- ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ
- ಮರಳಿ ಮಾತೃ ಪಕ್ಷಕ್ಕೆ ಸೇರಿದ ಹಿರಿಯ ನಾಯಕ
ಕರ್ನಾಟಕದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಬೆನ್ನಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಪಕ್ಷಗಳಿಂದ ಪಕ್ಷಕ್ಕೆ ಜಿಗಿಯುವವರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಇದೀಗ ಶಾಸಕ ಎನ್.ವೈ ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಯ ಮೊದಲ ವಿಕೆಟ್ ಪತನವಾಗಿದೆ.
ಇಂದು ಬೆಳಗ್ಗೆ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ನಿವಾಸಕ್ಕೆ ಭೇಟಿ ನೀಡಿದ್ದ ಬಳ್ಳಾರಿ ಜಿಲ್ಲೆಯ ಕೂಡ್ಲಿಗೆ ಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಎನ್ ವೈ ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎನ್ ವೈ ಗೋಪಾಲಕೃಷ್ಣ ಅವರು ಮೂಲತಃ ಕಾಂಗ್ರೆಸ್ ಪಕ್ಷದವರೇ ಆಗಿದ್ದು, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಸತತ 5 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. 2013ರ ಚುನಾವಣೆಯಲ್ಲಿ ನೇರ್ಲಗುಂಟೆ ಎಸ್ ತಿಪ್ಪೇಸ್ವಾಮಿ ವಿರುದ್ಧ ಪರಾಭವಗೊಂಡಿದ್ದರು.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಶಾಸಕರಾಗಿದ್ದ ಶ್ರೀರಾಮುಲು ಸಂಸದ ಸ್ಥಾನಕ್ಕೆ ಆಯ್ಕೆಯಾದಾಗ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಿತು. ಈ ವೇಳೆ ಸ್ಪರ್ಧೆ ಮಾಡಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದರು.
ಈ ಸುದ್ದಿ ಓದಿದ್ದೀರಾ?: `ಯಾವ ಮೋದಿನೂ ಇಲ್ಲ, ಪಾದಿನೂ ಇಲ್ಲ’ ಬಿಜೆಪಿ ಶಾಸಕನ ಆಡಿಯೋ ವೈರಲ್
ಆದರೆ, ಕಳೆದ ವಿಧಾನಸಭೆ ಚುನಾವಣೆ ವೇಳೆ ಮೊಳಕಾಲ್ಮೂರು ಹಾಗೂ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದೇ ಇರುವುದರಿಂದ ಬಂಡಾಯವೆದ್ದು, ಬಿಜೆಪಿ ಸೇರಿದ್ದ ಇವರು ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು.
ಮುಂಬರುವ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಬಯಸಿದ್ದು, ಹೈ ಕಮಾಂಡ್ ಇದಕ್ಕೆ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಯಾಗಿದ್ದ ಶ್ರೀರಾಮುಲು ಅವರ ಬದ್ಧ ವೈರಿ ನೇರ್ಲಗುಂಟೆ ಎಸ್ ತಿಪ್ಪೇಸ್ವಾಮಿ ಅವರು ಬಿಜೆಪಿ ಸೇರಿದ್ದರಿಂದ ಕಾಂಗ್ರೆಸ್ಗೆ ಈ ಭಾಗದಲ್ಲಿ ಅಲ್ಪ ಹಿನ್ನೆಡೆಯುಂಟಾಗಿತ್ತು.
ಆದರೆ, ಇದೇ ಭಾಗದ ಪ್ರಭಾವಿ ನಾಯಕರಾಗಿದ್ದ ಮಾಜಿ ಶಾಸಕರಾದ ಗೋಪಾಲಕೃಷ್ಣ ಮತ್ತೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರಿಂದ, ಪಕ್ಷಕ್ಕೆ ಇನ್ನಷ್ಟು ಬಲ ಬಂದಿದೆ. ಹಿರಿಯ ನಾಯಕರ ನಡುವೆ ತೀವ್ರ ಪೈಪೋಟಿ ನಡೆಯುವ ಸಾಧ್ಯತೆ ಇದೆ.
ಇದೇ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೀಶ್ ಬಾಬು ಹಾಗೂ ಹಿರಿಯ ನಾಯಕ ವಿ ಎಸ್ ಉಗ್ರಪ್ಪ ಟಿಕೆಟ್ ಬಯಸಿದ್ದರು. ಎನ್ ವೈ ಗೋಪಾಲಕೃಷ್ಣ ಅವರ ಆಗಮದಿಂದ ಇವರಿಬ್ಬರಿಗೂ ಟಿಕೆಟ್ ತಪ್ಪಿದಂತಾಗಿದೆ.