ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್ಸಿ/ಎಸ್ಟಿ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಇದರಲ್ಲಿ 4149 ಪ್ರಕರಣಗಳಲ್ಲಿ ಮಾತ್ರವೇ 60 ದಿನಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರದ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
“60 ದಿನಗಳ ಒಳಗೆ ನೋಂದಣಿಯಾದ ಪ್ರಕರಣಗಳಲ್ಲಿ ಶೇ.63ರಷ್ಟು ಪ್ರಕರಣಗಳಲ್ಲಿ ಮಾತ್ರ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಇದರಲ್ಲಿ 36 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, ಸುಮಾರು 679 ಪ್ರಕರಣಗಳು ತನಿಖಾ ಹಂತದಲ್ಲಿವೆ. ಕಳೆದ ಆರು ತಿಂಗಳಲ್ಲಿ ಶೇ.84ರಷ್ಟು ಪ್ರಕರಣಗಳಲ್ಲಿ ಮಾತ್ರ ಆರೋಪ ಪಟ್ಟಿಯನ್ನು ಅವಧಿಯ ಒಳಗಾಗಿ ಸಲ್ಲಿಸಲಾಗಿದೆ. 60 ದಿನಗಳ ಒಳಗಾಗಿ ಎಲ್ಲ ಪ್ರಕರಣಗಳಲ್ಲೂ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
“ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ತರಲಾಗಿದೆ. ಪೊಲೀಸರು ಯಾವುದೇ ನೆಪವನ್ನೂ ಹೇಳದೆ ತಡೆಯಾಜ್ಞೆ ತೆರವುಗೊಳಿಸುವಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡುಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.
“ರಾಜ್ಯದಲ್ಲಿ ಈಗಾಗಲೇ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಶೀಘ್ರವೇ ಪ್ರಕರಣಗಳ ವಿಚಾರಣೆ ನಡೆಸಿ ನ್ಯಾಯ ಒದಗಿಸುವಲ್ಲಿ ಕೆಲಸ ನಿರ್ವಹಿಸಬೇಕು. ರಾಜ್ಯದಲ್ಲಿ 33 ಡಿಸಿಆರ್ಇ ಪೊಲೀಸ್ ಠಾಣೆಗಳನ್ನು ತೆರೆಯಲಾಗಿದ್ದು, ಸಿಬ್ಬಂದಿ ಕೊರತೆ ಇದ್ದಲ್ಲಿ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು” ಎಂದು ತಿಳಿಸಿದರು.
“ದೌರ್ಜನ್ಯ ಪ್ರಕರಣಗಳಲ್ಲಿ ಅತಿಹೆಚ್ಚು ದೂರು ದಾಖಲಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ದೂರುಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರವೇ ಎಫ್ಐಆರ್ ದಾಖಲಿಸಬೇಕು. ಸುಳ್ಳು ಜಾತಿ ಪ್ರಮಾಣಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗದುಕೊಳ್ಳಬೇಕು. ಸುಳ್ಳು ಪ್ರಮಾಣ ಪತ್ರಗಳ ಮೂಲಕ ಸವಲತ್ತುಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಬಾನು ಮುಷ್ತಾಕ್ ದಸರಾ ಉದ್ಘಾಟನೆ ಒಳ್ಳೆಯ ವಿಚಾರ: ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ
“ದೌರ್ಜನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು” ಎಂದು ಸಿಎಂ ಭರವಸೆ ನೀಡಿದರು.
ಸಚಿವರಾದ ಎಚ್ ಕೆ ಪಾಟೀಲ್, ಡಾ. ಎಚ್ ಸಿ ಮಹಾದೇವಪ್ಪ, ಕೆ ಎಚ್ ಮುನಿಯಪ್ಪ, ಆರ್ ಬಿ ತಿಮ್ಮಾಪುರ, ಶಾಸಕರಾದ ಎ ಸಿ ಶ್ರೀನಿವಾಸ್, ಎಚ್ ವಿ ವೆಂಕಟೇಶ್, ಸುಧಾಮ್ ದಾಸ್, ಎ ಆರ್ ಕೃಷ್ಣಮೂರ್ತಿ, ನರೇಂದ್ರ ಸ್ವಾಮಿ, ಡಿ ತಿಮ್ಮಯ್ಯ, ಭಾಗೀರಥಿ, ಶಾಂತಾರಾಮ್ ಸಿದ್ದಿ, ಬಸವರಾಜ್, ಬಿ ಎಂ ನಾಗರಾಜ್, ಎನ್ ಟಿ ಶ್ರೀನಿವಾಸ್, ಬಸನಗೌಡ ತುರವಿಹಾಳ್, ರಾಜು ವೇಣುಗೋಪಾಲ ನಾಯಕ್, ಡಾ ಉಮೇಶ್ ಜಾಧವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.