ಖಾಸಗಿ ಸೀಫುಡ್ (ಕಡಲ ಆಹಾರ) ಮತ್ತು ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಹಠಾತ್ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಕನಿಷ್ಠ ಏಳು ಜನರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಪೆರಿಯಪಾಳ್ಯಂ ಬಳಿಯ ಮಂಜಂಕರಣೈನಲ್ಲಿ ನಡೆದಿದೆ. ದುರ್ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಭಾನುವಾರ ಕಾರ್ಖಾನೆಯಲ್ಲಿ ಕೆಲಸ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಆ ಸಮಯದಲ್ಲಿ ಘಟಕದಲ್ಲಿದ್ದ ಕಾರ್ಮಿಕರು ಮತ್ತು ಇತರ ಸಿಬ್ಬಂದಿ ಈ ತೀವ್ರ ವಿಷಕಾರಿ ಅನಿಲವನ್ನು ಉಸಿರಾಡಿದ್ದರಿಂದ, ಉಸಿರುಗಟ್ಟಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ವರದಿಯಾಗಿದೆ.
ಈ ಲೇಖನ ಓದಿದ್ದೀರಾ?: ಕಾಂಗ್ರೆಸ್ ಕಾಲಾಳು ಹರಿಪ್ರಸಾದ್ ಈಗ ಪಿಸಿಸಿ ತಲೆಯಾಳು; ಕುತೂಹಲ ಮೂಡಿಸಿದ ನೇಮಕ
ಪ್ರಜ್ಞಾಹೀನರಾಗಿದ್ದವರನ್ನು ತಕ್ಷಣವೇ ಹತ್ತಿರದ ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಆದರೂ, ಆಸ್ಪತ್ರೆಗೆ ತಲುಪಿಸುವಷ್ಟರಲ್ಲೇ ಇಬ್ಬರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಆನಂತರ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಸದ್ಯ 40ಕ್ಕೂ ಹೆಚ್ಚು ಜನರು ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ.
This video cannot be played in your browser. Open the video directly
ಘಟನಾ ಸ್ಥಳಕ್ಕೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಹಾಗೂ ತುರ್ತು ಸೇವಾ ಸಿಬ್ಬಂದಿ ತಕ್ಷಣವೇ ಧಾವಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಇಡೀ ಕಾರ್ಖಾನೆ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸಾರ್ವಜನಿಕರ ಪ್ರವೇಶ ರಹಿತ ವಲಯವನ್ನಾಗಿ ಘೋಷಿಸಲಾಗಿದೆ. ಅನಿಲ ಸೋರಿಕೆಯಾಗುತ್ತಿರುವ ಮೂಲವನ್ನು ಪತ್ತೆಹಚ್ಚಿ ಅದನ್ನು ನಿಯಂತ್ರಿಸಲು ಮತ್ತು ವಿಷಗಾಳಿ ಮತ್ತಷ್ಟು ಹರಡದಂತೆ ತಡೆಯಲು ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.




