- ಲೋಕಸಭೆ ಚುನಾವಣೆ ತಯಾರಿ; ಜನಪ್ರತಿನಿಧಿಗಳ ಸಭೆ ನಡೆಸಿದ ಬಿಜೆಪಿ
- ನೂತನ ಶಾಸಕರುಗಳಿಗೆ ಜವಾಬ್ದಾರಿ ಹಂಚಿದ ರಾಜ್ಯ ಬಿಜೆಪಿ ಪ್ರಮುಖರು
ಲೋಕಸಭೆ ಚುನಾವಣೆಗೆ ಶಾಸಕರಿಗೆ ಗುರಿ ನೀಡುವ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭ ಹಾಗೂ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಿ ಹೊಸ ಜವಾಬ್ದಾರಿಗಳನ್ನು ಹೊರಿಸಲಾಗಿದೆ. ಹಾಗೆಯೇ ವಿಧಾನಾಸಭೆ ಚುನಾವಣಾ ಸಂದರ್ಭದಲ್ಲಿ ಏನೆಲ್ಲ ಮಾಡಬಹುದಿತ್ತು ಎನ್ನುವುದರ ಬಗೆಗೂ ಪರಾಮರ್ಶೆ ನಡೆಯಿತು ಎಂದು ಹೇಳಿದರು.
ಸಂಸತ್ ಚುನಾವಣೆಗೆ ಎದುರು ನೋಡುತ್ತಿರುವ ಹೊತ್ತಿನಲ್ಲಿ, 9 ವರ್ಷ ಪೂರೈಸಿರುವ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಏನೆಲ್ಲ ಕ್ರಮ ಕೈಗೊಳ್ಳಬೇಕು ಎನ್ನುವುದರ ಕುರಿತಂತೆ ಚರ್ಚೆ ಮಾಡಲಾಗಿದೆ ಎಂದರು.
ಈ ಸುದ್ದಿ ಓದಿದ್ದೀರಾ?:ಈ ವರ್ಷವೇ ಪಠ್ಯ ಪರಿಷ್ಕರಣೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ
ಇದೇ ವೇಳೆ ವಿಧಾನಸಭೆ ಪ್ರತಿ ಪಕ್ಷದ ನಾಯಕನ ಆಯ್ಕೆ ಕುರಿತಾಗಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಇಂದಿನ ಸಭೆಯಲ್ಲಿ ಈ ವಿಚಾರ ಚರ್ಚೆಯಾಗಿಲ್ಲ, ಆದರೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ ಎಂದು ತಿಳಿಸಿದರು.