ಬಂಗಾಳ ಕೊಲ್ಲಿ ಹಾಗೂ ಅಂಡಮಾನ್ನಲ್ಲಿ ಸೋಮವಾರ ವಾಯುಭಾರ ಕುಸಿತ ಉಂಟಾಗಿದೆ.ಅ.24ರ ಒಳಗಾಗಿ ಅದು ಚಂಡಮಾರುತವಾಗಿ ಮಾರ್ಪಾಡಾಗಲಿದ್ದು, ಒಡಿಶಾದ ಪುರಿ ಹಾಗೂ ಪಶ್ಚಿಮ ಬಂಗಾಳದ ನಡುವೆ ಹಾದು ಹೋಗಲಿದೆ ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಈ ಹಿನ್ನೆಲೆಯಲ್ಲಿ ಶನಿವಾರದವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಒಡಿಶಾದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚು ಕಾಲ ಇರಲಿದೆ. ರಾಜ್ಯದ ಕರಾವಳಿಯಲ್ಲಿ ಧಾರಾಕಾರ ಮಳೆಯಾಗಲಿದ್ದು, ಪ್ರತೀ ಗಂಟೆಗೆ 100 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.
ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಗುರುವಾರ ರಾತ್ರಿ ಅಥವಾ ಶುಕ್ರವಾರ ಮುಂಜಾನೆ ಒಡಿಶಾದ ಪುರಿಗೆ ಅಪ್ಪಳಿಸಲಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್ಗಳವರೆಗೆ ಇರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆಯೊಳಗೆ ದಡ ಸೇರುವಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಟ್ರಂಪ್-ನೆತನ್ಯಾಹು ಮೇಲೇಕೆ ಭಾರತೀಯರಿಗೆ ಪ್ರೀತಿ?
ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗಲಿದೆ. ಅಕ್ಟೋಬರ್ 23 ರಿಂದಲೇ ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 90 ರಿಂದ 120 ಕಿಮಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಇದನ್ನು ತೀವ್ರ ಚಂಡಮಾರುತ ಎಂದು ವರ್ಗೀಕರಿಸಲಾಗಿದೆ.
ಪುರಿ, ಭುವನೇಶ್ವರ, ಜಗತ್ಸಿಂಗ್ಪುರ, ಕೇಂದ್ರಪಾರಾ, ಭದ್ರಕ್, ಬಾಲಸೋರ್, ಜಾಜ್ಪುರ್, ಧೆಂಕನಲ್, ಕೆಂದುಜಾರ್ ಮತ್ತು ಮಯೂರ್ಭಂಜ್ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಕೇಂದ್ರ ಸರ್ಕಾರ ಕೂಡ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ) ರಕ್ಷಣಾ ಮತ್ತು ಪರಿಹಾರ ಸಿದ್ಧತೆಗಳನ್ನು ಪರಿಶೀಲಿಸಲು ಸಭೆಯನ್ನು ಕರೆದಿದೆ.
ಸಂಭಾವ್ಯ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಒಟ್ಟು 14 ಎನ್ಡಿಆರ್ಎಫ್ಗಳನ್ನು ಪಶ್ಚಿಮ ಬಂಗಾಳದಲ್ಲಿ ಮತ್ತು 11 ಒಡಿಶಾದಲ್ಲಿ ನಿಯೋಜಿಸಲಾಗಿದೆ. ಕ್ಯಾಬಿನೆಟ್ ಕಾರ್ಯದರ್ಶಿ ಟಿವಿ ಸೋಮನಾಥನ್ ಅವರು ಆಸ್ತಿ, ಪಾಸ್ತಿ ನಷ್ಟವನ್ನು ಕಡಿಮೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎರಡೂ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ.
