ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಯನ್ನು ಆರಂಭಿಸಿದ್ದು ದೇವಾಲಯದಲ್ಲಿ ಹಲವು ಮಂದಿಯನ್ನು ಪ್ರಶ್ನಿಸಿದೆ. ಭಕ್ತರು ನೀಡುವ ಕಾಣಿಕೆಗಳನ್ನು ಸ್ವೀಕರಿಸುವ, ಎಣಿಸುವ ಮತ್ತು ಠೇವಣಿ ಇಡುವ ಕಾರ್ಯವಿಧಾನಗಳು ಹಾಗೂ ಬೆಲೆಬಾಳುವ ವಸ್ತುಗಳು ಮತ್ತು ನಿಧಿಗಳ ಲೆಕ್ಕಪತ್ರದ ಬಗ್ಗೆ ಮುಖ್ಯವಾಗಿ ತನಿಖೆ ನಡೆಸಲಾಗುತ್ತಿದೆ. ಜೂನ್ 16ರಂದು ಅಯೋಧ್ಯೆಗೆ ಆಗಮಿಸಿದ ತಂಡವು 24 ಗಂಟೆಗಳ ಕಾಲ ತನಿಖೆ ಮುಂದುವರೆಸಿದೆ ಎಂದು ವರದಿಯಾಗಿದೆ.
ದಿ ಇಂಡಿಯನ್ ಎಕ್ಸ್ಪ್ರೆಸ್ ಪ್ರಕಾರ, ಎಸ್ಐಟಿ ತಂಡವು ದೇಣಿಗೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದೆ. ದೇವಾಲಯದ ಖಾತೆಗಳನ್ನು ನಿರ್ವಹಿಸುವ ಎಲ್ಲ ಅಧಿಕಾರಿಗಳು, ಉದ್ಯೋಗಿಗಳು ಮತ್ತು ವ್ಯಕ್ತಿಗಳ ವಿವರಗಳನ್ನು ಕೋರಿದೆ. ಭಕ್ತರು ದಾನ ಮಾಡುವ ಚಿನ್ನ, ಬೆಳ್ಳಿ ಮತ್ತು ವಜ್ರದ ಆಭರಣಗಳ ಲೆಕ್ಕಪತ್ರ ನಿರ್ವಹಣೆ ಮತ್ತು ಭದ್ರತೆಯಲ್ಲಿ ತೊಡಗಿರುವವರ ಬಗ್ಗೆಯೂ ಎಸ್ಐಟಿ ಪರಿಶೀಲನೆ ನಡೆಸುತ್ತಿದೆ.
ಇದನ್ನು ಓದಿದ್ದೀರಾ? ರಾಮಮಂದಿರ ದೇಣಿಗೆ ದುರುಪಯೋಗ: ಬಿಜೆಪಿಯ ಬ್ರಿಜ್ ಭೂಷಣ್ ಆರೋಪಗಳ ಸುತ್ತ
ದೇವಾಲಯದ ದೇಣಿಗೆ ನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾರ್ವಜನಿಕ ವಿಶ್ವಾಸವನ್ನು ಕಾಪಾಡಿಕೊಳ್ಳಲು ನ್ಯಾಯಾಂಗ ತನಿಖೆಗೆ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಒತ್ತಾಯಿಸಿದೆ. ರಾಮಮಂದಿರದಲ್ಲಿ ಭಕ್ತರ ದೇಣಿಗೆ ದುರುಪಯೋಗ ಮಾಡಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಸಂಸದೆ ಡಿಂಪಲ್ ಯಾದವ್ ಮತ್ತು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸೇರಿದಂತೆ ಹಲವು ಮಂದಿ ಆರೋಪಿಸಿದ್ದಾರೆ.
ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಕೂಡಾ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗ ನಡೆದಿದೆ ಎಂದು ಆರೋಪಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮತ್ತು ರಾಮಮಂದಿರ ಟ್ರಸ್ಟ್ ಕೆಲವು ಪ್ರಮುಖ ಪದಾಧಿಕಾರಿಗಳನ್ನು ಉಲ್ಲೇಖಿಸಿ ಮಾತನಾಡುತ್ತಾ, “ಕೆಲವರು ರಾಮಮಂದಿರ ಆಂದೋಲನವನ್ನು ತಮ್ಮ ವೈಯಕ್ತಿಕ ಆಸ್ತಿ ಮತ್ತು ರಾಜಕೀಯ ಬೆಳವಣಿಗೆಗೆ ಬಳಸಿಕೊಂಡರು. ಜನಸಾಮಾನ್ಯರು ಭಕ್ತಿಯಿಂದ ನೀಡಿದ ಹಣ ದುರುಪಯೋಗವಾಗಿದೆ” ಎಂದು ದೂರಿದ್ದಾರೆ.




