್ಲದೆ, ಫಾರಂ ನಂಬರ್-6 ಸಲ್ಲಿಸಿದ್ದರೂ ಕೆಲಸ ನೀಡದೇ ಕಾರ್ಮಿಕರನ್ನು ಸತಾಯಿಸಲಾಗುತ್ತಿದೆ. ಆದ್ದರಿಂದ ತಕ್ಷಣ ಎನ್ಎಂಆರ್ ತೆಗೆದು ಕೆಲಸ ನೀಡಬೇಕು’ ಎಂದು ಒತ್ತಾಯಿಸಿದರು.
ಗ್ರಾಮದ ಬಡ ರೈತರು ಮತ್ತು ಕೂಲಿ ಕಾರ್ಮಿಕರಿಗೆ ಮನೆ ನಿವೇಶನ ಹಂಚಿಕೆ ಮಾಡುವಂತೆ ಕೂಡ ಮನವಿ ಮಾಡಿದರು.
ಇದೆ ವೇಳೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ, ‘ಗ್ರಾಮಸ್ಥರ ನ್ಯಾಯಯುತ ಬೇಡಿಕೆಗಳನ್ನು ಅಧಿಕಾರಿಗಳು ತಕ್ಷಣ ಈಡೇರಿಸಬೇಕು. ಅಭಿವೃದ್ಧಿಯಿಂದ ವಂಚಿತವಾಗಿರುವ ಮರಂಕಲ್ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸಲು ಸರ್ಕಾರ ವಿಶೇಷ ಗಮನ ಹರಿಸಬೇಕು’ ಎಂದು ಆಗ್ರಹಿಸಿದರು.
ಪ್ರತಿಭಟನೆಯ ಬಳಿಕ ಅಧಿಕಾರಿಗಳು ಒಂದು ವಾರದೊಳಗೆ ಎನ್ಎಂಆರ್ ಡಿಮ್ಯಾಂಡ್ ಪ್ರಕ್ರಿಯೆ ಪೂರ್ಣಗೊಳಿಸಿ ಕೆಲಸ ಒದಗಿಸುವುದಾಗಿ ಹಾಗೂ ಉಳಿದ ಬೇಡಿಕೆಗಳನ್ನು ಸಹ ಒಂದು ವಾರದೊಳಗೆ ಪರಿಶೀಲಿಸಿ ಪರಿಹರಿಸುವುದಾಗಿ ಲಿಖಿತ ಭರವಸೆ ನೀಡಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಎಸ್ಐಆರ್: ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರ ಮತಹಕ್ಕು ಕಸಿಯುವ ಸಂಚು ಎಂದು ಆರೋಪ
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ತಮ್ಮಣ್ಣ ಜಾಗೀರ್ದಾರ್, ತಾಲೂಕು ಕಾರ್ಯದರ್ಶಿ ಭೀಮಣ್ಣ ತಪ್ಪೇದರ್, ವಿಜಯಕುಮಾರ್ ದೊಡ್ಡಮನಿ, ಯಲ್ಲಪ್ಪ ನಾಯ್ಕೋಡಿ, ಭಾಗಣ್ಣ ಪೂಜಾರಿ, ಕಾರ್ಮಿಕ ಮುಖಂಡ ದೇವೇಂದ್ರಕುಮಾರ್, ಭೀಮಣ್ಣ ಮೆಕ್ಯಾನಿಕ್ ರಸ್ತಾಪುರ, ಮರಂಕಲ್ ಗ್ರಾಮದ ಮುಖಂಡರಾದ ರೇಣುಕಾ ಮಲ್ಲಿಕಾರ್ಜುನ್ ಪೊಲೀಸ್ ಪಾಟೀಲ್ ಸೇರಿದಂತೆ ರೈತರು, ಮಹಿಳೆಯರು ಹಾಗೂ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.




