ದೆಹಲಿಯ ಖಾಸಗಿ ಹೋಟೆಲ್ನಲ್ಲಿ ಗುರುವಾರ ಸಂಜೆ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯು ನಡೆಯಿತು. ಈ ಸಭೆಯಲ್ಲಿ ಪಕ್ಷಭೇದ ಮರೆತು ಎಲ್ಲ ರಾಜಕೀಯ ಮುಖಂಡರು ಒಂದಾಗಿದ್ದು, ರಾಜ್ಯದ ಅಭಿವೃದ್ಧಿಗೆ ಬಗ್ಗೆ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ” ಎಂದು ಹೇಳಿದರು.
ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, “ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಹಣಕಾಸು ಮಂತ್ರಿ ತಮ್ಮ ಬಜೆಟ್ನಲ್ಲೇ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣ ಕೊಡಿಸಿ” ಎಂದು ಸಭೆಯಲ್ಲಿದ್ದ ಕೇಂದ್ರ ಹಣಕಾಸು ಸಚಿವೆ ಹಾಗೂ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು.
ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಮುಖ್ಯಮಂತ್ರಿ @siddaramaiah ಅವರ ಮಾತುಗಳು.
ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ. ಇದಕ್ಕಾಗಿ ಇಂದು ಸೌಹಾರ್ದಯುತ ಸಭೆ ಆಯೋಜಿಸಲಾಗಿದೆ.… pic.twitter.com/RhBw8s6iRl
— CM of Karnataka (@CMofKarnataka) June 27, 2024
“ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಇದರ ಈಡೇರಿಕೆ ಅಗತ್ಯವಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ” ಎಂದು ಸಿಎಂ ನುಡಿದರು.
“18172 ಕೋಟಿ ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ. ಇದಕ್ಕಾಗಿ ಪ್ರಯತ್ನಿಸುವ ಅಗತ್ಯವಿದೆ. ರಾಜ್ಯದ ಕರಾವಳಿ ಭಾಗಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರಿಕ ವಿಮಾನಯಾನ ಇಲಾಖೆಯಲ್ಲಿ ಇದೆ. ಇದರ ಈಡೇರಿಕೆಗೆ ಪ್ರಯತ್ನಿಸಬೇಕಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು AIR CARGO COMPLEX ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗಗೊಳ್ಳಲು ನೆರವಾಗಲಿದೆ” ಎಂದು ಮುಖ್ಯಮಂತ್ರಿ ಅಭಿಪ್ರಾಯಿಸಿದರು.
ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು ಐಐಟಿ ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ. ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು. ರಾಜ್ಯ ರೈಲ್ವೇ ಸಂಪರ್ಕದಲ್ಲಿ ಹಿಂದುಳಿದಿದೆ. ಆದ್ದರಿಂದ ಆದ್ಯತೆ ಮೇಲೆ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೇ ಸಂಪರ್ಕ ಹೆಚ್ಚಿಸಲು ಆಧ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಸಿಎಂ ಮನವಿ ಮಾಡಿದರು.
ಗ್ರಾಮ ಸಡಕ್ ಯೋಜನೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕಾಗಿದೆ. 15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಬಲ ವಾದ ಮಂಡಿಸಬೇಕಾಗಿದೆ. ಕಳಸಾ ಬಂಡೂರಿ ಯೋಜನೆಗೆ ಪಾರಿಸಾರಿಕ ಒಪ್ಪಿಗೆ ಅಗತ್ಯವಿದೆ. ಇದು ಬಾಕಿ ಇರುವುದರಿಂದ ಕೆಲಸ ಶುರು ಮಾಡಲು ಸಾಧ್ಯವಾಗಿಲ್ಲ.
ಇದನ್ನು ಓದಿದ್ದೀರಾ? ಕಾಸರಗೋಡು | ಗೂಗಲ್ ಮ್ಯಾಪ್ ಅವಾಂತರ: ನದಿಯಲ್ಲಿ ತೇಲಿದ ಕಾರು; ಅದೃಷ್ಟವಶಾತ್ ಇಬ್ಬರು ಪಾರು
ಈ ಎಲ್ಲ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎನ್ನುವುದಷ್ಟೆ ನನ್ನ ಮನವಿ ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ ರಾಜ್ಯಕ್ಕಾಗಿ ಧ್ವನಿ ಎತ್ತಬೇಕು. ಕರುನಾಡು ಮತ್ತು ಕನ್ನಡಿಗರ ಹಿತಕ್ಕಾಗಿ ತಮ್ಮೆಲ್ಲರ ಸಹಕಾರ ಇರಲಿ ಎಂದು ಸಿಎಂ ಸಿದ್ದರಾಮಯ್ಯ ರಾಜ್ಯದಿಂದ ಆಯ್ಕೆಯಾದ ಸಂಸದರಿಗೆ ಮನವಿ ಮಾಡಿದರು.
