- ಡಿ ಕೆ ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆ
- ಮಾಜಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಉಪಸ್ಥಿತಿ
2018ರ ವಿಧಾನಸಭಾ ಚುನಾವಣೆಯ ಸೋಲಿನ ಬಳಿಕ ಬಾಬುರಾವ್ ಚಿಂಚನಸೂರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ರಾಜ್ಯ ಬಿಜೆಪಿ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಸಹ ಮಾಡಿತ್ತು. ಆದರೆ, ಪಕ್ಷದ ಮೇಲಿನ ಕೆಲವು ಅಸಮಧಾನಗಳಿಂದ ಬಾಬುರಾವ್ ಚಿಂಚನಸೂರ್ ಅವರು ತಮ್ಮ ಹಳೆಯ ಪಕ್ಷಕ್ಕೆ ಮರಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್, ಕಲ್ಯಾಣ ಕರ್ನಾಟಕ ಭಾಗದಲ್ಲಿ ತನ್ನ ಪ್ರಾಬಲ್ಯ ಗಟ್ಟಿಗೊಳಿಸಲು ಯತ್ನಿಸುತ್ತಿದೆ. ಈ ನಡುವೆ ಗುರುಮಠಕಲ್ ಮತಕ್ಷೇತ್ರದ ಪ್ರಭಾವಿ ನಾಯಕ ಬಾಬುರಾವ್ ಚಿಂಚನಸೂರ್ ಅವರು ಇಂದು (ಮಾರ್ಚ್ 22) ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ಬಾಬುರಾವ್ ಚಿಂಚನಸೂರ್ ಅವರು ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಬುಧವಾರ ಏಕಾಏಕಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆಯಲ್ಲಿ ಕಾಣಿಸಿಕೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಯುಗಾದಿ ಕೊಡುಗೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, “ಕಲ್ಯಾಣ ಕರ್ನಾಟಕದ ಪ್ರಭಾವಿ ನಾಯಕ ಬಾಬುರಾವ್ ಚಿಂಚನಸೂರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ವಿಶ್ವಾಸ ಇಟ್ಟು ಮರಳಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಅಭಿವೃದ್ಧಿಯಾಗುತ್ತದೆ ಎನ್ನುವ ದೃಷ್ಟಿಯಿಂದ ಕಾಂಗ್ರೆಸ್ಗೆ ಸೇರಿದ್ದಾರೆ” ಎಂದು ಹೇಳಿದರು.
“ತಮ್ಮ ಸಮುದಾಯದ ಒಳಿತಿಗಾಗಿ ಚಿಂಚನಸೂರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಗಂಗಾಪುತ್ರ ಚಿಂಚನಸೂರ್ ಮರಳಿ ಪಕ್ಷಕ್ಕೆ ಬಂದಿರುವುದು ಸಂತೋಷ ತಂದಿದೆ” ಎಂದರು.
ಬಾಬುರಾವ್ ಚಿಂಚನಸೂರ್ ಅವರ ಕಾಂಗ್ರೆಸ್ ಸೇರ್ಪಡೆ ಸಂದರ್ಭದಲ್ಲಿ ಮಾಜಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಉಪಸ್ಥಿತರಿದ್ದರು.