ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ ಕೆ ಸುರೇಶ್, ಮಾ.28ರಂದು ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಈ ಬಗ್ಗೆ ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾಳೆ ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರುಗಳಾದ ರಾಮಲಿಂಗಾ ರೆಡ್ಡಿ, ಗೃಹ ಸಚಿವರಾದ ಪರಮೇಶ್ವರ್ ಅವರು ಕೂಡ ಆಗಮಿಸಲಿದ್ದಾರೆ. ಅದೇ ರೀತಿ ಸಾರ್ವಜನಿಕರಿಗೂ ಆಹ್ವಾನ ನೀಡಿ, ನನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ್ದೇನೆ” ಎಂದು ತಿಳಿಸಿದರು.
“ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ” ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ಕ್ಷೇತ್ರದಲ್ಲಿ ಅನ್ಯ ಪಕ್ಷಗಳ ಕಾರ್ಯಕರ್ತರ ಸೇರ್ಪಡೆ ಬಗ್ಗೆ ಕೇಳಿದಾಗ, “ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಬಹಳ ಉತ್ಸಾಹದಿಂದ ನನಗೆ ಬೆಂಬಲ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಹಲವು ಕಾರ್ಯಕರ್ತರು ಆ ಪಕ್ಷಗಳನ್ನು ತೊರೆದು ನಮ್ಮ ಪಕ್ಷ ಸೇರುತ್ತಿದ್ದಾರೆ. ಇದರಿಂದಾಗಿ ನಮಗೆ ಮತ್ತಷ್ಟು ಶಕ್ತಿ ಹೆಚ್ಚಾಗಿದೆ” ಎಂದರು.
ನಿಶಾ ಯೋಗೇಶ್ವರ್ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ
ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸುದ್ದಿ ಹರಿದಾಡುತ್ತಿದೆ ಎಂದು ಕೇಳಿದಾಗ, “ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡಲಿದ್ದಾರೆ. ಅವರು ಬಹಳ ದಿನಗಳಿಂದ ಪಕ್ಷ ಸೇರುವುದಾಗಿ ಹೇಳುತ್ತಿದ್ದಾರೆ. ಅವರ ಸ್ವಯಂ ತೀರ್ಮಾನದ ಬಗ್ಗೆ ಜಿಲ್ಲೆಯ ಮುಖಂಡರು ಹಾಗೂ ನಾಯಕರ ಜತೆ ಚರ್ಚೆ ಮಾಡಿ ಅವರ ಅಭಿಪ್ರಾಯದ ಮೇರೆಗೆ ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.