ಇ.ಡಿ ಬಂಧನ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಪ್ರಕರಣ ಸಂಬಂಧ ಸುಪ್ರೀಂ ಮುಖ್ಯ ನ್ಯಾಯಾಧೀಶರಾದ ಡಿ ವೈ ಚಂದ್ರಚೂಡ್ ಅವರು ಕೂಡ ನಾಳೆ(ಫೆ.02) ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿದ್ದಾರೆ.
ಹಿರಿಯ ನ್ಯಾಯವಾದಿಗಳಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಕಪಿಲ್ ಸಿಬಲ್ ಅವರು ಸೊರೇನ್ ಪರವಾಗಿ ಡಿ ವೈ ಚಂದ್ರಚೂಡ್ ಪೀಠಕ್ಕೆ ತುರ್ತು ವಿಚಾರಣೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ.
ಸೊರೇನ್ ಅವರು ಇದೇ ರೀತಿಯ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ನಲ್ಲಿ ಸಾಲಿಟರ್ ಜನರಲ್ ತುಷಾರ್ ಮೆಹ್ತಾ ಪೀಠಕ್ಕೆ ತಿಳಿಸಿದರು. ಆಗ ಮಧ್ಯ ಪ್ರವೇಶಿಸಿ ಮಾತನಾಡಿದ ಸಿಬಲ್, ಹೈಕೋರ್ಟ್ನಿಂದ ಅರ್ಜಿ ಹಿಂಪಡೆಯುವುದಾಗಿ ತಿಳಿಸಿದರು.
ಸಿಬಲ್ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಾಧೀಶರು ಕೂಡ ಪ್ರಕರಣವನ್ನು ನಾಳೆ ವಿಚಾರಣೆ ನಡೆಸುವುದಾಗಿ ಒಪ್ಪಿಕೊಂಡರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು- Scroll.in ಗೆ ಅಭಿನಂದನೆ!
ಅರ್ಜಿಯು ಗಂಭೀರ ಸಮಸ್ಯೆಗಳನ್ನು ಉಲ್ಲಂಘಿಸುತ್ತದೆ ಎಂದು ಸಿಬಲ್ ಪ್ರತಿಪಾದಿಸಿದರು. ಇದಕ್ಕೆ ಉತ್ತರ ನೀಡಿದ ಹೆಚ್ಚುವರಿ ಸಾಲಿಟರ್ ಜನರಲ್ ಎಸ್ವಿ ರಾಜು, ಸೊರೇನ್ ವಿರುದ್ಧ ಇರುವ ಆರೋಪಗಳು ಕೂಡ ತುಂಬ ಗಂಭೀರವಾದವು ಎಂದು ಹೇಳಿದರು. ಇ.ಡಿ ಬಂಧನಕ್ಕೂ ಮುನ್ನ ಹೇಮಂತ್ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸೊರೇನ್ ರಾಜೀನಾಮೆ ನೀಡಿದ ಹಿನ್ನೆಲೆ ಜೆಎಂಎಂನ ಹಿರಿಯ ನಾಯಕರಾದ ಚಂಪಯ್ ಸೊರೇನ್ ಅವರು ಜಾರ್ಖಂಡ್ನ ನೂತನ ಮುಖ್ಯಮಂತ್ರಿಯಾಗಿ ಇಂದು(ಫೆ. 1) ಅಧಿಕಾರ ಸ್ವೀಕರಿಸಲಿದ್ದಾರೆ.
ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧನಕ್ಕೂ ಮುನ್ನ ತಮ್ಮ ಬೆಂಬಲಿಗರೊಂದಿಗೆ ಜ. 31ರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.
ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಸೇನೆಗೆ ಸೇರಿದ ನೂರಾರು ಕೋಟಿ ರೂ. ಬೆಲೆ ಬಾಳುವ ಸುಮಾರು 7 ಎಕರೆ ಭೂಮಿಯನ್ನು ಅಕ್ರಮ ದಾಖಲೆ ಸೃಷ್ಟಿಸುವ ಮೂಲಕ ಕಬಳಿಸಿದ ಆರೋಪ ಹೇಮಂತ್ ಸೊರೇನ್ ಮೇಲಿದೆ. ಈ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಸೇರಿದಂತೆ 14 ಜನರನ್ನು ಇ.ಡಿ. ಈಗಾಗಲೇ ಬಂಧಿಸಿದೆ.