- ಒಕ್ಕಲಿಗರ ವಿರೋಧದ ಬೆನ್ನಲ್ಲೇ ಲಿಂಗಾಯತ ಸಮುದಾಯದಿಂದಲೂ ವಿರೋಧ
- ಹೊಸದಾಗಿ, ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಲು ಶಾಮನೂರು ಆಗ್ರಹ
ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಗುರುವಾರ ಆರೋಪಿಸಿದ್ದಾರೆ. ಈ ಮೂಲಕ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿ ವರದಿಗೆ ಒಕ್ಕಲಿಗರ ಪ್ರಬಲ ವಿರೋಧದ ಬೆನ್ನಲ್ಲೇ ಇದೀಗ ಲಿಂಗಾಯತ ಸಮುದಾಯದಿಂದಲೂ ತೀವ್ರ ವಿರೋಧ ವ್ಯಕ್ತವಾದಂತೆ ಕಾಣುತ್ತಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಮಹಾಸಭಾದ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾಹಿತಿ ನೀಡಿದ ಅವರು, “ನಮ್ಮ ಸಮುದಾಯದ ಮನೆ ಮನೆಗಳಿಗೆ ಹೋಗಿ ಸಮೀಕ್ಷೆ ನಡೆಸಿಲ್ಲ. ಮನೆಯಲ್ಲೇ ಕುಳಿತು ವರದಿ ಸಿದ್ಧಪಡಿಸಲಾಗಿದೆ” ಎಂದು ಆರೋಪಿಸಿದ್ದಾರೆ.
“ಜಾತಿ ಗಣತಿ ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ. ಹಲವರ ಮನೆಗಳಿಗೆ ಭೇಟಿ ನೀಡದೆ ವರದಿ ಸಿದ್ಧಪಡಿಸಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ. ಈ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನ ಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಇದರಿಂದ ಸಮಾಜಕ್ಕೆ ತೀವ್ರ ಸ್ವರೂಪದ ನಷ್ಟವಾಗಲಿದೆ” ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಜಿಲ್ಲಾ, ತಾಲ್ಲೂಕು ಪಂಚಾಯತಿ ಚುನಾವಣೆ | ಸರ್ಕಾರಕ್ಕೆ ನಾಲ್ಕು ವಾರದ ಗಡುವು ನೀಡಿದ ಹೈಕೋರ್ಟ್
“ಜಾತಿ ಜನಗಣತಿ ಲೋಪದೋಷ ಪರಿಹರಿಸಲು ವೀರಶೈವ ಲಿಂಗಾಯತ ಮಹಾಸಭಾ ಒತ್ತಾಯಿಸುತ್ತಿದೆ. ಜನಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಬೇಕು” ಎಂದು ಶಾಮನೂರು ಆಗ್ರಹಿಸಿದ್ದಾರೆ.
“ಎಲ್ಲರ ಒಳಿತು ಬಯಸುವುದು ನಮ್ಮ ಸಮುದಾಯದ ಗುರಿ. ನಾವು ಜಾತಿ ಗಣತಿಯ ವಿರೋಧಿಗಳಲ್ಲ. ಆದರೆ ಯಾವುದೇ ವರದಿ ವೈಜ್ಞಾನಿಕವಾಗಿರಬೇಕು ಎಂಬುದು ನಮ್ಮ ಒತ್ತಾಯ. ಈ ಜಾತಿ ಗಣತಿ ವರದಿ ಈಗಾಗಲೇ 8 ವರ್ಷದಷ್ಟು ಹಳೆಯದಾಗಿದೆ” ಎಂದು ತಿಳಿಸಿದರು.
“ವರದಿಯು ಹಲವು ನ್ಯೂನತೆಗಳಿಂದ ಕೂಡಿದೆ. ಹೊಸದಾಗಿ ಮತ್ತು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಬೇಕು. ಸರ್ಕಾರ ಮತ್ತೊಮ್ಮೆ ಪರಾಮರ್ಶಿಸಿ ಮುಂದಿನ ಕ್ರಮ ಕೈಗೊಳ್ಳಬೇಕು” ಎಂದು ಶಾಮನೂರು ಒತ್ತಾಯಿಸಿದ್ದಾರೆ.