ನನಗಿರುವ ಮಾಹಿತಿ ಪ್ರಕಾರ ಸಿ ಪಿ ಯೋಗೇಶ್ವರ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಚನ್ನಪಟ್ಟಣದ ಕಾರ್ಯಕರ್ತರು ನನಗೆ ಕರೆ ಮಾಡಿ ಯೋಗೇಶ್ವರ್ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡಲು ಸಭೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಈ ಸಭೆಯ ವಾಸ್ತವಾಂಶ ಏನು ಎಂದು ಸಂಜೆಯ ಒಳಗಾಗಿ ತಿಳಿಯಲಿದೆ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಂಗಳವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ಯೋಗೇಶ್ವರ್ ಅವರು ಕಾಂಗ್ರೆಸ್ ಸೇರುವ ಬಗ್ಗೆ ಯಾವುದೇ ಮಾಹಿತಿ ನನಗಿಲ್ಲ. ಚನ್ನಪಟ್ಟಣದಲ್ಲಿ ಕಳೆದ ಮೂರು ತಿಂಗಳಿನಿಂದ ಜೆಡಿಎಸ್ ಹಾಗೂ ಬಿಜೆಪಿಯಿಂದ ಬರುವ ಎಲ್ಲಾ ಮುಖಂಡರನ್ನು ನಾವು ಸ್ವಾಗತಿಸಿದ್ದೇವೆ. ಪಕ್ಷದ ತತ್ವ ಸಿದ್ಧಾಂತ, ನಾಯಕತ್ವ ಒಪ್ಪಿ ಬರುವವರಿಗೆ ಸ್ವಾಗತವಿದೆ. ಯೋಗೇಶ್ವರ್ ಅಥವಾ ಮತ್ತೊಬ್ಬರು ಎಂದು ಪ್ರತ್ಯೇಕಿಸಿ ಹೇಳುವುದಿಲ್ಲ” ಎಂದರು.
ಕಾರ್ಯಕರ್ತರು ನಿಮ್ಮ ಸ್ಪರ್ಧೆಗೆ ಹೆಚ್ಚಿನ ಒತ್ತಡ ಹಾಕುತ್ತಿದ್ದಾರೆ, ಚನ್ನಪಟ್ಟಣದಲ್ಲಿ ಗೆಲ್ಲುವ ವಿಶ್ವಾಸವಿದೆಯೇ ಎಂದು ಕೇಳಿದ ಪ್ರಶ್ನೆಗೆ, “ನನ್ನ ಮುಕ್ತವಾದ ಅಭಿಪ್ರಾಯಗಳನ್ನು ಪಕ್ಷದ ವರಿಷ್ಠರಿಗೆ ತಿಳಿಸುತ್ತೇನೆ. ಅವರು ತೀರ್ಮಾನ ಮಾಡಿದ ನಂತರ ನಾನು ತೀರ್ಮಾನ ಮಾಡುತ್ತೇನೆ. ಪಕ್ಷದ ಆದೇಶವನ್ನು ನಾನೂ ಪಾಲಿಸಬೇಕು, ನಮ್ಮ ಮುಖಂಡರೂ ಪಾಲಿಸಬೇಕು” ಎಂದು ಹೇಳಿದರು.
ಸೋಮವಾರ ರಾತ್ರಿ ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಏನೆಲ್ಲಾ ಚರ್ಚೆಯಾಗಿದೆ ಎಂದು ಕೇಳಿದಾಗ, “ನಮ್ಮ ಪಕ್ಷದ ಮುಂದಿನ ನಡೆ ಹೇಗಿರಬೇಕು ಎಂದು ಜಿಲ್ಲೆ ಶಾಸಕರು ಹಾಗೂ ಮುಖಂಡರ ಜತೆ ನಾವು ಚರ್ಚೆ ಮಾಡಿದ್ದು, ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದ್ದು, ಪಕ್ಷದಿಂದಲೇ ಹೋರಾಟ ಮಾಡಬೇಕು ಎಂದು ಸಲಹೆ ನೀಡಿದ್ದಾರೆ” ಎಂದು ಮಾಹಿತಿ ನೀಡಿದರು.