- ಮೀಸಲು ಹೆಚ್ಚಳದ ಶಿಫಾರಸಿಗೆ ಒಪ್ಪಿಗೆ ನೀಡಿದ ರಾಜ್ಯ ಸಚಿವ ಸಂಪುಟ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳದ ಭರವಸೆ ನೀಡಿದ್ದ ಸರ್ಕಾರ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ಕುರಿತು ಕರ್ನಾಟಕ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣದ ಹೆಚ್ಚಳದ ಕುರಿತು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ಎಸ್ಸಿ ಮತ್ತು ಎಸ್ಟಿ ಸಮುದಾಯದ ಓಲೈಕೆಗೆ ಮುಂದಾಗಿತ್ತು. ಆದರೆ, ಮೀಸಲು ಹೆಚ್ಚಳದ ಕುರಿತು ಯಾವುದೇ ಪ್ರಸ್ತಾವವನ್ನೂ ಕೇಂದ್ರ ಸರ್ಕಾರದ ಅಂಗಳಕ್ಕೆ ತೆರಳಿಲ್ಲ ಎನ್ನುವುದನ್ನು ಬಿಜೆಪಿ ಸರ್ಕಾರವೇ ಹೇಳಿದೆ.
ಲೋಕಸಭೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ. ನಾರಾಯಣಸ್ವಾಮಿ, “ಪರಿಶಿಷ್ಟರ ಮೀಸಲು ಹೆಚ್ಚಿಸಲು ಕರ್ನಾಟಕ ಸರ್ಕಾರ ಕಾಯಿದೆ ಜಾರಿಗೆ ತಂದಿದೆ. ಅದರ ಪ್ರಕಾರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಹಾಗೂ ಅಲ್ಪಸಂಖ್ಯಾತರ ಮೀಸಲು ಪ್ರಮಾಣ ಶೇ 56 ಆಗಲಿದೆ” ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲು ಪ್ರಮಾಣ ಹೆಚ್ಚಳದ ಕುರಿತು ಈಗಾಗಲೇ ತೆಗೆದುಕೊಂಡಿರುವ ನಿರ್ಣಯವನ್ನು ಸಂವಿಧಾನದ 9ನೇ ವಿಧಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಫೆಬ್ರುವರಿ 9ರಂದು ಕರ್ನಾಟಕದ ಸಚಿವ ಸಂಪುಟ ಸಭೆ ತೀರ್ಮಾನ ತೆಗೆದುಕೊಂಡಿತ್ತು.
ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಜಾತಿಗೆ ಶೇ.15ರಿಂದ ಶೇ.17 ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ.3ರಿಂದ ಶೇ.7ರಷ್ಟು ಮೀಸಲಾತಿ ಹೆಚ್ಚಿಸುವ ಕ್ರಮವನ್ನು ಸಂವಿಧಾನದ 9ನೇ ವಿಧಿಗೆ ಸೇರಿಸುವಂತೆ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ವಿಪಕ್ಷಗಳು ಸರ್ಕಾರದ ಮೇಲೆ ಒತ್ತಡ ಏರಿದ್ದವು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೀಸಲು ನಿರ್ಧಾರಕ್ಕೆ ಸಮ್ಮತಿ ನೀಡಿದ್ದರು.