ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ನಗರದಲ್ಲಿ ಶಾಂತಿಯುತ ಹಾಗೂ ಭಯವಿಲ್ಲದ ವಾತಾವರಣ ನಿರ್ಮಿಸಲು ಬೆಂಗಳೂರು ನಗರ ಪೊಲೀಸರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ತಮ್ಮನ್ನು ಭೇಟಿಯಾದ ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳನ್ನುದ್ದೇಶಿಸಿ ಅವರು ಮಾತನಾಡಿದರು.
“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿದೆ. ಸಂಪೂರ್ಣವಾಗಿ ಅಪರಾಧ ನಿರ್ಮೂಲನೆ ಮಾಡಲಾಗದಿದ್ದರೂ, ಕಡಿಮೆಗೊಳಿಸಲು ಸಾಧ್ಯವಿದೆ. ತಡೆಯಲು ಸಾಧ್ಯವಿರುವ ಅಪರಾಧಗಳನ್ನು ತಡೆಗಟ್ಟಲು ಪೊಲೀಸರು ಹೆಚ್ಚಿನ ಆದ್ಯತೆ ನೀಡಬೇಕು” ಎಂದು ತಿಳಿಸಿದರು.
ನಗರದಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟುವಂತೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಸಮಾಜದ ಒಳಿತಿಗಾಗಿ ಡ್ರಗ್ಸ್ ಮಾಫಿಯಾವನ್ನು ಮಟ್ಟಹಾಕುವ ಬಗ್ಗೆ ಎಲ್ಲ ಹಂತದ ಪೊಲೀಸ್ ಅಧಿಕಾರಿಗಳು ತೀರ್ಮಾನ ಕೈಗೊಂಡು ಅನುಷ್ಠಾನಗೊಳಿಸಬೇಕು. ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂಟಿಯಾಗಿ ಜೀವನ ಮಾಡುವವರನ್ನು ಗುರುತಿಸಿ, ಅವರ ರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಪೊಲೀಸ್ ಬೀಟ್ ವ್ಯವಸ್ಥೆ ಬಲಪಡಿಸಬೇಕು ಎಂದು ಸೂಚಿಸಿದರು.
ನಗರದಲ್ಲಿರುವ 241 ಹೊಯ್ಸಳ ವಾಹನಗಳ ಗಸ್ತುಪಡೆಯನ್ನು ಬಲಪಡಿಸಿ, ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದ ಮುಖ್ಯಮಂತ್ರಿಗಳು, “ಪೊಲೀಸ್ ಅಧಿಕಾರಿ, ಸಿಬ್ಬಂದಿ ರಿಯಲ್ ಎಸ್ಟೇಟ್ನವರ ಜೊತೆ ಶಾಮೀಲಾಗುವುದು, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದು ಸರಿಯಲ್ಲ. ಇದರಿಂದ ಜನರಿಗೆ ಪೊಲೀಸ್ ವ್ಯವಸ್ಥೆಯ ಮೇಲಿನ ವಿಶ್ವಾಸ ಹೊರಟುಹೋಗುತ್ತದೆ” ಎಂದು ಕಿವಿಮಾತು ಹೇಳಿದರು.
“ಸರ್ಕಾರ ಎಂದಿಗೂ ಕಾನೂನು ಬಾಹಿರವಾಗಿ ಕೆಲಸ ಮಾಡಿ ಎಂದು ನಿಮಗೆ ಹೇಳುವುದಿಲ್ಲ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದರೆ ಸರ್ಕಾರ ನಿಮ್ಮ ಮೇಲೂ ಕಠಿಣ ಕ್ರಮ ಕೈಗೊಳ್ಳುತ್ತದೆ. ನಗರದಲ್ಲಿ ರೌಡಿಸಂ ಅನ್ನು ಮಟ್ಟ ಹಾಕಬೇಕು. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು” ಎಂದು ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿ ಬಂದೋಬಸ್ತ್ ವ್ಯವಸ್ಥೆ ಉತ್ತಮವಾಗಿ ಮಾಡಿರುವುದಾಗಿ ಬೆಂಗಳೂರು ನಗರ ಪೊಲೀಸರಿಗೆ ಮುಖ್ಯಮಂತ್ರಿಗಳು ಅಭಿನಂದನೆ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಜಾತಿಗಣತಿ ವರದಿ ಸ್ವೀಕಾರ ಮಾಡಲು ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ
ಮುಖ್ಯಮಂತ್ರಿಯವರ ಮಾರ್ಗದರ್ಶನದಲ್ಲಿ ನಗರದಲ್ಲಿ ಶಾಂತಿಯುತ ಹಾಗೂ ಸುರಕ್ಷಿತ ವಾತಾವರಣ ನಿರ್ಮಾಣಕ್ಕೆ ಶ್ರಮಿಸುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.