ಜಾರ್ಖಂಡ್ನಲ್ಲಿ ರಾಜ್ಯ ಸಾರ್ವಜನಿಕ ಸೇವಾ ಆಯೋಗ (JPSC) ಹಾಗೂ ಸಿಬ್ಬಂದಿ ಆಯ್ಕೆ ಆಯೋಗ (JSSC) ನಡೆಸಿದ ವಿವಿಧ ಸ್ಪರ್ಧಾತ್ಮಕ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಾವಿರಾರು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲವನ್ನು ಪುನರುಚ್ಚರಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಜಾರ್ಖಂಡ್, ಪಂಜಾಬ್, ದೆಹಲಿ ಅಥವಾ ದೇಶದ ಯಾವುದೇ ಭಾಗವೇ ಇರಲಿ, ನಾವು ವಿದ್ಯಾರ್ಥಿಗಳು ಮತ್ತು ಯುವಜನರ ನ್ಯಾಯಯುತ ಹೋರಾಟದ ಪರವಾಗಿ ಸದಾ ನಿಲ್ಲುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.
ಜಾರ್ಖಂಡ್ನಲ್ಲಿ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಐತಿಹಾಸಿಕ ಜೆನ್-ಝೀ ಪ್ರತಿಭಟನೆಗೆ ಬೆಂಬಲ ನೀಡಿದ್ದ ಕಾಂಗ್ರೆಸ್ ತನ್ನ ಮೈತ್ರಿ ಸರ್ಕಾರವಿರುವೆಡೆ ವಿದ್ಯಾರ್ಥಿಗಳ ಪರವಾಗಿ ನಿಲ್ಲದಿದ್ದರೆ ಹೇಗೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.
ಇದನ್ನೂ ಓದಿ: ಜಾರ್ಖಂಡ್ | ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಬೆಂಬಲ: ಹೆಚ್ಚುತ್ತಾ ಜೆಎಂಎಂ-ಕೈ ಮೈತ್ರಿ ಬಿರುಕು?
ದೇಶಾದ್ಯಂತ ನೀಟ್ ಪರೀಕ್ಷೆ ಹಗರಣದ ವಿರುದ್ಧ ಧ್ವನಿ ಎತ್ತಿದ್ದ ಕಾಂಗ್ರೆಸ್ ನಾಯಕರು, ಈಗ ತಮ್ಮದೇ ಮೈತ್ರಿ ಸರ್ಕಾರವಿರುವ ಜಾರ್ಖಂಡ್ನಲ್ಲಿ ಪೇಪರ್ ಲೀಕ್ ಆಗಿರುವುದಕ್ಕೆ ಉತ್ತರಿಸಬೇಕು ಎಂದು ಬಿಜೆಪಿ ಸೇರಿದಂತೆ ವಿರೋಧ ಪಕ್ಷಗಳು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಈಗಾಗಲೇ ಜಾರ್ಖಂಡ್ನ ಕಾಂಗ್ರೆಸ್ ಉಸ್ತುವಾರಿ ಕೆ. ರಾಜು ಎಕ್ಸ್ನಲ್ಲಿ ಪೋಸ್ಟ್ ವಿದ್ಯಾರ್ಥಿಗಳ ಪರವಾಗಿ ನಿಲ್ಲುವುದಾಗಿ ಸ್ಪಷ್ಟಪಡಿಸಿದ್ದಾರೆ. ಇದೀಗ ಮಲ್ಲಿಕಾರ್ಜುನ ಖರ್ಗೆ ಅವರೂ ದೇಶದ ಯಾವುದೇ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾದರೆ ಕಾಂಗ್ರೆಸ್ ವಿದ್ಯಾರ್ಥಿಗಳ ಪರವಾಗಿಯೇ ನಿಲ್ಲುತ್ತದೆ ಎಂದು ಹೇಳಿದ್ದಾರೆ.




