ಕೆಂಭಾವಿ ಪಟ್ಟಣದಲ್ಲಿರುವ ಕೆಬಿಜೆಎನ್ಎಲ್ಗೆ ಸೇರಿದ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಕಬಳಿಸಿ ಕಟ್ಟಡ ನಿರ್ಮಿಸಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಅಕ್ರಮ ನಿರ್ಮಾಣ ತೆರವುಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ನಮ್ಮ ಕರ್ನಾಟಕ ಸೇನೆಯ ತಾಲೂಕು ಅಧ್ಯಕ್ಷ ಸಿದ್ದು ಪಟ್ಟೇದಾರ ಆಗ್ರಹಿಸಿದ್ದಾರೆ.
ಈ ಕುರಿತು ನಾರಾಯಣಪುರ ಕೃಷ್ಣಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್ಎಲ್) ಕಾರ್ಯಾಚರಣೆ ಮತ್ತು ನಿರ್ವಹಣೆ ವಲಯದ ಮುಖ್ಯ ಅಭಿಯಂತರರಿಗೆ ಲಿಖಿತ ಮನವಿ ಸಲ್ಲಿಸಿರುವ ಅವರು, ಸುರಪುರ ತಾಲೂಕು ಕೆಂಭಾವಿ ಪಟ್ಟಣದ ಸರ್ವೆ ನಂ. 600/2ರಲ್ಲಿರುವ 32 ಗುಂಟೆ ಜಮೀನು ಎಲ್ಎಕ್ಯೂ/25/1979-80ರ ಭೂಸ್ವಾಧೀನ ಪ್ರಕ್ರಿಯೆಯಡಿ ಸರ್ಕಾರದಿಂದ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಈ ಜಮೀನಿನ ಪಹಣಿ (ಆರ್ಟಿಸಿ) ಕೆಬಿಜೆಎನ್ಎಲ್ ಹೆಸರಿನಲ್ಲಿಯೇ ಇದ್ದರೂ, ಕೆಲವು ಖಾಸಗಿ ವ್ಯಕ್ತಿಗಳು ಅಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದು, ಇನ್ನೂ ನಿರ್ಮಾಣ ಕಾಮಗಾರಿಗಳನ್ನು ಮುಂದುವರಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸರ್ಕಾರಿ ಆಸ್ತಿಯನ್ನು ದುರ್ಬಳಕೆ ಮಾಡಿಕೊಂಡು ಅತಿಕ್ರಮಣ ನಡೆಸುತ್ತಿರುವವರ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಭೂಮಿಯನ್ನು ಮೂಲ ಸ್ವರೂಪಕ್ಕೆ ತರಲು ಅಗತ್ಯ ಕ್ರಮಗಳನ್ನು ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಬಸ್ ಕೊರತೆಗೆ ಬೇಸತ್ತ ಗಡಿಭಾಗದ ಜನ; ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಾರಿಗೆ ಸಂಕಷ್ಟದ ಕಾಟ
ಈ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದರೆ, ಕೆಬಿಜೆಎನ್ಎಲ್ ಕಚೇರಿ ಎದುರು ಉಗ್ರ ಪ್ರತಿಭಟನೆ ಹಾಗೂ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಸಿದ್ದು ಪಟ್ಟೇದಾರ ಎಚ್ಚರಿಕೆ ನೀಡಿದ್ದಾರೆ.




