ಅಸ್ಸಾಂನ ಧುಬ್ರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಕೀಬುಲ್ ಹುಸೈನ್ ಮೇಲೆ ನಾಗಾಂವ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಕ್ರಿಕೆಟ್ ಬ್ಯಾಟ್ನಿಂದ ಹಲ್ಲೆ ನಡೆಸಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಸಂಸದ ಹುಸೈನ್ ಅವರು ನಾಗಾಂವ್ ಜಿಲ್ಲೆಯ ರೂಪಾಹಿಹತ್ನ ನಟುನ್ ಬಝಾರ್ನಲ್ಲಿ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ, ಕೆಲವು ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಸಂಸದರನ್ನು ವೈಯಕ್ತಿಕ ಭದ್ರತಾ ಅಧಿಕಾರಿಗಳು (ಪಿಎಸ್ಒಗಳು) ರಕ್ಷಿಸಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ, ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ದುಷ್ಕರ್ಮಿಗಳ ಪೈಕಿ ಒಬ್ಬ ಸಂಸದ ಹುಸೈನ್ ಅವರಿಗೆ ಬ್ಯಾಟ್ನಿಂದ ಥಳಿಸಿ ಸ್ಥಳದಿಂದ ಪರಾರಿಯಾಗಿರುವುದು ಸೆರೆಯಾಗಿದೆ. ದುಷ್ಕರ್ಮಿಗಳು ಹುಸೈನ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳ ಮೇಲೂ ದಾಳಿ ಮಾಡಿದ್ದಾರೆ. ಈ ವೇಳ, ಭದ್ರತಾ ಅಧಿಕಾರಿಯೊಬ್ಬರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ.
ಸಂಸದರ ಮೇಲೆ ನಡೆದ ದಾಳಿ ಘಟನೆಯಿಂದಾಗಿ ಶುಕ್ರವಾರ, ಅಸ್ಸಾಂ ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಸಂಸದರ ಮೇಲಿನ ದಾಳಿಯ ಬಗ್ಗೆ ಚರ್ಚಿಸಲು ವಿರೋಧ ಪಕ್ಷ ಕಾಂಗ್ರೆಸ್ ಶಾಸಕರು ಮಂಡಿಸಿದ ನಿಲುವಳಿ ಸೂಚನೆಗೆ ಅವಕಾಶ ನಿರಾಕರಿಸಲಾಗಿದೆ. ಹೀಗಾಗಿ,ವಿರೋಧ ಪಕ್ಷ ಕಾಂಗ್ರೆಸ್ನ ಶಾಸಕರು ಪ್ರತಿಭಟನೆ ನಡೆಸಿದ್ದು, ಗದ್ದಲ ಉಂಟಾಗಿದೆ. ಸ್ಪೀಕರ್ ಬಿಸ್ವಜಿತ್ ಡೈಮರಿ ಅವರು ಎರಡು ಬಾರಿ ಸದನವನ್ನು ಮುಂದೂಡಿದ್ದಾರೆ.
Congress MP from #Dhubri seat, #RakibulHussain, and his personal security officers (PSOs) were attacked by a group of unidentified persons in #Rupohihat area of #Assam’s #Nagaon district.
— Hate Detector 🔍 (@HateDetectors) February 20, 2025
The MP was on his way to attend a public meeting on a scooter when some people tried to… pic.twitter.com/644p3DJLET
ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಹೇಳಲಾಗಿದೆ. ಆದಾಗ್ಯೂ, ಭದ್ರತಾ ಲೋಪದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
“ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಸುಧಾರಣೆಯಾಗಿದೆ ಎಂದು ಮುಖ್ಯಮಂತ್ರಿ ವಿಧಾನಸಭೆಗೆ ವಿವರಿಸುತ್ತಾರೆ. ಆದರೆ, ಒಬ್ಬ ಸಂಸದ ಬೀದಿಯಲ್ಲಿ ಸುರಕ್ಷಿತವಾಗಿಲ್ಲ. ಒಬ್ಬ ಸಂಸದನ ಮೇಲೆ ಈ ರೀತಿ ದಾಳಿ ನಡೆಯಲು ಕಾರಣ ಏನು ಎಂಬುದನ್ನು ತನಿಖೆ ಮಾಡಬೇಕಾಗಿದೆ” ಎಂದು ಅಸ್ಸಾಂ ವಿಧಾನಸಭೆಯ ವಿರೋಧ ಪಕ್ಷ ಹಾಗೂ ಕಾಂಗ್ರೆಸ್ ನಾಯಕ ದೇಬಬ್ರತ ಸೈಕಿಯಾ ಹೇಳಿದ್ದಾರೆ.
“ಸಂಸದ ಹುಸೈನ್ ಅವರು ಸುರಕ್ಷಿತವಾಗಿದ್ದಾರೆ. ಅವರ ಮೇಲೆ ಗುಂಪೊಂದು ದಾಳಿ ಮಾಡಿದೆ. ಅವರ ಭದ್ರತಾ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ. ಆದಾಗ್ಯೂ, ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ” ಎಂದು ಅಸ್ಸಾಂ ಪೊಲೀಸ್ ಮಹಾನಿರ್ದೇಶಕ ಹರ್ಮೀತ್ ಸಿಂಗ್ ತಿಳಿಸಿದ್ದಾರೆ.
ರಕೀಬುಲ್ ಹುಸೈನ್ ಅವರು ಕಳೆದ ವರ್ಷದ (2024) ಸಾರ್ವತ್ರಿಕ ಚುನಾವಣೆಯಲ್ಲಿ ಧುಬ್ರಿ ಲೋಕಸಭಾ ಕ್ಷೇತ್ರದಿಂದ ದಾಖಲೆಯ 10 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಹುಸೈನ್ ಅವರು ಈ ಹಿಂದೆ ಐದು ಬಾರಿ ಪ್ರತಿನಿಧಿಸಿದ್ದ ಸಮಗುರಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಗೆ ಅವರ ಮಗ ಸ್ಪರ್ಧಿಸಿದ್ದರು. ಆದರೆ, ಬಿಜೆಪಿ ಅಭ್ಯರ್ಥಿ ದಿಪ್ಲು ರಂಜನ್ ಶರ್ಮಾ ವಿರುದ್ಧ ಸೋತಿದ್ದಾರೆ.
ಕಳೆದ ವರ್ಷದ ನವೆಂಬರ್ನಲ್ಲಿ ನಡೆದ ಉಪಚುನಾವಣೆಗೂ ಮುನ್ನ ಕ್ಷೇತ್ರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಹಿಂಸಾಚಾರ ಘಟನೆಗಳು ನಡೆದಿತ್ತು.
ಸರ್ಕಾರಿ ಪ್ರಾಯೋಜಿತ ಕೃತ್ಯ
ಸಂಸದನ ಮೇಲೆ ನಡೆದ ದಾಳಿಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಕೈ ನಾಯಕರು, “ಇದು ಪ್ರಜಾಪ್ರಭುತ್ವದ ಕೊಲೆ. ಜಂಗಲ್ ರಾಜ್ ಮತ್ತು ಗೂಂಡಾ ರಾಜ್ ಇಲ್ಲಿ ಮೇಲುಗೈ ಸಾಧಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರು ಇಂದು (ಫೆ.21) ಅಸ್ಸಾಂ ವಿಧಾನಸಭಾ ಸಂಕೀರ್ಣದಲ್ಲಿ ಬಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನಾ ಮೆರವಣಿಗೆ ನಡೆದ್ದಾರೆ. ಅಪರಾಧಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.
ಸಂಸದನ ಮೇಲೆ ದಾಳಿ ನಡೆಯುವ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಪೊಲೀಸರು ಸರಿಯಾದ ಭದ್ರತಾ ವ್ಯವಸ್ಥೆಗಳನ್ನು ಮಾಡಿರಲಿಲ್ಲ. ಆ ಪ್ರದೇಶದ (ದಾಳಿ ನಡೆದ ಜಾಗ) ಈ ಹಿಂದೆಯೂ ಇದೇ ರೀತಿಯ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಇದು ಪ್ರಜಾಪ್ರಭುತ್ವದ ಕೊಲೆ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸ್ಥೈರ್ಯ ಕುಗ್ಗಿಸುವ ಪ್ರಯತ್ನ” ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಕಿಡಿಕಾರಿದ್ದಾರೆ.