ಬೇರೆ ರಾಜ್ಯದಲ್ಲಿ ಎಫ್ಐಆರ್ ದಾಖಲಾಗಿದ್ದರೂ ಕೂಡ ಹೈಕೋರ್ಟ್ ಮತ್ತು ಸೆಷನ್ಸ್ ನ್ಯಾಯಾಲಯಗಳು ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ.
ನ್ಯಾಯದ ಹಿತಕ್ಕಾಗಿ, ಜನರ ಸ್ವಾತಂತ್ರ್ಯ ಪರಿಗಣಿಸುವಾಗ ನ್ಯಾಯಾಲಯಗಳು ಕೆಲವು ಷರತ್ತುಗಳೊಂದಿಗೆ ಸೀಮಿತ ಮಧ್ಯಂತರ ರಕ್ಷಣೆ ಒದಗಿಸಬೇಕು ಎಂದು ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಅಭಿಪ್ರಾಯಟ್ಟಿತು.
ಅಂತಹ ಪ್ರಕರಣಗಳಲ್ಲಿ ಪ್ರಯಾಣಿಸುವ ಸಂದರ್ಭದ ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ಷರತ್ತುಗಳನ್ನು ವಿಧಿಸಿದೆ.
ಅಂತಹ ರಕ್ಷಣೆ ನೀಡುವ ಮೊದಲ ದಿನ ತನಿಖಾಧಿಕಾರಿ (ಐಒ) ಮತ್ತು ತನಿಖಾ ಸಂಸ್ಥೆಗೆ ನೋಟಿಸ್ ನೀಡಬೇಕು. ಅರ್ಜಿದಾರರು ಬೇರೆ ಅಧಿಕಾರ ವ್ಯಾಪ್ತಿಯ ನ್ಯಾಯಾಲಯವನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಾಲಯಕ್ಕೆ ತೃಪ್ತಿಯಾಗಬೇಕು. ಜೀವ ಬೆದರಿಕೆ ಮತ್ತು ಸ್ವಾತಂತ್ರ್ಯದ ಉಲ್ಲಂಘನೆಯನ್ನು ಇದು ಒಳಗೊಳ್ಳುತ್ತದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’
ನಿರೀಕ್ಷಣಾ ಜಾಮೀನು ನೀಡುವಾಗ ಸಂಬಂಧಪಟ್ಟ ನ್ಯಾಯಾಲಯವು ಪ್ರಾದೇಶಿಕ ಸಾಮೀಪ್ಯವನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ನ್ಯಾಯಪೀಠ ಒತ್ತಿಹೇಳಿತು.
ಇದಲ್ಲದೆ, ಫೋರಂ ಶಾಪಿಂಗ್ (ಅನುಕೂಲಕರ ತೀರ್ಪು ಪಡೆಯುವುದಕ್ಕಾಗಿ ನಿರ್ದಿಷ್ಟ ನ್ಯಾಯಾಲಯವನ್ನು ಆಯ್ಕೆ ಮಾಡಿಕೊಳ್ಳುವ ತಂತ್ರ) ವಿರುದ್ಧವೂ ಎಚ್ಚರಿಕೆ ನೀಡಿದ ನ್ಯಾಯಾಲಯ, ಸ್ಪಷ್ಟ ಕಾರಣಗಳಿಲ್ಲದೆ ಜಾಮೀನು ಅರ್ಜಿಗಳನ್ನು ಸಲ್ಲಿಸಲು ಆರೋಪಿಗಳು ಬೇರೆ ಯಾವುದೇ ರಾಜ್ಯಕ್ಕೆ ಪ್ರಯಾಣಿಸುವಂತಿಲ್ಲ ಎಂದು ಸ್ಪಷ್ಟಪಡಿಸಿತು.
ವರದಕ್ಷಿಣೆ ಕಿರುಕುಳದ ಆರೋಪದಡಿ ತನ್ನ ಪತಿ ವಿರುದ್ಧ ಪತ್ನಿಯೊಬ್ಬರು ರಾಜಸ್ಥಾನದಲ್ಲಿ ಎಫ್ಐಆರ್ ದಾಖಲಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಆದರೆ ಆರೋಪಿ ಪತಿಗೆ ಬೆಂಗಳೂರಿನ ಜಿಲ್ಲಾ ನ್ಯಾಯಾಧೀಶರು ನಿರೀಕ್ಷಣಾ ಜಾಮೀನು ನೀಡಿದ್ದರು. ಇದನ್ನು ಪ್ರಶ್ನಿಸಿ ಪತ್ನಿಯು ಸಲ್ಲಿಸಿದ್ದ ಮೇಲ್ಮನವಿ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕಳೆದ ಮಾರ್ಚ್ನಲ್ಲಿ ನೋಟಿಸ್ ನೀಡಿತ್ತು.
ಮಹಿಳೆಯ ಪರವಾಗಿ ಹಾಜರಾದ ಹಿರಿಯ ವಕೀಲ ಕೆ. ಪಾಲ್, ಈ ವಿಷಯದಲ್ಲಿ ವಿವಿಧ ಹೈಕೋರ್ಟ್ಗಳು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿವೆ. ಹೀಗಾಗಿ ಸುಪ್ರೀಂ ಕೋರ್ಟ್ ಇದನ್ನು ಇತ್ಯರ್ಥಪಡಿಸಬೇಕಿದೆ ಎಂದು ಗಮನಸೆಳೆದರು.