- ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ
- ಮಂಡ್ಯದ ಸಾತನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣ
ಮಂಡ್ಯದ ಸಾತನೂರು ಗ್ರಾಮದ ಹೊರವಲಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಟಿಪ್ಪುವನ್ನು ಹೊಡೆದು ಹಾಕಿದ ರೀತಿಯಲ್ಲಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಕರೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಾಜಿ ಸಚಿವ, ಹಾಲಿ ಶಾಸಕ ಡಾ. ಸಿ ಎನ್ ಅಶ್ವತ್ಥ ನಾರಾಯಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿದಾರ ಅಶ್ವತ್ಥ ನಾರಾಯಣ ವಿರುದ್ಧ ದಾಖಲಾಗಿರುವ ಪ್ರಕರಣ ಸಂವಿಧಾನದ ಪರಿಚ್ಛೇದ 14 ಮತ್ತು 21ಕ್ಕೆ ವಿರುದ್ಧವಾಗಿದ್ದು, ಕಾನೂನು ಬಾಹಿರವಾಗಿ ಪ್ರಕರಣ ದಾಖಲಿಸಲಾಗಿದೆ. ಕ್ರಿಮಿನಲ್ ಬೆದರಿಕೆ, ದಂಗೆ ಉಂಟು ಮಾಡುವುದು, ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡಿರುವ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇದಕ್ಕೆ ಸೂಕ್ತ ಪುರಾವೆಗಳು ಇಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ದೂರುದಾರರು ಘಟನಾ ಸ್ಥಳದಲ್ಲಿ ಇರಲಿಲ್ಲ. ಅರ್ಜಿದಾರರ ಭಾಷಣದಿಂದ ಈವರೆಗೂ ಯಾವುದೇ ಗಲಭೆ ನಡೆದಿಲ್ಲ. ಅಲ್ಲದೇ ಅರ್ಜಿದಾರರ ಹೇಳಿಕೆಯಿಂದ ಯಾವ ವ್ಯಕ್ತಿಯ ಮೇಲೆ ನೇರವಾಗಿ ಪರಿಣಾಮ ಬೀರಲಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ನ್ಯಾಯಪೀಠವು, ಅರ್ಜಿಯನ್ನು ಮೇ 30ರಂದು ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಸೂಚನೆ
ನೀಡಿ ವಿಚಾರಣೆಯನ್ನು ಮುಂದೂಡಿದೆ.
ಈ ಸುದ್ದಿಓದಿದ್ದೀರಾ? ದ್ವೇಷ ರಾಜಕಾರಣಕ್ಕೆ ಕಾನೂನಿನ ಮೂಲಕವೇ ಉತ್ತರಿಸುವೆ: ಅಶ್ವತ್ಥ ನಾರಾಯಣ
ಪ್ರಕರಣದ ಹಿನ್ನೆಲೆ
2023ರ ಫೆಬ್ರವರಿ 15 ರಂದು ಡಾ. ಸಿ ಎನ್ ಅಶ್ವತ್ಥ ನಾರಾಯಣ ಮಂಡ್ಯದ ಸಾತನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ “ಉರಿಗೌಡ-ನಂಜೆಗೌಡ ಟಿಪ್ಪುವನ್ನು ಕೊಂದಿದ್ದರು. ಅದೇ ರೀತಿಯಲ್ಲಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು” ಎಂದಿದ್ದರು. ಈ ಸಂಬಂಧ ಕೆಪಿಸಿಸಿ ವಕ್ತಾರ ಲಕ್ಷ್ಮಣ ಅವರು ಮೇ 24ರಂದು ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.