ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ವಿಧಾನಸಭೆ ಕಲಾಪದಲ್ಲಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಡಿ ಕೆ ಶಿವಕುಮಾರ್ ಅವರು ಈ ವಿಚಾರವನ್ನು ಮಾತನಾಡಿದರು.
“ನಾನು ಧರ್ಮಸ್ಥಳ ಕ್ಷೇತ್ರ ಹಾಗೂ ಆ ದೇವಸ್ಥಾನದ ಮೇಲೆ ನಂಬಿಕೆ ಇರುವವನು. ನನಗೆ ಧರ್ಮಾಧಿಕಾರಿಗಳ ಮೇಲೂ ನಂಬಿಕೆ ಇದೆ. ಅವರ ಆಚಾರ-ವಿಚಾರಗಳ ಬಗ್ಗೆ ಅರಿವಿದೆ. ಈ ಪ್ರಕರಣದಲ್ಲಿ ಪರಿಸ್ಥಿತಿ ಏನಿದೆ ಎಂದು ಗೃಹ ಸಚಿವರು ವಿವರಣೆ ನೀಡುತ್ತಾರೆ. ನಮಗೆ ಈ ಪ್ರಕರಣದ ವಿಚಾರ ಗೊತ್ತಿದೆ. ಆದರೆ ಸರಕಾರ ಎಸ್ಐಟಿ ರಚಿಸಲು ಕಾರಣವೇನು ಎಂಬುದನ್ನು ವಿವರಿಸುತ್ತಾರೆ. ಈ ವಿಚಾರವಾಗಿ ಇಲ್ಲಿ ನಾವು ನಾಲ್ಕು ಜನ ಮಾತನಾಡುವುದಷ್ಟೇ ಅಲ್ಲ. ಲಕ್ಷಾಂತರ ಭಕ್ತಾದಿಗಳು ಈ ಕ್ಷೇತ್ರ ನಂಬಿದ್ದಾರೆ. ದೇಶದಲ್ಲಿ ಅನ್ನದಾಸೋಹ ಆರಂಭವಾಗದೇ ಇದ್ದ ಕಾಲದಲ್ಲೇ ಈ ಕ್ಷೇತ್ರದಲ್ಲಿ ಇದನ್ನು ಆರಂಭಿಸಲಾಗಿತ್ತು. ಈ ವಿಚಾರವನ್ನು ನೀವು ರಾಜಕೀಯವಾಗಿ ತಿರುಗಿಸಬೇಡಿ” ಎಂದು ಹೇಳಿದರು.
“ಈ ಪ್ರಕರಣದಲ್ಲಿ ಕಾಂಗ್ರೆಸ್ ಯಾಕೆ ಹಸ್ತಕ್ಷೇಪ ಮಾಡುತ್ತದೆ. ಅಲ್ಲಿನ ಆಂತರಿಕ ಸಮಸ್ಯೆಯಿಂದ ಯಾವನೋ ಒಬ್ಬ ಬಂದು ಆರೋಪ ಮಾಡಿದ್ದಾನೆ. ನಿಮಗಿಂತ ಹೆಚ್ಚಾಗಿ ನಮ್ಮ ಪಕ್ಷದಲ್ಲೇ ಶಿವಲಿಂಗೇಗೌಡರು, ಅಶೋಕ್ ರೈ ಸೇರಿದಂತೆ ಅನೇಕ ಶಾಸಕರು ಧರ್ಮಸ್ಥಳ ಕ್ಷೇತ್ರದ ಬಗ್ಗೆ ಧ್ವನಿ ಎತ್ತಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ನಂಬಿಕೆ ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ” ಎಂದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅವಾಂತರಕಾರಿ ಆಸಿಮ್ ಮುನೀರ್ ಮತ್ತು ಮೌನಿ ಮೋದಿ
ಭಕ್ತ ಹಾಗೂ ಭಗವಂತನ ನಡುವಣ ಸಂಬಂಧ ನಾಶವಾಗಬಾರದು. ಧರ್ಮಾಧಿಕಾರಿಗಳು ಮೊದಲಿನಿಂದಲೂ ಸಾಮಾಜಿಕ ಸೇವೆ, ಧಾರ್ಮಿಕ ಸೇವೆ ಮಾಡಿಕೊಂಡು ಬರುತ್ತಿದ್ದು, ಅವರ ಮೇಲೆ ನಮಗೆ ಯಾವುದೇ ಅನುಮಾನವಿಲ್ಲ. ಕರ್ನಾಟಕ ಕಾಂಗ್ರೆಸ್ ಸರಕಾರ ಅವರ ಧಾರ್ಮಿಕ ಕೆಲಸಗಳ ಬೆನ್ನಿಗೆ ನಿಲ್ಲಲು ಬದ್ಧವಾಗಿದೆ. ಕೆಲವರು ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಗೃಹ ಸಚಿವರಾಗಲಿ, ಸರಕಾರವಾಗಲಿ ಸುಮ್ಮನೆ ಕೂರಲು ಸಾಧ್ಯವೇ? ಇದೆಲ್ಲವನ್ನು ಗೃಹ ಸಚಿವರು ವಿವರಿಸುತ್ತಾರೆ. ಧರ್ಮಸ್ಥಳದ ವಿರೇಂದ್ರ ಹೆಗ್ಗಡೆ, ಅವರ ಪರಂಪರೆ, ದೇವಸ್ಥಾನ, ಧರ್ಮ, ಧಾರ್ಮಿಕ ವಿಚಾರದ ಬಗ್ಗೆ ನಮಗೆ ನಿಮಗಿಂತಲೂ ಹೆಚ್ಚು ಕಾಳಜಿ ನಮಗಿದೆ” ಎಂದು ತಿಳಿಸಿದರು.
ಯಾರನ್ನೇ ಆಗಲಿ ಅನಗತ್ಯವಾಗಿ ತೇಜೋವಧೆ ಮಾಡುವುದು ಸರಿಯಲ್ಲ
“ನೂರಾರು ವರ್ಷದಿಂದ ಬಂದ ಪರಂಪರೆ ನಾಶ ಮಾಡಲು ಹೊರಟಿದ್ದಾರೆ. ಯಾರನ್ನೇ ಆಗಲಿ ಅನಗತ್ಯವಾಗಿ ತೇಜೋವಧೆ ಮಾಡುವುದು ಸರಿಯಲ್ಲ. ನಮಗೆ ನಮ್ಮದೇ ಆದ ನಂಬಿಕೆ ಇದೆ. ನಾವು ಸರ್ಕಾರದ ವತಿಯಿಂದ ಧಾರ್ಮಿಕ ದತ್ತಿ ಇಲಾಖೆ ನಡೆಸುತ್ತಿದ್ದೇವೆ. ಅವನ್ಯಾರೋ ಮುಸುಕುಧಾರಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ಪರಿಣಾಮ ಇದೆಲ್ಲ ಆಗಿದೆ” ಎಂದು ತಿಳಿಸಿದರು.
“ಈ ಪ್ರಕರಣ ಸಂಪೂರ್ಣ ಮಾಹಿತಿ ನನಗೂ ಗೊತ್ತಿದೆ. ಇದು ಖಾಲಿ ಟ್ರಂಕ್. ಹೀಗಾಗಿ ಸದ್ದು ಜಾಸ್ತಿ ಮಾಡುತ್ತಿದೆ ಅಷ್ಟೇ. ಯಾವುದೇ ಧರ್ಮದ ಭಾವನಗೆ ಚ್ಯುತಿ ಬರಬಾರದು. ಯಾರೂ ತಪ್ಪು ಮಾಡುತ್ತಾರೋ ಅವರಿಗೆ ಶಿಕ್ಷೆ ಆಗಬೇಕು. ತಪ್ಪುಮಾಡಿದವರ ರಕ್ಷಣೆ ಮಾಡುವುದಿಲ್ಲ. ಏನೂ ಇಲ್ಲದೇ ಈ ರೀತಿ ಸೃಷ್ಟಿ ಮಾಡಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿ ಬಂದ ನಂತರ ಇದನ್ನು ಸರಿಯಾದ ರೀತಿಯಲ್ಲಿ ತನಿಖೆ ಮಾಡಬೇಕು ಎಂದು ಎಸ್ಐಟಿ ರಚಿಸಿ ತನಿಖೆ ಮಾಡಿಸಲಾಗಿದೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವರದೇ ಆದ ವ್ಯಾಖ್ಯಾನ ಮಾಡಿದ್ದಾರೆ. ಈ ವಿಚಾರದಲ್ಲಿ ಧರ್ಮಾಧಿಕಾರಿಗಳಿಗೆ ಅನ್ಯಾಯ ಆಗಿದೆ” ಎಂದು ಹೇಳಿದರು.
ಧರ್ಮಸ್ಥಳ ಕ್ಷೇತ್ರಕ್ಕೆ ಮಸಿ ಬಳಿಯಲು ಪ್ರಯತ್ನಿಲಾಗುತ್ತಿದೆ ಎಂದು ಬಿಜೆಪಿಯವರು ಕಾಂಗ್ರೆಸ್ ಮೇಲೆ ಆರೋಪ ಮಾಡಿರುವ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷ ಯಾವುದೇ ಸಂದರ್ಭದಲ್ಲಿ ಧರ್ಮಸ್ಥಳ ಅಥವಾ ಇತರೆ ಧಾರ್ಮಿಕ ಕ್ಷೇತ್ರಗಳ ಗೌರವ, ಸ್ವಾಭಿಮಾನ, ನಂಬಿಕೆಗೆ ಧಕ್ಕೆಯಾಗಲು ಅವಕಾಶ ನೀಡುವುದಿಲ್ಲ. ನ್ಯಾಯ, ಧರ್ಮದ ವಿಚಾರದಲ್ಲಿ ನಾವು ಎಲ್ಲರನ್ನು ಸರಿಸಮನಾಗಿ ನೋಡುತ್ತೇವೆ” ಎಂದು ತಿಳಿಸಿದರು.
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವ ಬಗ್ಗೆ ಕೇಳಿದಾಗ, “ನನಗೆ ಈಗಷ್ಟೇ ಈ ವಿಚಾರ ತಿಳಿಯಿತು. ಮುಖ್ಯಮಂತ್ರಿಗಳು ಸದನದ ವೇಳೆ ಈ ವಿಚಾರ ತಿಳಿಸಿದರು. ನ್ಯಾಯಾಲಯದ ತೀರ್ಪಿನ ಬಗ್ಗೆ ನಾವು ಮಾತನಾಡಲು ಬರುವುದಿಲ್ಲ” ಎಂದು ತಿಳಿಸಿದರು.