ನಟಿ ತ್ರಿಶಾ ಕುರಿತು ನೀಡಿದರೆನ್ನಲಾದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತಮಿಳುನಾಡು ಡಿಎಂಕೆ ಶಾಸಕ ಹಾಗೂ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸದೆ, ವಿಚಾರಣೆ ಪೂರ್ಣಗೊಳಿಸಿದ ಬಳಿಕ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್ TN ಪೊಲೀಸರಿಗೆ ನಿರ್ದೇಶನ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ವೇಳೆ, ಉದಯನಿಧಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಉದ್ದೇಶ ಪೊಲೀಸರಿಗೆ ಇಲ್ಲ ಎಂದು ತಮಿಳುನಾಡು ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ನ್ಯಾಯಾಲಯಕ್ಕೆ ತಿಳಿಸಿದರು. ವಿಚಾರಣೆ ಬಳಿಕ ಠಾಣೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
ಈ ಹಿನ್ನೆಲೆಯಲ್ಲಿ ನ್ಯಾಯಾಲಯ, ಉದಯನಿಧಿಯನ್ನು ಬಿಡುಗಡೆ ಮಾಡುವಂತೆ ಹಾಗೂ ತನಿಖೆಗೆ ಅಗತ್ಯವಿದ್ದಾಗಲೆಲ್ಲ ಸಹಕರಿಸುವಂತೆ ಸೂಚಿಸಿತು.
ಇದಕ್ಕೂ ಮುನ್ನ, ತಂಜಾವೂರು (ಪೂರ್ವ) ಪೊಲೀಸರು ಚೆನ್ನೈನ ನೀಲಂಕರೈ ನಿವಾಸದಿಂದ ಉದಯನಿಧಿ ಸ್ಟಾಲಿನ್ ಅವರನ್ನು ವಶಕ್ಕೆ ಪಡೆದು, ವಿಚಾರಣೆಗಾಗಿ ತಂಜಾವೂರಿಗೆ ಕರೆದೊಯ್ದಿದ್ದರು. ಕಾವೇರಿ ವಿಚಾರವಾಗಿ ಸೋಮವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾಡಿದ ಭಾಷಣದ ಸಂಬಂಧ ದಾಖಲಾದ ಎಫ್ಐಆರ್ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.
ಉದಯನಿಧಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್ಗಳಡಿ, ತಮಿಳುನಾಡು ಮಹಿಳೆಯರ ಕಿರುಕುಳ ತಡೆ ಕಾಯ್ದೆಯ ಸೆಕ್ಷನ್ 4 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಂಧನದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಉದಯನಿಧಿ ಸ್ಟಾಲಿನ್, “ನಾನು ಅಂತಹ ಯಾವುದೇ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ನನ್ನ ಭಾಷಣದ ವಿಡಿಯೊವನ್ನು ‘ಕಟ್, ಕಾಪಿ, ಪೇಸ್ಟ್’ ಮಾಡಿ ಸುಳ್ಳು ನಿರೂಪಣೆ ಸೃಷ್ಟಿಸಲಾಗಿದೆ. ಇದರಿಂದ ನಾನು ಹೆದರುವುದಿಲ್ಲ. ಕಾನೂನುಬದ್ಧವಾಗಿ ಪ್ರಕರಣವನ್ನು ಎದುರಿಸುತ್ತೇನೆ” ಎಂದು ಹೇಳಿದರು. ತಮ್ಮ ವಿರುದ್ಧದ ಪೊಲೀಸ್ ಕ್ರಮವನ್ನು ಅವರು “ಹಾಸ್ಯಾಸ್ಪದ” ಎಂದು ಟೀಕಿಸಿದರು.
ಇದನ್ನೂ ಓದಿ: ಅಸ್ಸಾಂ | 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಭೀಕರ ಹತ್ಯೆ; ಐವರು ಪೊಲೀಸ್ ವಶಕ್ಕೆ
ಕಾವೇರಿ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಭಾಷಣ ಮಾಡುತ್ತಿದ್ದ ವೇಳೆ, ಕೆಲವರು “ತ್ರಿಶಾ, ತ್ರಿಶಾ” ಎಂದು ಘೋಷಣೆ ಕೂಗಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, “ನೀರು ಬೇರೆಲ್ಲಿಗೆ ತಲುಪುತ್ತದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಅಲ್ಲಿ ತಲುಪಬೇಕು” ಎಂದು ಹೇಳಿದ್ದು, ಬಳಿಕ ತಾವು ಕಾವೇರಿ ನೀರನ್ನು ಉಲ್ಲೇಖಿಸಿ ಮಾತನಾಡಿದ್ದಾಗಿ ಸ್ಪಷ್ಟಪಡಿಸಿದ್ದರು.
ಆದರೆ, ಈ ಹೇಳಿಕೆ ನಟಿ ತ್ರಿಶಾ ಅವರನ್ನು ಉದ್ದೇಶಿಸಿ ದ್ವಂದ್ವಾರ್ಥದಲ್ಲಿ ಮಾಡಲಾಗಿದೆ ಎಂದು ಆರೋಪಿಸಿ ತಮಿಳಗ ವೆಟ್ರಿ ಕಳಗಂ (TVK) ಮಹಿಳಾ ಘಟಕ ತಂಜಾವೂರು ಪೊಲೀಸರಿಗೆ ದೂರು ನೀಡಿತ್ತು. ಇದನ್ನು ಆಧರಿಸಿ ಪ್ರಕರಣ ದಾಖಲಾಗಿತ್ತು.
ಆದರೆ, ಉದಯನಿಧಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅದು ಯಾವುದೇ ವ್ಯಕ್ತಿಯನ್ನು ಗುರಿಯಾಗಿಸಿಕೊಂಡದ್ದಲ್ಲ, ಸರ್ಕಾರದ ಕಾರ್ಯವೈಖರಿಯನ್ನು ಉದ್ದೇಶಿಸಿ ಮಾಡಿದ್ದ ಹೇಳಿಕೆಯಾಗಿದೆ ಎಂದು ಡಿಎಂಕೆ ಸ್ಪಷ್ಟಪಡಿಸಿದೆ.




