ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಭಾರದ ಲೋಹ ಅಂಶಗಳಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ), ಇವುಗಳನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಯೋಗಾಲಯದಲ್ಲಿ ಸಮಗ್ರ ವಿಶ್ಲೇಷಣೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.
ಪರಿಸರ ನಿರ್ವಹಣೆ ಹಾಗೂ ನೀತಿ ಸಂಶೋಧನಾ ಸಂಸ್ಥೆಯ (ಎಂಪ್ರಿ) ಅಧ್ಯಯನ ವರದಿಗಳನ್ನು ಉಲ್ಲೇಖಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನ್ಯಾಯಮಂಡಳಿಗೆ ಕಿರು ವರದಿ ಸಲ್ಲಿಸಿದೆ.
ಈ ಸುದ್ದಿ ಓದಿದ್ದೀರಾ? ನ್ಯಾಷನಲ್ ಹೆರಾಲ್ಡ್ ಆಸ್ತಿ ಜಪ್ತಿ: ಇಡಿ ವಿರುದ್ಧ ಕಪಿಲ್ ಸಿಬಲ್ ಆಕ್ರೋಶ
ತರಕಾರಿಗಳ ಮಾಲಿನ್ಯದ ಪ್ರಮಾಣವನ್ನು ಅರ್ಥ ಮಾಡಿಕೊಳ್ಳಲು ಹಾಗೂ ಅದರ ಮೂಲದ ಕುರಿತು ರಾಜ್ಯ ಮಟ್ಟದಲ್ಲಿ ಆಳ ಹಾಗೂ ಸಮಗ್ರವಾದ ತನಿಖೆ ನಡೆಸಬೇಕು ಹಾಗೂ ಇದಕ್ಕೆ ವಿವಿಧ ಇಲಾಖೆಗಳ ಸಹಯೋಗ ಪಡೆಯಬೇಕು ಎಂದು ಮಂಡಳಿಯು ವರದಿಯಲ್ಲಿ ತಿಳಿಸಿದೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಎಂಪ್ರಿಯನ್ನು ಪ್ರತಿವಾದಿಗಳನ್ನಾಗಿ ಪೀಠ ಸೇರ್ಪಡೆಗೊಳಿಸಿದೆ. ಭಾರದ ಲೋಹ ವಿಷಯದ ಬಗ್ಗೆ ತಳಮಟ್ಟದ ವಾಸ್ತವ ಸ್ಥಿತಿಯ ಪರಿಶೀಲನೆ ನಡೆಸಬೇಕು ಹಾಗೂ ಎಂಪ್ರಿ ವರದಿಯನ್ನು ಸಮರ್ಪಕವಾಗಿ ಪರಿಶೀಲಿಸಿ ವರದಿ ನೀಡಬೇಕು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದೆ.
ಪ್ರಕರಣವನ್ನು ದಕ್ಷಿಣ ವಲಯ ಪೀಠಕ್ಕೆ ವರ್ಗಾಯಿಸಿರುವ ಪ್ರಧಾನ ಪೀಠವು ವಿಚಾರಣೆಯನ್ನು 2024ರ ಜನವರಿ 10ಕ್ಕೆ ಮುಂದೂಡಿದೆ.