ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ತಾಲ್ಲೂಕಿನ ಹತ್ತಿಕುಣಿ ಗ್ರಾಮದ ವಿದ್ಯಾರ್ಥಿಗಳು ಶುಕ್ರವಾರ ಯಾದಗಿರಿ, ಸೇಡಂ ರಾಜ್ಯ ಹೆದ್ದಾರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಹತ್ತಿಕುಣಿ ಗ್ರಾಮವು ಹೋಬಳಿ ಕೇಂದ್ರವಾಗಿದ್ದು, ಪ್ರತಿದಿನ ಇಲ್ಲಿಂದ ನೂರಾರು ವಿದ್ಯಾರ್ಥಿಗಳು ಯಾದಗಿರಿ ನಗರದ ವಿವಿಧ ಶಾಲೆ ಮತ್ತು ಕಾಲೇಜುಗಳಿಗೆ ತೆರಳುತ್ತಾರೆ. ಆದರೆ ಕಳೆದ 15 ದಿನಗಳಿಂದ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣ ಸಮಯಕ್ಕೆ ಸರಿಯಾಗಿ ಶಿಕ್ಷಣ ಸಂಸ್ಥೆಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು.
ಯಾದಗಿರಿಯಿಂದ ಸೇಡಂ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಚರಿಸುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಗಳು ಪ್ರಯಾಣಿಕರಿಂದ ತುಂಬಿರುವ ಕಾರಣ ಹತ್ತಿಕುಣಿ ಬಸ್ ನಿಲ್ದಾಣದಲ್ಲಿ ನಿಲ್ಲಿಸದೆ ಮುಂದಕ್ಕೆ ತೆರಳುತ್ತಿವೆ. ಪರಿಣಾಮ ವಿದ್ಯಾರ್ಥಿಗಳು ಗಂಟೆಗಟ್ಟಲೆ ಬಸ್ಗಾಗಿ ಕಾಯುವಂತಾಗಿದ್ದು, ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಪ್ರತಿಭಟನೆಗೆ ಗ್ರಾಮದ ಮುಖಂಡರಾದ ಶರಣಪ್ಪಗೌಡ ಮಾಲಿ ಪಾಟೀಲ್, ಭೀಮರಡ್ಡಿ ರಾಂಪೂರಹಳ್ಳಿ, ವೆಂಕಟರಡ್ಡಿ ಕೌಳೂರ, ನಾಗಪ್ಪ ಗೋಪಾಳಪುರ, ಅಂಬು ನಾಯಕ, ಮಲ್ಲಿಕಾರ್ಜುನ ಕನ್ನಡಿ, ಹಣಮಂತ ನಾಯಕ ಹಾಗೂ ಶರಣು ಗಡೇದ ಸೇರಿದಂತೆ ಹಲವರು ಬೆಂಬಲ ಸೂಚಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಹಾಸ್ಟೆಲ್ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ
ಪ್ರತಿಭಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ವಿರೇಶ ಹಾಗೂ ಸಾರಿಗೆ ಇಲಾಖೆಯ ಇನ್ಸ್ಪೆಕ್ಟರ್ ಬಸಣ್ಣಗೌಡ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ವಿದ್ಯಾರ್ಥಿಗಳ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.




