ಜಾರ್ಖಂಡ್ನಲ್ಲಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ನಡುವೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಪ್ರತಿಭಟನಾ ನಿರತ ಉದ್ಯೋಗಾಕಾಂಕ್ಷಿಗಳ ಬೇಡಿಕೆಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಶೀಲಿಸುತ್ತಿದ್ದು, ಎಲ್ಲ ಆಯಾಮಗಳನ್ನು ಪರಿಶೀಲಿಸಿದ ಬಳಿಕ ಸೂಕ್ತ ಸಮಯದಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜುಲೈ 29ರಿಂದ ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ನೂರಾರು ಉದ್ಯೋಗಾಕಾಂಕ್ಷಿಗಳು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಜಾರ್ಖಂಡ್ ಲೋಕಸೇವಾ ಆಯೋಗ (JPSC) ಹಾಗೂ ಇತರೆ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆರೋಪಿತ ಅಕ್ರಮಗಳ ಕುರಿತು ರಾಜ್ಯದ ಹೊರಗಿನ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸ್ವತಂತ್ರ ಸಮಿತಿಯಿಂದ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.
“ಅವರ ಬೇಡಿಕೆಗಳು ಮತ್ತು ಅನುಮಾನಗಳನ್ನು ಅತ್ಯಂತ ಗಂಭೀರವಾಗಿ ಪರಿಶೀಲಿಸಲಾಗುತ್ತಿದೆ. ಎಲ್ಲ ಅಂಶಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದ ಬಳಿಕ ಸೂಕ್ತ ಸಮಯದಲ್ಲಿ ಸರ್ಕಾರ ತನ್ನ ನಿರ್ಧಾರ ಪ್ರಕಟಿಸಲಿದೆ. ಪ್ರತಿಭಟನಾಕಾರರ ಆತಂಕಗಳಿಗೆ ಪರಿಹಾರ ಸಿಗಲಿದೆ ಎಂಬ ವಿಶ್ವಾಸವಿದೆ” ಎಂದು ಹೇಮಂತ್ ಸೊರೆನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆದರೆ, ರಾಜ್ಯ ಸಿಐಡಿಗೆ ತನಿಖೆ ವಹಿಸುವ ಮೂಲಕ ಸರ್ಕಾರ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಹಿಂದೆ ಅವರು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ (ED) ತನಿಖೆಗೆ ಒತ್ತಾಯಿಸಿದ್ದರು. ಈಗ ಜಾರ್ಖಂಡ್ ಹೊರಗಿನ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸ್ವತಂತ್ರ ಸಮಿತಿಯಿಂದ ತನಿಖೆ ನಡೆಸಬೇಕೆಂದು ಹೊಸ ಬೇಡಿಕೆ ಮುಂದಿಟ್ಟಿದ್ದಾರೆ.
“ನಡೆಯುತ್ತಿರುವ ಸಿಐಡಿ ತನಿಖೆಯ ಮೇಲೆ ನಮಗೆ ಸಂಪೂರ್ಣವಾಗಿ ವಿಶ್ವಾಸ ಕಳೆದುಹೋಗಿದೆ” ಎಂದು ಹಜಾರಿಬಾಗ್ನ ಉದ್ಯೋಗಾಕಾಂಕ್ಷಿ ವಿನಯ್ ಮೆಹ್ತಾ ಹೇಳಿದ್ದಾರೆ. ಜೆಎಸ್ಎಸ್ಸಿ-ಸಿಜಿಎಲ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ 150 ಪ್ರಶ್ನೆಗಳ ಪೈಕಿ 135 ಪ್ರಶ್ನೆಗಳ ಉತ್ತರಗಳು ಸೋರಿಕೆಯಾಗಿದ್ದವು ಹಾಗೂ 120 ಪ್ರಶ್ನೆಗಳು ಪರೀಕ್ಷೆಯ ಪ್ರಶ್ನೆಪತ್ರಿಕೆಯೊಂದಿಗೆ ಹೊಂದಿಕೆಯಾಗಿದ್ದವು ಎಂದು ಸಿಐಡಿಯೇ ಪತ್ತೆಹಚ್ಚಿದ್ದರೂ, ಅಭ್ಯರ್ಥಿಗಳು ಸಾಕ್ಷ್ಯಗಳನ್ನು ನೀಡಿದ ಬಳಿಕವೂ ಯಾವುದೇ ಅರ್ಥಪೂರ್ಣ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ರಘುವರ್ ದಾಸ್ ಕೂಡ ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ನೇರ ಸಂವಾದ ನಡೆಸಬೇಕು ಹಾಗೂ ಸಿಬಿಐ ತನಿಖೆಯ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
ಜಂಶೆಡ್ಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿದ್ಯಾರ್ಥಿಗಳು ಕಾರಣವಿಲ್ಲದೆ ಬೀದಿಗಿಳಿದಿಲ್ಲ. ನೇಮಕಾತಿ ಪರೀಕ್ಷೆಗಳಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಅವರೊಂದಿಗೆ ನೇರವಾಗಿ ಮಾತುಕತೆ ನಡೆಸಿ ನ್ಯಾಯ ಒದಗಿಸಬೇಕು. ಮಾಜಿ ಮುಖ್ಯಮಂತ್ರಿಯಾಗಿ ಅಥವಾ ರಾಜಕೀಯ ಉದ್ದೇಶದಿಂದ ಆಗ್ರಹಿಸುತ್ತಿಲ್ಲ. ವಿದ್ಯಾರ್ಥಿ ಚಳವಳಿಗಳ ಹಿನ್ನೆಲೆ ತಿಳಿದ ವ್ಯಕ್ತಿಯಾಗಿ ಆಗ್ರಹಿಸುತ್ತಿದ್ದೇನೆ. ಈ ಬಗ್ಗೆ ವಿವರವಾದ ಪತ್ರವನ್ನೂ ಬರೆದಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದರು.
ಉದ್ಯೋಗಾಕಾಂಕ್ಷಿಗಳ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ ಎರಡನೇ ವಾರಕ್ಕೆ ಕಾಲಿಟ್ಟಿದೆ. ಸ್ವತಂತ್ರ ತನಿಖೆಗೆ ಆದೇಶಿಸುವವರೆಗೆ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರರು ಘೋಷಿಸಿದ್ದಾರೆ.
ಇದನ್ನೂ ಓದಿ: ನಟಿ ತ್ರಿಶಾ ಕುರಿತು ಹೇಳಿಕೆ ವಿವಾದ; ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಆದೇಶ
ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಅವರ ಮೊದಲ ಪುಣ್ಯತಿಥಿಯ ಅಂಗವಾಗಿ ಅವರ ನಿವಾಸದವರೆಗೆ ಮೆರವಣಿಗೆ ನಡೆಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ಅಲ್ಲದೆ, ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಆಗಸ್ಟ್ 10ರಂದು ಜಾರ್ಖಂಡ್ ವಿಧಾನಸಭೆಗೆ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಚಳವಳಿಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (AISA) ಆಗಸ್ಟ್ 7ರಂದು ವಿಧಾನಸಭೆ ಚಲೋ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ. ಕಾಕ್ರೋಚ್ ಜನತಾ ಪಾರ್ಟಿ (CJP) ಕೂಡ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಪ್ರತಿಭಟನೆಯ ಪ್ರಮುಖ ಮುಖಂಡ ದೇವೇಂದ್ರನಾಥ್ ಮಹತೋ ಕೇಂದ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ಕಳೆದ ಭಾನುವಾರ ರಾತ್ರಿ ಇಂದೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಇದೀಗ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಪತ್ನಿ ಹಾಗೂ ಜೆಎಂಎಂ ಶಾಸಕಿ ಕಲ್ಪನಾ ಸೊರೆನ್ ಕೂಡ ಪ್ರತಿಭಟನಾಕಾರರ ಆತಂಕಗಳಿಗೆ ಸರ್ಕಾರ ಅತ್ಯಂತ ಸೂಕ್ಷ್ಮವಾಗಿ ಸ್ಪಂದಿಸುತ್ತಿದ್ದು, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.




