ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.
ಲಂಚ ಪ್ರಕರಣ ಬಯಲಾಗುತ್ತಿದ್ದಂತೆ ಆರೋಪಿ ಮಾಡಾಳ್ ವಿರೂಪಾಕ್ಷಪ್ಪ ತಲೆ ಮರೆಸಿಕೊಂಡಿದ್ದರು. ಅವರನ್ನು ಕಳೆದ ವಾರ ಪೊಲೀಸರು ಬಂಧಿಸಿದ್ದರು. ಮಾರ್ಚ್ 28ರಂದು ಅವರನ್ನು ಲೋಕಾಯುಕ್ತ ವಶಕ್ಕೆ ನ್ಯಾಯಾಲಯ ನೀಡಿತ್ತು. ಇದೀಗ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದೆ.
ಅಲ್ಲದೆ, ಮಾಡಾಳ್ ವಿರೂಪಾಕ್ಷಪ್ಪ ಮತ್ತೊಮ್ಮೆ ಜಾಮೀನು ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 6ರಂದು ಕೈಗೆತ್ತಿಕೊಳ್ಳುವುದಾಗಿ ಹೇಳಿರುವ ನ್ಯಾಯಾಲಯ, ಆಕ್ಷೇಪಣೆ ಅರ್ಜಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೂ ಸೂಚಿಸಿದೆ.
ಪ್ರಕರಣವೇನು?
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್ಡಿಎಲ್) ಸಂಸ್ಥೆಗೆ ಕೆಮಿಕಲ್ ಆಯಿಲ್ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡುವುದಕ್ಕೆ ಪ್ರತಿಯಾಗಿ ಕೋಟ್ಯಂತರ ರೂಪಾಯಿ ಲಂಚಕ್ಕೆ ಮಾಡಾಳ್ ಬೇಡಿಕೆ ಇಟ್ಟಿದ್ದರು. ಗುತ್ತಿಗೆದಾರನಿಂದ ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ‘ರೆಡ್ಹ್ಯಾಂಡ್’ಆಗಿ ಆತನನ್ನು ಹಿಡಿದಿದ್ದರು. ನಂತರ, ಮಾಡಾಳ್ ವಿರೂಪಾಕ್ಷಪ್ಪ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದರು. ಈ ವೇಳೆ, ದಾಖಲೆ ಇಲ್ಲದ ಕ್ಯೋಟ್ಯಂತರ ರೂ. ಹಣ ಪತ್ತೆಯಾಗಿತ್ತು. ಲಂಚ ಪ್ರಕರಣದಲ್ಲಿ ಮಾಡಾಳ್ ಅವರನ್ನು ಎ1 ಆರೋಪಿಯೆಂದು ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಲೋಕಾಯುಕ್ತ ಪೊಲೀಸರು ಬಂಧಿಸುವಷ್ಟರಲ್ಲಿ ಮಾಡಾಳ್ ತಲೆಮರೆಸಿಕೊಂಡಿದ್ದರು. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿ ಮಧ್ಯಂತರ ಜಾಮೀನು ಪಡೆದಿದ್ದರು. ಬಳಿಕ, ಚನ್ನಗಿರಿಯಲ್ಲಿ ಅದ್ದೂರಿ ರೋಡ್ ಶೋ ನಡೆಸಿದ್ದರು. ಈ ಮಧ್ಯೆ, ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿತ್ತು. ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಕಳೆದ ವಾರ ಬಂಧಿಸಿದ್ದರು.