- ದಾಳಿಗಳಿಗೆ ಹೆದರದಂತೆ ಸಿದ್ದರಾಮಯ್ಯ ಕರೆ
- ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಪತ್ರಿಕಾಗೋಷ್ಠಿ
ಸೋಲಿನ ಭೀತಿ ಎದುರಿಸುತ್ತಿರುವ ಬಿಜೆಪಿಯು ಕಾಂಗ್ರೆಸ್ ನಾಯಕರನ್ನು ಬೆದರಿಸಲು ಐಟಿ, ಇಡಿ ಹಾಗೂ ಸಿಬಿಐ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ಛೂ ಬಿಡುವ ಷಡ್ಯಂತ್ರ ನಡೆಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರದ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ.
“ಕಾಂಗ್ರೆಸ್ ಅಭ್ಯರ್ಥಿಗಳು, ನಾಯಕರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬಗ್ಗೆ ಒಲವು ಹೊಂದಿರುವರ ಮೇಲೆ ದಾಳಿ ಮಾಡಿ ಬೆದರಿಸಲು ಕೇಂದ್ರ ಸರ್ಕಾರ ಸಾವಿರಕ್ಕೂ ಹೆಚ್ಚು ಐಟಿ, ಇಡಿ ಮತ್ತು ಸಿಬಿಐ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದೆ” ಎಂದು ಆರೋಪಿಸಿದ್ದಾರೆ.
“ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿ ಹೋಗಿದ್ದಾರೆ. ಪಕ್ಷದೊಳಗೆ ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಆದ್ದರಿಂದ, ಬಿಜೆಪಿ ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ” ಎಂದಿದ್ದಾರೆ.
“ಬಿಜೆಪಿ ಸರ್ಕಾರದ ಈ ಷಡ್ಯಂತ್ರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹೋರಾಟದ ಮೂಲಕವೇ ಬಿಜೆಪಿಯ ಈ ದಮನಕಾರ್ಯವನ್ನು ಎದುರಿಸುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಭೀತಿಗೀಡಾಗದೆ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕು” ಎಂದು ಕರೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಧರ್ಮ, ದೇವರು ಬಿಜೆಪಿಗೆ ಮತಫಸಲು ಕೊಡುವ ಸಾಧನಗಳಷ್ಟೇ: ಎಚ್ ಡಿ ಕುಮಾರಸ್ವಾಮಿ
“ಬಿಜೆಪಿಗೆ ಕರ್ನಾಟಕದಲ್ಲಿ ಸೋಲಿನ ಭೀತಿ ಆರಂಭವಾಗಿದೆ. ಎಲ್ಲ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳುತ್ತಿವೆ. ಹಲವು ಹಾಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿಯ ಅಧ್ಯಕ್ಷರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
“ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂದು ಕರ್ನಾಟಕದ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಕಾರಣದಿಂದ ಹಾಲಿ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ. ಅವರ್ಯಾರು ಮೂರ್ಖರಲ್ಲ, ತಾವು ಬಿಜೆಪಿಯಲ್ಲಿಯೇ ಮುಂದುವರೆದರೆ ಸೋಲುತ್ತೇವೆ ಎಂಬುದು ಅವರಿಗೆ ಗೊತ್ತಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
“ಬಿಜೆಪಿ ಹೈಕಮಾಂಡ್ ಗೆ ಕೂಡ ಕರ್ನಾಟಕದ ಬಿಜೆಪಿ ಮುಳುಗುತ್ತಿದೆ, ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಿದೆ. ತಮ್ಮ ದ್ವೇಷ ರಾಜಕೀಯ ಮತ್ತು ಹಿಂದುತ್ವದ ಅಜೆಂಡಾ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕೆಲಸ ಮಾಡುವುದಿಲ್ಲ ಎಂಬುದು ಅವರಿಗೆ ಅರ್ಥವಾಗಿದೆ” ಎಂದು ಕುಟುಕಿದ್ದಾರೆ.
“ಬಿಜೆಪಿಗೆ ಉಳಿದಿರುವ ಏಕೈಕ ಮಾರ್ಗವೆಂದರೆ ಅಧಿಕಾರದ ದುರುಪಯೋಗ ಮತ್ತು ತಮ್ಮ ಹಣಬಲದ ಬಳಕೆ. ಹಣ ನೀಡಿದರೂ ಕೂಡ ರಾಜ್ಯದ ಜನ ಕಾಂಗ್ರೆಸ್ ಗೆ ಮತ ನೀಡಬೇಕು ಎಂದು ನಿರ್ಧಾರ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
“ಬಿಜೆಪಿ ಸರ್ಕಾರ ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರ್ಕಾರ. ರಾಜ್ಯದ ಮತದಾರರಿಗೆ ತಾವು ಹಿಂದಿನ ಚುನಾವಣೆಯಲ್ಲಿ ಮಾಡಿದ ತಪ್ಪಿನ ಅರಿವಾಗಿದೆ. ಜನ ಹಿಂದಿನ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಸ್ಮರಿಸುತ್ತಿದ್ದಾರೆ. ಇದರಿಂದ ಬಿಜೆಪಿಗರು ಬೆದರಿದ್ದಾರೆ” ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.
“ಕಾಂಗ್ರೆಸ್ ಪಕ್ಷಕ್ಕೆ ಯಾರೂ ಬೆಂಬಲ ನೀಡಬಾರದು ಎಂಬುದು ಬಿಜೆಪಿಯವರ ಉದ್ದೇಶ. ಇದಕ್ಕೆ ನಮ್ಮ ಕಾರ್ಯಕರ್ತರು ಮತ್ತು ನಾಯಕರು ಬಗ್ಗುವವರಲ್ಲ” ಎಂದು ಹೇಳಿದ್ದಾರೆ.