ಪರೀಕ್ಷೆ ಬರೆಯುವಾಗ ‘ಚಾಟ್ ಜಿಪಿಟಿ’ (ChatGPT) ಬಳಸುತ್ತಿರುವುದು ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ, ಐಐಟಿ ಬಾಂಬೆಯ (IIT Bombay) ಎನರ್ಜಿ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಶುಕ್ರವಾರ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಶುಕ್ರವಾರ ಬೆಳಿಗ್ಗೆ ನಡೆದ ಪರೀಕ್ಷೆಯ ವೇಳೆ ಈ ವಿದ್ಯಾರ್ಥಿ ಮೊಬೈಲ್ ಫೋನ್ ಬಳಸುತ್ತಿರುವುದು ಮೇಲ್ವಿಚಾರಕರ ಗಮನಕ್ಕೆ ಬಂದಿತ್ತು. ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಚಾಟ್ ಜಿಪಿಟಿಗೆ ಅಪ್ಲೋಡ್ ಮಾಡಿ, ಆ ಮೂಲಕ ಉತ್ತರಗಳನ್ನು ಹುಡುಕಲು ಆತ ಯತ್ನಿಸಿದ್ದ ಎಂದು ಐಐಟಿ ಬಾಂಬೆ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಯ ವಿರುದ್ಧ ಯಾವುದೇ ಶಿಸ್ತುಕ್ರಮ ಜರುಗಿಸಿರಲಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಬದಲಾಗಿ, ಬೋಧಕರು ಮತ್ತು ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿಯೊಂದಿಗೆ ಮಾತನಾಡಿ, ಆಪ್ತಸಮಾಲೋಚನೆ (ಕೌನ್ಸೆಲಿಂಗ್) ನಡೆಸಿದ್ದರು. ಅಲ್ಲದೆ, ಈ ಘಟನೆಯಿಂದ ನಿನ್ನ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಧೈರ್ಯ ತುಂಬಿದ್ದರು.
ಸಮಾಲೋಚನೆಯ ಬಳಿಕ ಹಾಸ್ಟೆಲ್ ಕೊಠಡಿಗೆ ಮರಳಿದ್ದ ವಿದ್ಯಾರ್ಥಿ, ಅಂದು ಸಂಜೆ ಶವವಾಗಿ ಪತ್ತೆಯಾಗಿದ್ದಾನೆ. ಘಟನೆಯ ಕುರಿತು ತೀವ್ರ ಸಂತಾಪ ಸೂಚಿಸಿರುವ ಐಐಟಿ, ಸೂಕ್ತ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದೆ. ಈ ದುರಂತದ ಬೆನ್ನಲ್ಲೇ ಕ್ಯಾಂಪಸ್ನಲ್ಲಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ಐಐಟಿ ಕ್ಯಾಂಪಸ್ನಲ್ಲಿ ನಡೆದ ಇಂಥದ್ದೇ ಮತ್ತೊಂದು ದುರಂತದಲ್ಲಿ, ನವದೆಹಲಿಯ ಐಐಟಿಯಲ್ಲಿ (IIT Delhi) ಎಂಎಸ್ಸಿ ಭೌತಶಾಸ್ತ್ರ ಓದುತ್ತಿದ್ದ ಬಿಹಾರ ಮೂಲದ 31 ವರ್ಷದ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಆಗಸ್ಟ್ 22ರಂದು ಆತ್ಮಹತ್ಯೆ ಮಾಡಿಕೊಂಡಿದ್ದನು.
ಅಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಕ್ಯಾಂಪಸ್ ಪ್ರವೇಶಿಸಿದ್ದ ಆ ವಿದ್ಯಾರ್ಥಿ, ಲೆಕ್ಚರ್ ಹಾಲ್ ಕಾಂಪ್ಲೆಕ್ಸ್ನ 6ನೇ ಮಹಡಿಯಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿರಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿಗೆ ನಿಖರ ಕಾರಣವನ್ನು ಪತ್ತೆಹಚ್ಚುತ್ತಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.




