- ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಧರಣಿ
- ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ
ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಸುವರ್ಣಸೌಧದ ಎದುರು ಸೋಮವಾರ ಧರಣಿ ನಡೆಯಿತು.
ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹಾದೇವಪ್ಪ, “ಈ ಹಿಂದಿನ ರಾಜ್ಯ ಸರ್ಕಾರ ಜಾರಿಗೊಳಿಸಿದ ಕೃಷಿ ಕಾಯ್ದೆಯನ್ನು ಹಿಂಪಡೆಯಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು” ಎಂದು ಭರವಸೆ ನೀಡಿದರು.
“ಹಾಲಿನ ದರ ಹೆಚ್ಚಳ, ಕೃಷಿ ಕಾಯ್ದೆ ವಾಪಸ್, ಕನಿಷ್ಠ ಬೆಂಬಲ ಬೆಲೆಯ ಶಾಸನಬದ್ಧ ಅನುಷ್ಠಾನ, ಬರಗಾಲದ ತುರ್ತು ಕಾರ್ಯಕ್ರಮಗಳು ಜಾರಿ, ಸೆಪ್ಟೆಂಬರ್ 22ರ ವಿದ್ಯುತ್ ಕಾಯ್ದೆ ವಾಪಸ್, ಕಬ್ಬಿಗೆ ಎಫ್ಆರ್ಪಿ ಜೊತೆ ಎಸ್ಎಪಿ ನೀಡುವುದು ಮುಂತಾದ ಬೇಡಿಕೆಗಳನ್ನು ರೈತರು ಸಲ್ಲಿಸಿದ್ದಾರೆ. ಇವುಗಳ ಬಗ್ಗೆ ಬೆಂಗಳೂರಿಗೆ ಹೋಗಿ ವಿಧಾನಸೌಧದಲ್ಲಿ ಚರ್ಚೆ ಮಾಡುತ್ತೇವೆ” ಎಂದು ಭರವಸೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸಿನ ಚಳಿ ಬಿಡಿಸಲಿದೆಯೇ ಬಿಜೆಪಿ?
“ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಕೇಂದ್ರದ ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕ ಬಳಿಕ ಮಹದಾಯಿ ಮತ್ತು ಮೇಕೆದಾಟು ಯೋಜನೆ ಕಾಮಗಾರಿ ಆರಂಭಿಸಲು ಯಾವುದೇ ತಕರಾರು ಇಲ್ಲ” ಎಂದರು.
ಧರಣಿಗೂ ಮುನ್ನ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದಕ್ಕೆ ಅವಕಾಶ ನೀಡದ ಪೊಲೀಸರು ರೈತರನ್ನು ಸರ್ಕಾರಿ ಬಸ್ಸಿನಲ್ಲಿ ಹತ್ತಿಸಿ ಖೊಂಡಸಕೊಪ್ಪದಲ್ಲಿ ಹಾಕಿದ ಶಾಮಿಯಾನದ ಬಳಿ ಬಿಟ್ಟರು.
ಕೋಡಿಹಳ್ಳಿ ಚಂದ್ರಶೇಖರ ಮಾತನಾಡಿ, “ರೈತರಿಗೆ ಮಾರಕವಾದ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ರೈತರ ಮನವಿಗೆ ಬೆಲೆ ಕೊಡದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ ಖಚಿತ” ಎಂದು ಎಚ್ಚರಿಸಿದರು.