ಸುರಪುರ ತಾಲೂಕಿನ ಶಖಾಪುರ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆಗಾಗಿ ಕುಣಿ (ಸಮಾಧಿ) ಅಗೆಯುವ ಕಾಯಕ ನಿರ್ವಹಿಸಲು ನಿರಾಕರಿಸಿದ್ದಕ್ಕೆ ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿ, ಗ್ರಾಮದಿಂದ ಬಹಿಷ್ಕಾರ ಹಾಕುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ಮೇಲ್ವರ್ಗದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಂಪ್ರದಾಯದಂತೆ ಅಂತ್ಯಕ್ರಿಯೆಗೆ ಕುಣಿ ಅಗೆಯಲು ದಲಿತ ಸಮುದಾಯದ ಕೆಲವರನ್ನು ಕರೆಯಲಾಗಿತ್ತು ಎನ್ನಲಾಗಿದೆ. ಆದರೆ, ಈ ಕಾಯಕವನ್ನು ಇನ್ನು ಮುಂದೆ ಮಾಡುವುದಿಲ್ಲ ಎಂದು ದಲಿತ ಸಮುದಾಯದವರು ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ದಲಿತ ಸಮುದಾಯದವರ ಪ್ರಕಾರ, “ಗ್ರಾಮದಲ್ಲಿ ಯಾರೇ ಮೃತಪಟ್ಟರೂ ನೀವು ಕುಣಿ ಅಗೆಯಲೇಬೇಕು. ಇಲ್ಲದಿದ್ದರೆ ಗ್ರಾಮದಲ್ಲಿ ಇರಲು ಅವಕಾಶ ನೀಡುವುದಿಲ್ಲ. ನಮ್ಮ ಮಾತು ಕೇಳದಿದ್ದರೆ ಸಾಮಾಜಿಕ ಬಹಿಷ್ಕಾರ ಹಾಕುತ್ತೇವೆ” ಎಂದು ಕೆಲವರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಇದರ ಜೊತೆಗೆ, ಗ್ರಾಮದ ಬಾವಿಯಿಂದ ಕುಡಿಯುವ ನೀರು ತೆಗೆದುಕೊಳ್ಳಲು ಅವಕಾಶ ನೀಡದೆ ತಡೆಯುವುದು, ಜಮೀನಿಗೆ ಹೋಗುವ ದಾರಿಯಲ್ಲಿ ಅಡ್ಡಿಪಡಿಸುವುದು, ದಲಿತ ಓಣಿಯಲ್ಲಿ ಕಾರ್ಯಕ್ರಮ ನಡೆದಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಹಾಗೂ ಮಹಿಳೆಯರನ್ನು ಅಶ್ಲೀಲ ಪದಗಳಿಂದ ನಿಂದಿಸುವಂತಹ ಘಟನೆಗಳು ನಡೆಯುತ್ತಿವೆ ಎಂಬ ಆರೋಪವೂ ಕೇಳಿಬಂದಿದೆ.
ಜಾತೀಯತೆ, ಅಸ್ಪೃಶ್ಯತೆ, ಶೋಷಣೆ, ದಬ್ಬಾಳಿಕೆ ಹಾಗೂ ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಟ ಪದ್ಧತಿಗಳು ಇಂದಿಗೂ ಕೆಲವು ಗ್ರಾಮಗಳಲ್ಲಿ ಮುಂದುವರಿದಿರುವುದಕ್ಕೆ ಈ ಘಟನೆ ಉದಾಹರಣೆಯಾಗಿದೆ ಎಂದು ದಲಿತ ಸಮುದಾಯದ ಮುಖಂಡರು ಆರೋಪಿಸಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಮುಂಗಾರು ವೈಫಲ್ಯಕ್ಕೆ ಮನನೊಂದು ಯುವ ರೈತ ಆತ್ಮಹತ್ಯೆ
ಈ ಸಂಬಂಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ದಲಿತ ಸಮುದಾಯದವರಿಗೆ ರಕ್ಷಣೆ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.




