ಮುಂಬೈನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ‘ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್’ (TISS) ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ಕೊನೆಯ ಕ್ಷಣದಲ್ಲಿ ಮುಂದೂಡಿದೆ. ಆಗಸ್ಟ್ 2ರಂದು ನಡೆಯಬೇಕಿದ್ದ ಘಟಿಕೋತ್ಸವಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರು ಮುಖ್ಯ ಅಥಿತಿಯಾಗಿದ್ದರು. ಆದರೆ, ಇತ್ತೀಚೆಗೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯ ಭೀತಿಯಿಂದ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಹೇಳಲಾಗಿದೆ.
ಇತ್ತೀಚೆಗೆ, ಸಂಸ್ಥೆಯು ವಿದ್ಯಾರ್ಥಿಗಳಿಗೆ ಕಳುಹಿಸಿರುವ ಇ-ಮೇಲ್ನಲ್ಲಿ, “ಅನಿರೀಕ್ಷಿತ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಘಟಿಕೋತ್ಸವವನ್ನು ಮುಂದೂಡಲಾಗಿದೆ” ಎಂದು ತಿಳಿಸಲಾಗಿದೆ. ಆದರೆ, ಘಟಿಕೋತ್ಸವವನ್ನು ಮುಂದೂಡಿರುವುದಕ್ಕೆ ಕೇವಲ ಆಡಳಿತಾತ್ಮಕ ಕಾರಣಗಳನ್ನಷ್ಟೇ ಸಂಸ್ಥೆ ಉಲ್ಲೇಖಿಸಿದ್ದರೂ, ಮುಂದೂಡಿಕೆಗೆ ಇದಷ್ಟೇ ಕಾರಣವಲ್ಲ, ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆಯೂ ಪ್ರಮುಖ ಕಾರಣವಾಗಿದೆ ಎನ್ನಲಾಗಿದೆ. ಸಂಸ್ಥೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳ ಪ್ರಕಾರ, “ಕಾರ್ಯಕ್ರಮದ ವೇಳೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವ ಬಗ್ಗೆ ಭದ್ರತಾ ಸಂಸ್ಥೆಗಳಿಂದ ಮಾಹಿತಿ ದೊರೆತಿದೆ. ಇದೇ ಹಿನ್ನೆಲೆಯಲ್ಲಿ ಆಡಳಿತವು ಎಚ್ಚರಿಕೆಯ ಹೆಜ್ಜೆಯಾಗಿ, ಕಾರ್ಯಕ್ರಮವನ್ನು ಮುಂದೂಡಿದೆ” ಎನ್ನಲಾಗಿದೆ.
ಸಂಸ್ಥೆಯು ಶುಕ್ರವಾರ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯಲ್ಲಿ, “ಪ್ರಸ್ತುತ ಪರಿಸ್ಥಿತಿಯಲ್ಲಿ ಘಟಿಕೋತ್ಸವವನ್ನು ಗೌರವಯುತ ಹಾಗೂ ಸುರಕ್ಷಿತ ವಾತಾವರಣದಲ್ಲಿ ನಡೆಸಲು ಸಾಧ್ಯವಿಲ್ಲ ಎಂಬುದು ಸಂಸ್ಥೆಯ ಗ್ರಹಿಕೆ. ವಿದ್ಯಾರ್ಥಿಗಳು, ಬೋಧಕರು, ಸಿಬ್ಬಂದಿ, ಅತಿಥಿಗಳು ಹಾಗೂ ಕ್ಯಾಂಪಸ್ನ ಸಮಗ್ರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ತಿಳಿಸಲಾಗಿದೆ.
ಈ ಲೇಖನ ಓದಿದ್ದೀರಾ?: ದೇಶದ ಉನ್ನತ ಹುದ್ದೆಗಳಲ್ಲಿ ಯಾರಿದ್ದಾರೆ? ದಲಿತ, ಹಿಂದುಳಿದ, ಅಲ್ಪಸಂಖ್ಯಾತರನ್ನು ಬದಿಗೆ ಸರಿಸಿದ ಮೀಸಲಾತಿಯ ಸತ್ಯ
ಈ ನಿರ್ಧಾರದಿಂದ ನೂರಾರು ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಈಗಾಗಲೇ ದೇಶದ ವಿವಿಧ ಭಾಗಗಳಿಂದ ಮುಂಬೈಗೆ ಬರಲು ವಿಮಾನ, ರೈಲು ಹಾಗೂ ಹೋಟೆಲ್ಗಳ ಬುಕ್ಕಿಂಗ್ ಮಾಡಿಕೊಂಡಿದ್ದ ಅನೇಕ ಕುಟುಂಬಗಳಿಗೆ ಕೊನೆಯ ಕ್ಷಣದ ಮುಂದೂಡಿಕೆ ಆರ್ಥಿಕ ತೊಂದರೆಯನ್ನುಂಟು ಮಾಡಿದೆ.
ವಿದ್ಯಾರ್ಥಿಗಳ ಅಸಮಾಧಾನವನ್ನು ಗಮನಿಸಿರುವ ಟಿಐಎಸ್ಎಸ್ ಆಡಳಿತ, “ಕೊನೆಯ ಕ್ಷಣದ ರದ್ದತಿಯಿಂದ ಉಂಟಾದ ಆರ್ಥಿಕ ನಷ್ಟಕ್ಕೆ ಸಂಬಂಧಿಸಿದ ಮನವಿಗಳನ್ನು ಪ್ರಕರಣದ ಆಧಾರದ ಮೇಲೆ ಪರಿಶೀಲಿಸಲಾಗುತ್ತದೆ. ಅಗತ್ಯವಿರುವ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಪದವಿ ಪ್ರಮಾಣಪತ್ರಗಳನ್ನು ಕೂಡ ನೀಡಲಾಗುತ್ತದೆ” ಎಂದು ಭರವಸೆ ನೀಡಿದೆ.



