ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕಿನಿಂದ ಇಬ್ಬರು ಮೃತಪಟ್ಟಿರುವುದು ಖಚಿತವಾಗುತ್ತಿದ್ದಂತೆಯೇ ಅಕ್ಕಪಕ್ಕದ ಜಿಲ್ಲೆಗಳಾದ ಕಣ್ಣೂರು, ವಯನಾಡು ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಘೋಷಿಸಿದೆ. ಇತ್ತ ಕರ್ನಾಟಕ, ಕೇರಳ ಗಡಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ.
ಕೇರಳ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾತನಾಡಿ, “ಆರೋಗ್ಯ ಇಲಾಖೆ ಐಸಿಎಂಆರ್ ಸಂಪರ್ಕಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ನಿಫಾ ವೈರಸ್ ಸೋಂಕಿತರಿಗೆ ಚಿಕಿತ್ಸೆಗೆ ಅಗತ್ಯವಾದ ಔಷಧಿಗಳು ಲಭ್ಯವಿದೆ ಎಂದು ಮಾಹಿತಿ ನೀಡಲಾಗಿದೆ. ಕೋಝಿಕ್ಕೋಡ್ ಜಿಲ್ಲೆಯಲ್ಲಿಯೇ ಎರಡು ನಿಫಾ ವೈರಸ್ ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಜಿಲ್ಲೆಯ 7 ಗ್ರಾಮಗಳನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಣೆ ಮಾಡಲಾಗಿದೆ. ಸೋಂಕು ಪೀಡಿತ ಪ್ರದೇಶಗಳಲ್ಲಿ ಶಾಲಾ ಕಾಲೇಜು ಮತ್ತು ಸರ್ಕಾರಿ ಕಚೇರಿಗಳನ್ನು ಅಧಿಕಾರಿಗಳು ಮುಚ್ಚಿದ್ದಾರೆ” ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಂಡುಬರುವ ನಿಫಾ ವೈರಸ್ ಬಾಂಗ್ಲಾದೇಶದ ರೂಪಾಂತರವಾಗಿದ್ದು ಅದು ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ ಮತ್ತು ಇದು ಕಡಿಮೆ ಸಾಂಕ್ರಾಮಿಕವಾಗಿದ್ದರೂ ಹೆಚ್ಚಿನ ಮರಣ ಪ್ರಮಾಣವನ್ನು ಹೊಂದಿದೆ ಎಂದು ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಮುಂದಿನ ಸೂಚನೆ ಬರುವವರೆಗೆ ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾದ ಏಳು ಗ್ರಾಮ ಪಂಚಾಯಿತಿಗಳ 43 ವಾರ್ಡ್ಗಳ ಒಳಗೆ ಮತ್ತು ಹೊರಗೆ ಹೋಗಲು ಯಾರಿಗೂ ಅವಕಾಶವಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೀಡಿತ ಪ್ರದೇಶಗಳನ್ನು ಸುತ್ತುವರಿಯಲು ಪೊಲೀಸರಿಗೆ ಸೂಚಿಸಲಾಗಿದೆ.
ಆದಾಗ್ಯೂ, ಅಗತ್ಯ ವಸ್ತುಗಳು ಮತ್ತು ಔಷಧಿಗಳನ್ನು ಮಾರಾಟ ಮಾಡುವ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಲಾಗುವುದು. ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ತೆರೆದಿರುತ್ತವೆ, ಆದರೆ ಆರೋಗ್ಯ ಕೇಂದ್ರಗಳು ಮತ್ತು ಔಷಧಾಲಯಗಳಿಗೆ ಯಾವುದೇ ಸಮಯದ ನಿರ್ಬಂಧ ನೀಡಲಾಗಿಲ್ಲ.
ಕಂಟೈನ್ಮೆಂಟ್ ವಲಯಗಳಲ್ಲಿ, ಜನರು ಮಾಸ್ಕ್ ಧರಿಸಬೇಕು, ಆಲ್ಕೋಹಾಲ್ ಆಧಾರಿತ ಸ್ಯಾನಿಟೈಸರ್ಗಳನ್ನು ಬಳಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಯಾವುದೇ ಬಸ್ಗಳು ಅಥವಾ ವಾಹನಗಳನ್ನು ಪೀಡಿತ ಪ್ರದೇಶಗಳಲ್ಲಿ ನಿಲ್ಲಿಸಲು ಅನುಮತಿಸಲಾಗುವುದಿಲ್ಲ.
ಈ ಸುದ್ದಿ ಓದಿದ್ದೀರಾ? ಕೇರಳಕ್ಕೆ ಮತ್ತೆ ವಕ್ಕರಿಸಿದ ‘ನಿಫಾ ವೈರಸ್’; ಇಬ್ಬರ ಸಾವು ದೃಢಪಡಿಸಿದ ಕೇಂದ್ರ ಆರೋಗ್ಯ ಸಚಿವ
ಮುಖ್ಯಮಂತ್ರಿ ಮನವಿ
ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕು ದೃಢಪಟ್ಟ ಕೂಡಲೇ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜನರು ಭಯಭೀತರಾಗಬೇಡಿ ಮತ್ತು ಬದಲಾಗಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಪ್ರತಿಯೊಬ್ಬರು ಆರೋಗ್ಯ ಇಲಾಖೆ ಮತ್ತು ಪೊಲೀಸರ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ನಿರ್ಬಂಧಗಳಿಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಸೋಂಕಿತ ಬಾವಲಿಗಳು, ಹಂದಿಗಳ ದ್ರವದ ಮೂಲಕ ಮನುಷ್ಯರಿಗೆ ನಿಫಾ ವೈರಸ್ ಹರಡುತ್ತದೆ. ನಂತರದಲ್ಲಿ ಮನುಷ್ಯರಿಂದ ಮನುಷ್ಯರಿಗೆ ಸೋಂಕು ಉಲ್ಬಣಗೊಳ್ಳುತ್ತದೆ. ಅಲ್ಲದೆ ಇಲ್ಲಿಯವರೆಗೂ 130 ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಲಾಗಿದೆ ಎಂದು ಕೇರಳದ ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿಫಾ ಎಚ್ಚರಿಕೆಯ ನಡುವೆ, ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್ಐವಿ) ತಂಡಗಳು ಕೇರಳಕ್ಕೆ ಆಗಮಿಸಲಿದ್ದು, ನಿಫಾ ಪರೀಕ್ಷೆ ಮತ್ತು ಬಾವಲಿಗಳ ಸಮೀಕ್ಷೆಯನ್ನು ನಡೆಸಲು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಮೊಬೈಲ್ ಲ್ಯಾಬ್ ಅನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
2018, 2021ರಲ್ಲಿ ಪತ್ತೆಯಾಗಿದ್ದ ಸೋಂಕು
ಕೋಝಿಕ್ಕೋಡ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಇಬ್ಬರು ವೈರಸ್ ಸೋಂಕಿತರು ಸಾವನ್ನಪ್ಪಿದ್ದಾರೆ, ಆರೋಗ್ಯ ಸಚಿವರ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಸದ್ಯ ಎರಡು ಸಕ್ರಿಯ ಪ್ರಕರಣಗಳಿವೆ. ಕೇಂದ್ರ ಆರೋಗ್ಯ ಸಚಿವಾಲಯ ತಜ್ಞರ ಎರಡು ತಂಡಗಳನ್ನು ಕೇರಳಕ್ಕೆ ಕಳಿಸಿದೆ. ಈ ಹಿಂದೆಯೇ ಕೇರಳದಲ್ಲಿ 2018 ಮತ್ತು 2021ರಲ್ಲಿ ರಾಜ್ಯದಲ್ಲಿ ಸೋಂಕು ಪತ್ತೆಯಾಗಿತ್ತು.
ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ
ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ ಕರ್ನಾಟಕ ಗಡಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ದಿನ ಸಾವಿರಾರು ಜನರು ಎರಡೂ ರಾಜ್ಯಗಳ ನಡುವೆ ಸಂಚಾರ ನಡೆಸುತ್ತಾರೆ. ಸೋಂಕು ಹರಡದಂತೆ ತಡೆಯಲು ನಾವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಬುಧವಾರ ರಾಜ್ಯದ ಆರೋಗ್ಯ ಇಲಾಖೆ ಈ ಕುರಿತು ಮಾರ್ಗಸೂಚಿ ಪ್ರಕಟಿಸುವ ನಿರೀಕ್ಷೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಹೇಳಿದೆ.