ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಜೆಟ್ ಭಾಷಣದಲ್ಲಿ ಉನ್ನತ ಶಿಕ್ಷಣ ಇಲಾಖೆ ವಿಚಾರವಾಗಿ ವಿಷಯ ಪ್ರಸ್ತಾಪಿಸಿ, “ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ” ಎಂದರು.
ನಕಲಿ ಅಂಕಪಟ್ಟಿ ಹಾವಳಿಗೆ ತಡೆ
“ಬೆಂಗಳೂರಿನಲ್ಲಿರುವ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಯೂನಿವರ್ಸಿಟಿಯನ್ನು (UVCE) ಉನ್ನತೀಕರಣಗೊಳಿಸಲು ಮೂಲಭೂತ ಸೌಕರ್ಯಕ್ಕಾಗಿ 25 ಕೋಟಿ ರೂ. ಅನುದಾನ ಒದಗಿಸಲಾಗುವುದು. ನಕಲಿ ಅಂಕಪಟ್ಟಿ ಹಾವಳಿಯನ್ನು ತಪ್ಪಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಉನ್ನತ ಶಿಕ್ಷಣದ ವಿದ್ಯಾರ್ಥಿಗಳು Academic Bank of Credits ನಲ್ಲಿ ನೋಂದಾಯಿಸಿಕೊಂಡು ಹಾಗೂ ನೇಮಕಾತಿಯಲ್ಲಿ NAD/Digilocker ನಲ್ಲಿನ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲು ಕ್ರಮಕೈಗೊಳ್ಳಲಾಗುವುದು” ಎಂದರು.
“ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮರ್ಥ್ಯ ಹೊಂದಿರುವ 224 ವಸತಿ ನಿಲಯಗಳನ್ನು ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಗುವುದು. ಉನ್ನತ ಶಿಕ್ಷಣ ಇಲಾಖೆಯಡಿ ಎಲ್ಲಾ ಶಿಷ್ಯ ವೇತನ ಕಾರ್ಯಕ್ರಮಗಳನ್ನು ಒಗ್ಗೂಡಿಸಿ ಏಕ ಶಿಷ್ಯ ವೇತನ ಕಾರ್ಯಕ್ರಮದಡಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.
“ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮಪಡಿಸಲು 10 ಸುಶಾಸನ ಸೂಚ್ಯಂಕಗಳನ್ನು (Good Governance Indicators) ರಚಿಸಲಾಗಿದ್ದು, ಇದರನ್ವಯ ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪ್ರೋತ್ಸಾಹ ಧನ ನೀಡಲಾಗುವುದು. ವೃತ್ತಿ ಚೈತನ್ಯ ಯೋಜನೆಯಡಿಯಲ್ಲಿ ಇಲಾಖೆಯ ಸುಮಾರು 7,800 ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ಕಾರ್ಯಕ್ರಮಗಳನ್ನು ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯಲ್ಲಿ 10 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆಯೋಜಿಸಲಾಗುವುದು” ಎಂದು ತಿಳಿಸಿದರು.
ಪಿಎಚ್.ಡಿ : ಏಕರೂಪತೆ ಜಾರಿ
“ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ Ph.D. ಸೀಟುಗಳನ್ನು ಭರ್ತಿ ಮಾಡುವ ವಿಧಾನದಲ್ಲಿ ಏಕರೂಪತೆಯನ್ನು ತರಲಾಗುವುದು. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳ Ph.D. ಸೀಟುಗಳಿಗೆ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಶೇ.40 ಸೀಟುಗಳಿಗೆ ಕೌನ್ಸೆಲಿಂಗ್ ನಡೆಸಲಾಗುವುದು. ಬೆಂಗಳೂರಿನ ಎಸ್.ಕೆ.ಎಸ್.ಜೆ.ಟಿ.ಐ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಜವಳಿ ತಂತ್ರಜ್ಞಾನ ವಿಭಾಗವನ್ನು ರಾಷ್ಟ್ರೀಯ Technical Textile ಅಭಿಯಾನ ಮತ್ತು ಪಿಎಂ-ಮಿತ್ರ ಯೋಜನೆಗಳಡಿ Smart and Technical Textile Centre ಆಗಿ ಉನ್ನತೀಕರಿಸಲಾಗುವುದು” ಎಂದು ಹೇಳಿದರು.
“ರಾಜ್ಯದ ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬ್ರಿಟಿಷ್ ಕೌನ್ಸಿಲ್ ಮತ್ತು ಪ್ರಾದೇಶಿಕ ಆಂಗ್ಲ ಸಂಸ್ಥೆಯ ಸಹಕಾರದೊಂದಿಗೆ ವ್ಯಾವಹಾರಿಕ ಆಂಗ್ಲ ತರಗತಿಗಳನ್ನು ಪ್ರಾರಂಭಿಸಲಾಗುವುದು. ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್ ಪುಸ್ತಕಗಳನ್ನು ಹಾಗೂ ಪಠ್ಯ ವಿಷಯಗಳನ್ನು ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು” ಎಂದರು.