ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರ ನೇಮಕ ಸಂಬಂಧ ಕಳೆದ ವರ್ಷದ ಡಿಸೆಂಬರ್ನಲ್ಲಿ ನೂತನ ಮಸೂದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಆದರೆ ನೂತನ ಮಸೂದೆಗೆ ತಡೆ ನೀಡಲು ಸುಪ್ರೀಂ ನಿರಾಕರಿಸಿದೆ.
ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ನೇತೃತ್ವದ ಪೀಠವು ನೂತನ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ನಾವು ನೋಟಿಸ್ ಜಾರಿಗೊಳಿಸಿದ್ದೇವೆ. ಆದರೆ ಕಾನೂನಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.
ಹಿರಿಯ ನ್ಯಾಯವಾದಿ ವಿಕಾಸ್ ಸಿಂಗ್, ಅರ್ಜಿದಾರರ ಪರವಾಗಿ ಹಾಜರಾಗಿದ್ದ ಜಯ ಠಾಕೂರ್ ಅವರು ನೂತನ ಮಸೂದೆಯು ಅಧಿಕಾರದ ಪ್ರತ್ಯೇಕತೆಗೆ ವಿರುದ್ಧವಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಮಸೂದೆಯನ್ನು ಸಂವಿಧಾನದ ಪೀಠಕ್ಕೆ ವರ್ಗಾಯಿಸಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.
ನೂತನ ಮಸೂದೆಗೆ ತಡೆ ನೀಡಲು ಸಾಧ್ಯವಿಲ್ಲ. ಪ್ರಕರಣದ ಅರ್ಜಿಯ ವಿಚಾರಣೆಯನ್ನು 2024ರ ಏಪ್ರಿಲ್ಗೆ ಮುಂದೂಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್ ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ
ಮಾರ್ಪಡಿಸಿದ ನೂತನ ಕಾಯ್ದೆಯಲ್ಲಿ ಚುನಾವಣಾ ಆಯುಕ್ತರ ನೇಮಕದ ಸಮಿತಿಯಲ್ಲಿ ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ಧವಾಗಿ ಮುಖ್ಯ ನ್ಯಾಯಾಧೀಶರ ಬದಲಾಗಿ ಪ್ರಧಾನಿ ಹಾಗೂ ವಿಪಕ್ಷ ನಾಯಕ ಒಳಗೊಂಡಿರುವುದನ್ಬು ಅರ್ಜಿದಾರರು ಪ್ರಶ್ನಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಕಚೇರಿಯ ನಿಯಮಗಳು) ಕಾಯಿದೆ, 2023 ರ ವಿರುದ್ಧ ಮಧ್ಯ ಪ್ರದೇಶ ಕಾಂಗ್ರೆಸ್ ನಾಯಕಿ ಜಯ ಠಾಕೂರ್ ಹಾಗೂ ಹಿರಿಯ ನ್ಯಾಯವಾದಿ ವಿಕಾಸ್ ಸಿಂಗ್ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದಾರೆ.
ಹೊಸ ಮಸೂದೆಯು ಸಂವಿಧಾನದ 14,21,50 ಹಾಗೂ 324ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ಘೋಷಿಸಬೇಕು. ಏಕೆಂದರೆ ಇದು ಸಂವಿಧಾನ ಬದ್ಧವಾದ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವುದಕ್ಕೆ ವಿರುದ್ಧವಾಗಿದೆ ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದರು.
ಕಾನೂನು ಹಾಗೂ ನ್ಯಾಯಾಂಗ ಸಚಿವಾಲಯವು 2023ರ ಡಿಸೆಂಬರ್ 28ರಂದು ನೂತನ ಮಸೂದೆಯ ಬಗ್ಗೆ ಸುತ್ತೋಲೆ ಹೊರಡಿಸಿದೆ.