ದೆಹಲಿಯಲ್ಲಿ 17 ವರ್ಷದ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಭೀಕರ ಕೊಲೆಯನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. “ದೇಶದ ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಯ ಹೊಣೆ ಯಾರದ್ದು? ದೆಹಲಿ ಪೊಲೀಸರ ಕೆಲಸ ಕೇವಲ ಸಾಮಾನ್ಯ ನಾಗರಿಕರನ್ನು ಬೆದರಿಸುವುದಕ್ಕೆ ಸೀಮಿತವಾಗಿದೆಯೇ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಹುಲ್ ಗಾಂಧಿ ನೇರವಾಗಿ ಪ್ರಶ್ನಿಸಿದ್ದಾರೆ.
ಬಾಲಕಿಯ ಅಮಾನುಷ ಹತ್ಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ದೆಹಲಿ ಇಂದು ಮಹಿಳೆಯರ ಪಾಲಿಗೆ ಅತ್ಯಂತ ಭಯಾನಕ ವಾತಾವರಣವನ್ನು ಸೃಷ್ಟಿಸುತ್ತಿದೆ. ಪ್ರತಿದಿನ ಇಂತಹ ಘಟನೆಗಳು ವರದಿಯಾಗುತ್ತಿರುವುದು ದುರದೃಷ್ಟಕರ. ದೇಶದ ರಾಜಧಾನಿಯಲ್ಲೇ ಇಂತಹ ಭೀಕರ ಮತ್ತು ಅಮಾನುಷ ಕೃತ್ಯ ನಡೆದಿದ್ದರೂ, ಹಲವು ದಿನಗಳ ಕಾಲ ಪೊಲೀಸರಿಗೆ ಈ ಬಗ್ಗೆ ಯಾವುದೇ ಸುಳಿವು ಸಿಗದೇ ಇರುವುದು ಗಂಭೀರ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ” ಎಂದು ಕಿಡಿಕಾರಿದ್ದಾರೆ.
“ದೇಶದಲ್ಲಿ ಅಪರಾಧಿಗಳು ಯಾವುದೇ ಭಯವಿಲ್ಲದೆ ಮುಕ್ತವಾಗಿ ಓಡಾಡುತ್ತಿದ್ದಾರೆ. ದೆಹಲಿ ಪೊಲೀಸರು ನೇರವಾಗಿ ಕೇಂದ್ರ ಗೃಹ ಸಚಿವಾಲಯದ ನಿಯಂತ್ರಣದಲ್ಲಿದ್ದಾರೆ. ಹೀಗಿರುವಾಗ ಮಹಿಳೆಯರ ಭದ್ರತೆಯ ಅಂತಿಮ ಹೊಣೆಯನ್ನು ಯಾರು ಹೊರಬೇಕು” ಎಂದು ಅಮಿತ್ ಶಾ ಅವರನ್ನು ಪ್ರಶ್ನಿಸಿದ್ದಾರೆ.
ಅಷ್ಟೇ ಅಲ್ಲದೆ, ಮಹಿಳೆಯರ ಸುರಕ್ಷತೆ ಇಲ್ಲದೆ ಭಾರತವು ಅಭಿವೃದ್ಧಿಯ ಹಾದಿಯಲ್ಲಿ ಮುಂದೆ ಸಾಗಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.
“ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಕ್ರೂರಿಗಳನ್ನು ತಕ್ಷಣವೇ ಬಂಧಿಸಿ, ಅತ್ಯಂತ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಈ ಕ್ರಿಮಿನಲ್ ನಿರ್ಲಕ್ಷ್ಯಕ್ಕೆ ಕಾರಣ ಯಾರು ಎಂಬುದಕ್ಕೆ ಹೊಣೆಗಾರಿಕೆಯನ್ನು ತಕ್ಷಣವೇ ನಿಗದಿಪಡಿಸಬೇಕು” ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
दिल्ली में 17 साल की युवती के साथ गैंगरेप हुआ, उसकी हत्या कर शव खुले मैदान में फेंक दिया गया। राजधानी में इतनी बड़ी दरिंदगी और पुलिस को कई दिनों तक भनक नहीं लगती।
— Rahul Gandhi (@RahulGandhi) September 18, 2026
दुर्भाग्य है कि दिल्ली आज राजधानी नहीं, महिलाओं के लिए हर दिन की खौफनाक कहानी बनकर रह गई है।
अमित शाह जी, दिल्ली…
ದೆಹಲಿಯ ಕುಶಕ್ ರಸ್ತೆಯ ಜೈಪಾಲ್ ರಾಣಾ ಅವರ ಜಮೀನಿನ ಬಳಿ ಸೆಪ್ಟೆಂಬರ್ 13 ರಂದು 17 ವರ್ಷದ ಬಾಲಕಿಯ ಶವ ಅತ್ಯಂತ ವಿಕೃತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಾಲಕಿಯನ್ನು ಟೆಂಪೋ ಒಂದರಲ್ಲಿ ಕರೆದೊಯ್ದು, ಮದ್ಯಪಾನ ಮಾಡಿಸಿ, ಅತ್ಯಾಚಾರ ಎಸಗಿದ ನಂತರ ಚಾಕುವಿನಿಂದ ಇರಿದು ಕೊಲೆ ಮಾಡಿ ಶವವನ್ನು ಬಯಲು ಜಾಗದಲ್ಲಿ ಎಸೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಶವವು ಸಂಪೂರ್ಣವಾಗಿ ಕೊಳೆತುಹೋಗಿದ್ದು, ಬೀದಿ ನಾಯಿಗಳು ಕಡಿದು ಕರುಣಾಜನಕ ಸ್ಥಿತಿಯಲ್ಲಿದ್ದ ಕಾರಣ ತಕ್ಷಣಕ್ಕೆ ಮೃತದೇಹದ ಗುರುತು ತಿಳಿಯಲು ಸಾಧ್ಯವಾಗಿರಲಿಲ್ಲ.
ಪೊಲೀಸರ ಪ್ರಕಾರ, ಮೃತ ಬಾಲಕಿ ಮತ್ತು ಆರೋಪಿಗಳು ಪರಸ್ಪರ ಪರಿಚಿತರಾಗಿದ್ದರು. ಈ ಸಂಬಂಧ ಬಾರತೀಯ ನ್ಯಾಯ ಸಂಹಿತೆ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, 50ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ, ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರು ಆರೋಪಿಗಳನ್ನು ಗುರುತಿಸಿದ್ದಾರೆ.



