ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಲ್ಲಿಗೆ ನಿಯೋಗ ತೆಗೆದುಕೊಂಡು ಹೋಗುವೆ ಎಂದು ಸಚಿವ ನಾಗೇಂದ್ರ ಹೇಳಿದರು.
ಬಳ್ಳಾರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಯೋಜಿಸಿದ್ದ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ರೆಡ್ಡಿ ಸಮುದಾಯದ ಅಭಿವೃದ್ಧಿಗೋಸ್ಕರ ರೆಡ್ಡಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗಾಗಿ ಸರ್ಕಾರದ ಬಳಿಗೆ ನಿಯೋಗ ತೆಗೆದುಕೊಂಡು ಹೋಗುವೆ” ಎಂದರು.
“ಬಳ್ಳಾರಿಯ ತಾಳೂರು ರಸ್ತೆಯ ಮಹಾಯೋಗಿ ವೇಮನ ಅವರ ಹೆಸರನ್ನು ನಾಮಕರಣ ಮಾಡುವ ಚರ್ಚೆ ನಡೆಸಲಾಗುವುದು ಹಾಗೂ ನಗರದಲ್ಲಿ ನಿರ್ಮಾಣವಾಗುತ್ತಿರುವ ಚಿಲ್ಲಿ ಮಾರುಕಟ್ಟೆಗೆ ಮಹಾಯೋಗಿ ವೇಮನ ಚಿಲ್ಲಿ ಮಾರುಕಟ್ಟೆ ಎಂದು ನಾಮಕರಣ ಮಾಡಲಾಗುವುದು. ರೆಡ್ಡಿ ಕಲ್ಯಾಣ ಮಂಟಪ ಭವನಕ್ಕೆ 15ಲಕ್ಷ ರೂಪಾಯಿ ದೇಣಿಗೆ ನೀಡುತ್ತೇನೆ” ಎಂದರು.
ಶಾಸಕ ನಾರಾ ಭರತ್ ರೆಡ್ಡಿ ಮಾತನಾಡಿ, “ಬಳ್ಳಾರಿಯಲ್ಲಿ ನಿರ್ಮಾಣವಾಗುತ್ತಿರುವ ರೆಡ್ಡಿ ಕಲ್ಯಾಣ ಮಂಟಪಕ್ಕೆ 50 ಲಕ್ಷ ರೂಪಾಯಿ ದೇಣಿಗೆ ನೀಡುತ್ತೇನೆ. ಹೊಸದಾಗಿ ನಿರ್ಮಾಣವಾಗುತ್ತಿರುವ ಚಿಲ್ಲಿ ಮಾರುಕಟ್ಟೆಗೆ ವೇಮನ ಚಿಲ್ಲಿ ಮಾರುಕಟ್ಟೆ ಎಂದು ನಾಮಕರಣ ಮಾಡಬೇಕು. ರೆಡ್ಡಿ ಸಮುದಾಯದ ಅಭಿವೃದ್ಧಿಗೆ ರೆಡ್ಡಿ ಪ್ರಾಧಿಕಾರ ಸ್ಥಾಪನೆ ಮಾಡಬೇಕು” ಎಂದರು.
ಕಾರ್ಯಕ್ರಮದಲಲ್ಲಿ ರೆಡ್ಡಿ ಜನ ಸಂಘದ ಅಧ್ಯಕ್ಷ ನಾರಾ ಪ್ರತಾಪ ರೆಡ್ಡಿ, ಮೇಯರ್ ಶ್ವೇತಾ, ಎಡಿಸಿ ಮೊಹಮ್ಮದ್ ಜುಬೇರ್, ಸಿಇಒ ರಾಹುಲ್ ಶರಣಪ್ಪ ಸಂಕನೂರ್, ಸಹಾಯಕ ಆಯುಕ್ತರಾದ ಹೇಮಂತ್ ಕುಮಾರ್ ಸೇರಿದಂತೆ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.