2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಬಂಧಿತರಾಗಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್, ಶರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮತ್ತು ಮೀರನ್ ಹೈದರ್ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 7ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠ ಅರ್ಜಿಯ ವಿಚಾರಣೆಯಲ್ಲಿ ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ ಮಾಡಿದೆ.
ವಿಚಾರಣೆ ವೇಳೆ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಆರೋಪಿ ವಿದ್ಯಾರ್ಥಿಗಳು ಐದು ವರ್ಷಕ್ಕಿಂತ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ವಿಷಯವನ್ನು ನಾವು ಆಲಿಸುತ್ತೇವೆ” ಎಂದು ತಿಳಿಸಿತು.
ಶರ್ಜೀಲ್ ಇಮಾಮ್ ಅವರು ಸೆಪ್ಟೆಂಬರ್ 6ರಂದು, ದೆಹಲಿ ಹೈಕೋರ್ಟ್ ತಮಗೆ ಜಾಮೀನು ನಿರಾಕರಿಸಿದ ಬಳಿಕ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದರು. ಇದೇ ರೀತಿಯಾಗಿ ಉಮರ್ ಖಾಲಿದ್ ಕೂಡ ಸೆಪ್ಟೆಂಬರ್ 10ರಂದು ತೀರ್ಪನ್ನು ಪ್ರಶ್ನಿಸಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಳಂದ’ ಕ್ಷೇತ್ರದ ಆಕ್ಷೇಪಕ್ಕೆ ಅರೆಬರೆ ಉತ್ತರಕೊಟ್ಟ ಚುನಾವಣಾ ಆಯೋಗ
2019-2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸುವಲ್ಲಿ ಮುಂಚೂಣಿಯಲ್ಲಿದ್ದ ವಿದ್ಯಾರ್ಥಿ ಕಾರ್ಯಕರ್ತರಾದ ಈ ಅರ್ಜಿದಾರರು, 2020 ರ ಫೆಬ್ರವರಿ ಕೊನೆಯ ವಾರದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಸಾಮುದಾಯಿಕ ಗಲಭೆಗಳ ಹಿಂದಿನ “ದೊಡ್ಡ ಪಿತೂರಿ” ರೂಪಿಸಿದ ಆರೋಪದ ಮೇಲೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಮತ್ತು ಭಾರತೀಯ ದಂಡ ಸಂಹಿತೆಯಡಿ ಆರೋಪಗಳನ್ನು ಎದುರಿಸುತ್ತಿದ್ದಾರೆ.
2020ರ ದೆಹಲಿ ಗಲಭೆ ಪ್ರಕರಣವು ಭಾರತದ ಇತ್ತೀಚಿನ ಇತಿಹಾಸದಲ್ಲಿ ಒಂದು ಪ್ರಮುಖ ಘಟನೆಯಾಗಿದೆ. ಈ ಗಲಭೆಗಳು, ಪೌರತ್ವ ತಿದ್ದುಪಡಿ ಕಾಯ್ದೆ (CAA) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಭುಗಿಲೆದ್ದವು. ಈ ಪ್ರಕರಣದ ಸುತ್ತ ಹಲವು ರಾಜಕೀಯ, ಸಾಮಾಜಿಕ ಮತ್ತು ಕಾನೂನು ಅಂಶಗಳು ಹೆಣೆದುಕೊಂಡಿವೆ. ಪ್ರಮುಖವಾಗಿ, ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಸೇರಿದಂತೆ ಹಲವು ಕಾರ್ಯಕರ್ತರ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (UAPA) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರ ಜಾಮೀನು ಅರ್ಜಿಗಳು ಸುಪ್ರೀಂ ಕೋರ್ಟ್ಗೆ ತಲುಪಿದ್ದು, ಈ ಪ್ರಕರಣದ ಮಹತ್ವವನ್ನು ಹೆಚ್ಚಿಸಿದೆ.
