ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ‘ಕೊಲೆ ಬೆದರಿಕೆ’ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಾರ್ಖಂಡ್ ಬಿಜೆಪಿಯ ನಗ್ರಿ ಮಂಡಲ ಅಧ್ಯಕ್ಷ ರಿತೇಶ್ ರಾಜ್ ಮಹತೋ ನೀಡಿದ ದೂರಿನ ಆಧಾರದ ಮೇಲೆ ರಾಂಚಿ ಜಿಲ್ಲೆಯ ನಗ್ರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ದೂರಿನ ಪ್ರಕಾರ, ಅದೇ ಪೊಲೀಸ್ ಠಾಣೆ ವ್ಯಾಪ್ತಿಯ ಶಹೇರ್ ಗ್ರಾಮದ ನಿವಾಸಿ ಆಲಿಮ್ ಅನ್ಸಾರಿ ಎಂಬಾತ ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ವೀಡಿಯೊ ಪೋಸ್ಟ್ ಮಾಡಿದ್ದು, ಅದರಲ್ಲಿ ಮೋದಿ, ಶಾ ಮತ್ತು ಆದಿತ್ಯನಾಥ್ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಅರೋಪಿಸಲಾಗಿದೆ.
ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ನಗ್ರಿ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಅಭಿಷೇಕ್ ರಾಯ್, “ನಾವು ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು, ಪ್ರಕರಣದ ಕುರಿತು ಕೂಲಂಕಷ ತನಿಖೆ ಆರಂಭಿಸಿದ್ದೇವೆ. ಆರೋಪಿಯು ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡುವ ಮೂಲಕ ಸಾಮಾಜಿಕ ಸಾಮರಸ್ಯವನ್ನು ಕದಡಲು ಯತ್ನಿಸಿದ್ದಾನೆ. ಸಾಂವಿಧಾನಿಕ ಹುದ್ದೆಗಳನ್ನು ಬಹಿರಂಗವಾಗಿ ಅಪಮಾನಿಸಿದ್ದಾನೆಂದು ದೂರುದಾರರು ಆರೋಪಿಸಿದ್ದಾರೆ,” ಎಂದು ತಿಳಿಸಿದ್ದಾರೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಪೂರ್ಣಗೊಂಡ ನಂತರ ಆರೋಪಿಯನ್ನು ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



