- ಛಲದಿಂದ ಪಕ್ಷ ಕಟ್ಟುವ ಸಮರ್ಥರಿಗೆ ಅವಕಾಶ
- ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮ ಜಾರಿ
ಮುಂಬರುವ ಲೋಕಸಭೆ ಚುನಾವಣೆ ಹಾಗೂ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿನ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ನಡೆದ ನಾಲ್ಕನೇ ದಿನದ ಜಿಲ್ಲಾ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಕುಮಾರಸ್ವಾಮಿ ಈ ವಿಚಾರ ತಿಳಿಸಿದರು.
ಪಕ್ಷದ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಬದಲಾವಣೆ ಮಾಡುತ್ತೇವೆ. ಯುವಜನರಿಗೆ ಆದ್ಯತೆ ನೀಡುತ್ತೇವೆ. ಪಕ್ಷ ಕಟ್ಟುವ ಎಲ್ಲಾ ಉತ್ಸಾಹಿಗಳಿಗೆ ಅವಕಾಶ ಕೊಡುತ್ತೇವೆ. ಬದ್ಧತೆಯಿಂದ ಕೆಲಸ ಮಾಡುವವರಿಗೆ ಅವಕಾಶ ನೀಡಲಾಗುವುದು ಎಂದರು.
ಜಿಲ್ಲಾ, ತಾಲೂಕು, ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಎಲ್ಲಾ ಹಂತದಲ್ಲೂ ಬದಲಾವಣೆ ಖಚಿತ, ಪಕ್ಷವನ್ನು ಮತ್ತೆ ಕಟ್ಟುತ್ತೇವೆ. ಎದೆಗುಂದುವ ಪೈಕಿ ನಾವಲ್ಲ. ಬದ್ಧತೆ, ಪಕ್ಷ ಕಟ್ಟುವ ಛಲ, ಪ್ರಾಮಾಣಿಕ ಕಾರ್ಯಕರ್ತರಿಗೆ ಅವಕಾಶ ಕೊಡಲಾಗುವುದು ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ?:ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ನಾನು ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡುತ್ತೇನೆ. ಜಿಲ್ಲೆಗಳಲ್ಲಿ ಸಭೆ ಮಾಡಿ ಜಿಲ್ಲಾ ಘಟಕಗಳಿಗೆ ಸರಿಯಾದ ಚಿಕಿತ್ಸೆ ಕೊಡುತ್ತೇವೆ. ಪಕ್ಷ ಸಂಘಟನೆ ಮಾಡದಿರುವ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತೇವೆ. ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡಲಾಗದವರನ್ನು ಬದಲಾವಣೆ ಮಾಡಲಾಗುವುದು ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಬದಲಾವಣೆಗೆ ಇದು ಸೂಕ್ತ ಸಮಯ. ಹಿರಿಯರು ಕೂಡ ಕಿರಿಯರಿಗೆ ಅವಕಾಶ ಮಾಡಿಕೊಡಬೇಕು, ಆ ಮೂಲಕ ಪಕ್ಷ ಸಂಘಟನೆಗೆ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಇನ್ನು ಏನು ಮಾಡಿಯೂ ಪ್ರಯೋಜನ ಇಲ್ಲ.